Breaking NewsLatestಮೆಟ್ರೋ

ಮಂಡ್ಯ ಮೈಶುಗರ್ ಕಾರ್ಖಾನೆಗೆ ಬಿಡ್ ಮಾಡಲ್ಲ: ಸಚಿವ ಮುರುಗೇಶ್ ನಿರಾಣಿ

ಬೆಂಗಳೂರು: ಮಂಡ್ಯದ ಮೈಸೂರು ಸಕ್ಕರೆ ಕಾರ್ಖಾನೆ(ಮೈಶುಗರ್)ಯನ್ನು ಪುನಶ್ಚೇತನಗೊಳಿಸುವ ಸಂಬಂಧ ಅಧಿವೇಶನ ಮುಗಿದ ಬಳಿಕ ಮುಖ್ಯಮಂತ್ರಿ ‌ಅಧ್ಯಕ್ಷತೆಯಲ್ಲಿ ಆ ಭಾಗದ ಜನಪ್ರತಿನಿಧಿಗಳು ಹಾಗೂ ರೈತರ ಸಭೆ ಕರೆದು ಸೂಕ್ತವಾದ ತೀರ್ಮಾನವನ್ನು ಕೈಗೊಳ್ಳಲಾಗುವುದೆಂದು ಬೃಹತ್ ಮತ್ತು ಮಧ್ಯಮ ಕೈಗಾರಿಕೆ ‌ಸಚಿವ ಮುರುಗೇಶ್ ನಿರಾಣಿ ಹೇಳಿದ್ದಾರೆ.

ವಿಧಾನಪರಿಷತ್ ನಲ್ಲಿ ನಿಯಮ 330 ರ ಅಡಿ ಸದಸ್ಯರು ಪಾಂಡವಪುರ ಸಕ್ಕರೆ ಕಾರ್ಖಾನೆ ಕುರಿತಾಗಿ ಪ್ರಸ್ತಾಪಿಸಿದ ವಿಷಯಕ್ಕೆ ಸಚಿವ ಶಂಕರ್ ಪಾಟೀಲ್ ಮುನೇನಕೊಪ್ಪ ಪರವಾಗಿ ಸುಧೀರ್ಘ ಉತ್ತರ ನೀಡಿದ ಸಚಿವ ನಿರಾಣಿ, ಅಧಿವೇಶನ ಮುಗಿದ ಬಳಿಕ ಮುಖ್ಯಮಂತ್ರಿ ಬಸವರಾಜ ಬೊಮ್ಮಯಿ ಅವರ ಅಧ್ಯಕ್ಷತೆಯಲ್ಲಿ ಸಭೆ ಕರೆದು ಸೂಕ್ತವಾದ ನಿರ್ಧಾರವನ್ನು ಸರ್ಕಾರ ತೆಗೆದುಕೊಳ್ಳಲಿದೆ ಎಂದರು.

ಒಂದು ಹಂತದಲ್ಲಿ ತಮ್ಮ ಮೇಲೆ ಕೇಳಿ ಬಂದ ಆರೋಪಗಳಿಗೆ ಸದನದಲ್ಲಿ ಭಾವುಕರಾದ ನಿರಾಣಿ ಅವರು, ನಾನು ರೈತರಿಗೆ ಅನುಕೂಲವಾಗಲಿ ಎಂಬ ಕಾರಣಕ್ಕಾಗಿ ಪಾಂಡವಪುರ ಸಕ್ಕರೆ ಕಾರ್ಖಾನೆಯನ್ನು ಭೋಗ್ಯಕ್ಕೆ ಪಡೆದು ಪುನಾರಂಭ ಮಾಡಿದೆ. ಇದರಲ್ಲೂ ನನಗೆ ‘ಕಹಿಅನುಭವ’ ಆಗಿದೆ ಎಂದು ಪರೋಕ್ಷವಾಗಿ ಅಸಮಾಧಾನ ಹೊರಹಾಕಿದರು.

ಯಾವುದೇ ಕಾರಣಕ್ಕೂ ಮೈ ಶುಗರ್ ಫ್ಯಾಕ್ಟರಿ ಬಿಡ್ ಮಾಡುವುದಿಲ್ಲ. ಈ ಬಗ್ಗೆ ಯಾರಿಗೂ ಯಾವುದೇ ರೀತಿಯ ಅನುಮಾನ ಬೇಡ. ಮೈ ಶುಗರ್ ಕಾರ್ಖಾನೆಯನ್ನು ನಾನು ಪಡೆಯುವ ಸಲುವಾಗಿ ಇಲ್ಲಿ ಸಮರ್ಥನೆ ಮಾಡಿಕೊಳ್ಳುತ್ತಿಲ್ಲ. ಕೋವಿಡ್ ಸಂದರ್ಭದಲ್ಲಿ ಯಾರೂ ಹೊರಗೆ ಹೋಗದ ಕಾಲದಲ್ಲಿ ನಾನು ಪಾಂಡವಪುರ
ಕಾರ್ಖಾನೆಯನ್ನು ಪ್ರಾರಂಭ ಮಾಡಿದೆ. ಆದರೂ ನಮಗೆ ಆಪಾದನೆಗಳು ನಿಂತಿಲ್ಲ ಎಂದು ಬೇಸರ ವ್ಯಕ್ತಪಡಿಸಿದರು.

ಇದುವರೆಗೆ ನನಗೆ ಬೋಗ್ಯದ ದಾಖಲಾತಿಗಳೇ ಆಗಿಯೇ ಇಲ್ಲ. ನಂಬಿಕೆಯಿಂದ ನಾನು ಪಾಂಡವಪುರ ಶುಗರ್ ಫ್ಯಾಕ್ಟರಿ ಮೇಲೆ ₹೫೦ ಕೋಟಿ ವೆಚ್ಚ ಮಾಡಿದ್ದೇನೆ.ಲೀಸ್ ಡೀಡ್ ಇಲ್ಲದೆಯೂ ರೈತರಿಗೆ ಅನ್ಯಾಯ ಆಗಬಾರದು ಎಂದು ಕಾರ್ಖಾನೆಯನ್ನು 90 ದಿನಗಳಲ್ಲಿ ಪ್ರಾರಂಭ ಮಾಡಿದೆವು. ಆದರೆ ಪಾಂಡವಪುರಕ್ಕೆ ನಾನು ಬಂದಾಗ ಹಲವರು ನನ್ನ ಮೇಲೆ ಆಪಾದನೆ ಮಾಡಿದರು ಎಂದು ಭಾವುಕರಾದರು.

ನಾನು ಪಾಂಡವಪುರ ಸಕ್ಕರೆ ಕಾರ್ಖಾನೆಯನ್ನು ‌ಪ್ರಾರಂಭ ಮಾಡಿದಾಗ ಇದರಿಂದ ಬಂದ ಲಾಭವನ್ನು ಇಲ್ಲಿಯ ಲಾಭಕ್ಕಾಗಿ ಬಳಸಿಕೊಳ್ಳಲು ನಿರ್ಧಾರ ಮಾಡಲಾಗಿತ್ತು. ನಾಡದೇವತೆ ಚಾಮುಂಡೇಶ್ವರಿ ಮೇಲೆ ಆಣೆ. ಇಲ್ಲಿಂದ ಬಂದ ಲಾಭವನ್ನು ಉತ್ತರ ಕರ್ನಾಟಕಕ್ಕೆ ತೆಗೆದುಕೊಂಡು ಹೋಗುವುದಿಲ್ಲ. ಕೆಲವರು ಸುಖಾಸುಮ್ಮನೆ ಆರೋಪ ಮಾಡುತ್ತಿದ್ದಾರೆ ಎಂದು ಹೇಳಿದರು.

ರಾಜ್ಯದ ಅನೇಕ ಸಕ್ಕರೆ ಕಾರ್ಖಾನೆಗಳು ಇಂದು ನಷ್ಟದಲ್ಲಿದ್ದು ಬೀಗ ಹಾಕುವ ಹಂತಕ್ಕೆ ಬಂದಿವೆ. ಎಂ.ಕೆ.ಹುಬ್ಬಳ್ಳಿ, ಸಂಕೇಶ್ವರ, ರನ್ನ, ಸೇರಿದಂತೆ ಮತ್ತಿತರ ಕಾರ್ಖಾನೆಗಳು ‘ಕೋಮ’ ಸ್ಥಿತಿಗೆ ಬಂದಿವೆ. ಇದಕ್ಕೆಲ್ಲ ಯಾರು ಕಾರಣ ಎಂದು ಪ್ರಶ್ನಿಸಿದರು.

ಹೊರಗಡೆ ಮಾತನಾಡುವುದಕ್ಕೂ ಒಂದು ಕಾರ್ಖಾನೆ ನಡೆಸುವುದಕ್ಕೂ ಸಾಕಷ್ಟು ವ್ಯತ್ಯಾಸವಿದೆ. ಪಾಂಡವಪುರ ಹಾಗೂ ಮೈಶುಗರ್ ಕಾರ್ಖಾನೆಯ ಉದ್ದೇಶವೇ ರೈತರ ಹಿತ ಕಾಪಾಡುವುದು ಎಂದು ತಿಳಿಸಿದರು.

ಸಕಾಲಕ್ಕೆ ಸರಿಯಾಗಿ ರೈತರ ಕಬ್ಬನ್ನು ಅರೆದು ಅವರಿಗೆ ಹಣ ಪಾವತಿಸಬೇಕು. ಜೊತೆಗೆ ಕಾರ್ಮಿಕರಿಗೆ ತಿಂಗಳಿಗೆ ವೇತನವನ್ನು ‌ನೀಡಬೇಕು. ಇಷ್ಟೆಲ್ಲಾ ಮಾಡಿಯೂ ನಾವು ಸುಳ್ಳು ‌ಆರೋಪಗಳನ್ನು ಎದುರಿಸಬೇಕು ಎಂದರು.

ನಿವೃತ್ತ ಅಧಿಕಾರಿ ರಂಗರಾಜನ್ ವರದಿಯ ಪ್ರಕಾರ ಕಾರ್ಖಾನೆ ಒಟ್ಟು ಲಾಭಾಂಶದಲ್ಲಿ ಶೇ 75 ರಷ್ಟನ್ನು ರೈತರು , ಕಾರ್ಮಿಕರು, ಕಾರ್ಖಾನೆಯ ಪುನಶ್ಚೇತನ, ಮೂಲಭೂತ ಸೌಕರ್ಯಗಳ ಬಳಕೆಗೆ ಬಳಸಿಕೊಳ್ಳಬೇಕು ಎಂದು ಹೇಳಿದರು.

ಕೇವಲ ಸರ್ಕಾರದ ಮೇಲೆ ಅವಲಂಬಿತರಾಗದೆ ಕಾರ್ಖಾನೆಯನ್ನು ಆಡಳಿತ ಮಂಡಳಿಯವರು ಮುನ್ನಡೆಸಬೇಕು. ಇಲ್ಲಿರುವ ಲೋಪದೋಷಗಳನ್ನು ಪತ್ತೆ ಮಾಡಿದರೆ, ಎಲ್ಲವೂ ಸರಿ ಹೋಗಲಿದೆ ಎಂದು ಅಭಿಪ್ರಾಯಪಟ್ಟರು

Spread the love

Related Articles

Leave a Reply

Your email address will not be published. Required fields are marked *

Back to top button