Basavraj Bommai : ಸಂಪುಟ ರಚನೆ ನನ್ನ ಮೊದಲ ಆದ್ಯತೆ: ಸಿಎಂ ಬಸವರಾಜ ಬೊಮ್ಮಾಯಿ

ನವದೆಹಲಿ: ಸಿಎಂ ಆದ ಮೊದಲ ಬಾರಿಗೆ ಇದೇ ಮೊದಲ ಬಾರಿಗೆ ದೆಹಲಿಗೆ ಆಗಮಿಸಿರುವ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ, ಸಂಪುಟ ರಚನೆ ಮೊದಲ ಆದ್ಯತೆಯಾಗಿದೆ ಎಂದು ತಿಳಿಸಿದ್ದಾರೆ.
ದೆಹಲಿಯ ಕರ್ನಾಟಕ ಭವನದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಇಂದು ಹೈಕಮಾಂಡ್ ನಾಯಕರನ್ನು ಭೇಟಿಯಾಗಿ ತಮ್ಮನ್ನು ಮುಖ್ಯಮಂತ್ರಿಯಾಗಿ ಆಯ್ಕೆ ಮಾಡಿದ್ದಕ್ಕೆ ಧನ್ಯವಾದ ಹೇಳಲಾಗುವುದು, ಜೊತೆಗೆ ರಾಜ್ಯ ಸಂಪುಟ ರಚನೆಯ ಬಗ್ಗೆಯೂ ಮಾತುಕತೆ ನಡೆಸಲಾಗುವುದು ಎಂದರು.
ಪ್ರಧಾನಮಂತ್ರಿ ನರೇಂದ್ರ ಮೋದಿ ಹಾಗೂ ಕೇಂದ್ರ ಗೃಹ ಸಚಿವ ಅಮಿತ್ ಶಾ ಭೇಟಿ ವೇಳೆ ಸಂಪುಟ ರಚನೆ ಬಗ್ಗೆ ಯಾವುದೇ ಚರ್ಚೆ ನಡೆಸುವುದಿಲ್ಲ. ಕೇಂದ್ರ ಸಚಿವ ಪ್ರಹ್ಲಾದ್ ಜೋಶಿ, ಲೋಕಸಭಾ ಸ್ಪೀಕರ್ ಓಂ ಬಿರ್ಲಾ ಅವರನ್ನು ಭೇಟಿ ಮಾಡಿ ಮಾತುಕತೆ ನಡೆಸಿದರು.
ಸಂಜೆ ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ ಜೆ.ಪಿ. ನಡ್ಡ ಅವರನ್ನು ಭೇಟಿಯಾಗಲಿದ್ದು ಅವರೊಂದಿಗೆ ಕ್ಯಾಬಿನೆಟ್ ರಚನೆಯ ಬಗ್ಗೆ ಸಮಾಲೋಚನೆ ನಡೆಸುವುದಾಗಿ ತಿಳಿಸಿದರು.
ಕೊರೊನಾ ಹೆಚ್ಚಾದರೆ ಡಿಸಿ, ಎಸ್ಪಿಗಳೇ ಜವಬ್ದಾರಿ
ಈಗಾಗಲೇ ಹಲವು ಜಿಲ್ಲಾಧಿಕಾರಿಗಳ ಜೊತೆಗೆ ಮಾತನಾಡಿದ್ದೇನೆ. ಗಡಿ ಜಿಲ್ಲೆಗಳ ಡಿಸಿಗಳ ಜೊತೆಗೆ ಮಾತನಾಡಿದ್ದೇನೆ. ಕೊರೊನಾ ಹೆಚ್ಚಾದರೆ ಡಿಸಿ, ಎಸ್ಪಿಗಳೇ ಜವಬ್ದಾರಿ ಎಂದು ಹೇಳಿದ್ದೇನೆ. ರೈಲು ಮಾರ್ಗದಿಂದ ಬರುವವರನ್ನು ಪರೀಕ್ಷೆ ಮಾಡಬೇಕು ಎಂದು ಸಿಎಂ ಬಸವರಾಜ ಬೊಮ್ಮಾಯಿ ಹೇಳಿದರು.
