
ಪಶ್ಚಿಮ ಗೋದಾವರಿ: ಆಂಧ್ರಪ್ರದೇಶದ ಪಶ್ಚಿಮ ಗೋದಾವರಿ ಜಿಲ್ಲೆಯಲ್ಲಿ ಭೀಕರ ದುರಂತ ಸಂಭವಿಸಿದೆ. ಇಲ್ಲಿನ ಜಂಗಾರೆಡ್ಡಿಗುಡ್ಡಂ ಎಂಬಲ್ಲಿ ಕೇವಲ ಎರಡು ದಿನಗಳ ಅಂತರದಲ್ಲಿ 15 ಮಂದಿ ದಾರುಣವಾಗಿ ಸಾವನ್ನಪ್ಪಿದ್ದಾರೆ. ಕಳ್ಳಭಟ್ಟಿ ಸೇವನೆಯಿಂದಲೇ ಈ ಘಟನೆ ನಡೆದಿದೆ ಎನ್ನಲಾಗುತ್ತಿದೆ.
ಸಾವನ್ನಪ್ಪಿದ ಎಲ್ಲರಿಗೂ ವಾಂತಿ, ಬೇಧಿ ಹಾಗೂ ಹೊಟ್ಟೆನೋವು ಕಾಣಿಸಿಕೊಂಡಿತ್ತು. ಎಲ್ಲರೂ ಆಸ್ಪತ್ರೆಗೆ ದಾಖಲಾಗಿದ್ದರು. ಆದ್ರೆ ಚಿಕಿತ್ಸೆ ಫಲಕಾರಿಯಾದೆ ಎರಡು ದಿನದ ಅಂತರದಲ್ಲಿ 15 ಮಂದಿ ಸಾವನ್ನಪ್ಪಿದ್ದಾರೆ. ಇದಕ್ಕೆ ಕಲಬೆರಕೆ ಮದ್ಯವೇ ಕಾರಣ ಎಂದು ಆರೋಪಿಸಲಾಗಿದೆ.
ಮೃತಪಟ್ಟ 15 ಜನರಲ್ಲಿ 10 ಮಂದಿ ಒಂದೇ ಬೀದಿಯವರು ಎಂದು ತಿಳಿದುಬಂದಿದೆ. ಇಲ್ಲಿ ಬುಟ್ಟಾಯಗುಡೆಂ ರಸ್ತೆಯ ಗಾಂಧಿಬೊಮ್ಮ ಸೆಂಟರ್ ಬೀದಿಯ ಹತ್ತು ಮಂದಿ ಸಾವನ್ನಪ್ಪಿದ್ದಾರೆ ಎಂದು ಗೊತ್ತಾಗಿದೆ.
ಈ ವಿಷಯ ಗೊತ್ತಾಗುತ್ತಿದ್ದಂತೆ ಅಬಕಾರಿ ಅಧಿಕಾರಿಗಳು ಸ್ಥಳಕ್ಕೆ ಆಗಮಿಸಿ ಪರಿಶೀಲನೆ ನಡೆಸಿದರು. ಜೊತೆಗೆ ಸುತ್ತಮುತ್ತ ಪ್ರದೇಶಗಳಲ್ಲಿ ಅಕ್ರಮವಾಗಿ ಕಳ್ಳಭಟ್ಟಿ ತಯಾರಿಸುತ್ತಿದ್ದ ಘಟಕಗಳ ಮೇಲೆ ದಾಳಿ ನಡೆಸಿದರು. ಅವುಗಳನ್ನು ಧ್ವಂಸ ಮಾಡಿದ್ದಾರೆ.
