ವೀಕೆಂಡ್ , ರಾತ್ರಿ ಕರ್ಫ್ಯೂ ಮುಂದುವರಿಕೆ, ಶಾಲೆ ಬಂದ್ ಅಧಿಕಾರ ಡಿಸಿಗೆ: ಸರ್ಕಾರದ ನಿರ್ಧಾರ

ಬೆಂಗಳೂರು: ರಾಜ್ಯದಲ್ಲಿ ಕೋವಿಡ್ ಪ್ರಕರಣಗಳು ಮತ್ತಷ್ಟು ಹೆಚ್ಚುತ್ತಿರುವ ಹಿನ್ನೆಲೆಯಲ್ಲಿ ಇನ್ನಷ್ಟು ಬಿಗಿ ಕ್ರಮಗಳನ್ನು ಕೈಗೊಳ್ಳಲು ರಾಜ್ಯ ಸರ್ಕಾರಕ್ಕೆ ನಿರ್ಧರಿಸಿದೆ. ಹೊಸ ನಿಯಮ ನಾಳೆಯಿಂದಲೇ ಜಾರಿಗೆ ಬರಲಿವೆ. ರಾಜ್ಯದಲ್ಲಿ ಕೋವಿಡ್ ಸ್ಥಿತಿಗತಿ ಕುರಿತು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅಧ್ಯಕ್ಷತೆಯಲ್ಲಿ ಬೆಂಗಳೂರಿನ ಅವರ ನಿವಾಸದಿಂದ ನಡೆದ ವರ್ಚ್ಯುವೆಲ್ ಸಭೆ ನಂತರ ಗೃಹ ಸಚಿವ ಆರಗ ಜ್ಱಆನೇಂದ್ರ ಈ ವಿಷಯ ತಿಳಿಸಿದರು. ಶಾಲೆ ಮತ್ತು ಹಾಸ್ಟೆಲ್ ಗಳಲ್ಲಿ ಕೊರೋನಾ ಪ್ರಕರಣಗಳು ಹೆಚ್ಚಾದರೆ ಅವುಗಳನ್ನು ಬಂದ್ ಮಾಡುವ ಅಧಿಕಾರ ಜಿಲ್ಲಾಧಿಕಾರಿಗೆ ನೀಡಲಾಗುವುದು. ವೈಕುಂಠ ಏಕದಶಿ ಸಂಪ್ರದಾಯದಂತೆ ಪೂಜೆ ಮಾಡಲು ಅವಕಾಶ ಕಲ್ಪಿಸಲಾಗುವುದು, ಏಕಾದಶಿಯಂದು ಹೆಚ್ಚಿನ ಜನ ಸೇರದಂತೆ ಕ್ರಮ ಜರುಗಿಸಲಾಗುವುದು ಎಂದರು.
ಅಂತೆಯೇ ಯಾವುದೇ ಪ್ರತಿಭಟನೆಗಳಲ್ಲಿ ಹಾಗೂ ಮಾರುಕಟ್ಟೆಗಳಲ್ಲಿ ಹೆಚ್ಚಿನ ಜನ ಸೇರದಂತೆ ಕ್ರಮ ಜರುಗಿಸಲಾಗುವುದು. ಮಾರುಕಟ್ಟೆಗಳನ್ನು ವಿಕೇಂದ್ರಿಕರಿಸಲು ಸಭೆ ನಿರ್ಧರಿಸಲಾಗಿದೆ ಎಂದು ಅವರು ತಿಳಿಸಿದರು.
ಹಿರಿಯ ನಾಗರಿಕರಿಗೆ ಬೂಸ್ಟರ್ ಡೋಸ್ ಇನ್ನಷ್ಟು ಹೆಚ್ಚಿಸಲಾಗುವುದು, ಹೋಂ ಐಸೋಲೇಷನ್ ನಲ್ಲಿರುವವರ ಮೇಲೆ ಹೆಚ್ಚಿ ನಿಗಾವಹಿಸಲಾಗುವುದು ಆಸ್ಪತ್ರೆಗಳಲ್ಲಿ ಮಕ್ಕಳ ವಾರ್ಡ್ ಹೆಚ್ಚಿಸಿ, ಮಕ್ಕಳಿಗೆ ಹಾಸಿಗೆಗಳನ್ನು ಮೀಸಲಿಡಲು ತೀರ್ಮಾನಿಸಲಾಗಿದೆ. ಪ್ರತಿಯೊಬ್ಬರು ಮಾಸ್ಕ್ ದೈಹಿಕ ಅಂತರ ಕಡ್ಡಾಯವಾಗಿ ಪಾಲಿಸಬೇಕು ಎಂದರು.
ಬೆಂಗಳೂರಿನಲ್ಲಿ ಈಗ ನಿತ್ಯ 1 ಲಕ್ಷ ಕೋವಿಡ್ ಪರೀಕ್ಷೆಗಳನ್ನು ನಡೆಸಲಾಗುತ್ತಿದೆ ಅದನ್ನು ಕನಿಷ್ಠ ಒಂದೂವರೆ ಲಕ್ಷಕ್ಕೆ ಏರಿಸಲು ನಿರ್ಧರಿಸಲಾಗಿದೆ ಎಂದು ಅವರು ಹೇಳಿದರು.
ಕಾಂಗ್ರೆಸ್ ಪಾದಯಾತ್ರೆ ಕುರಿತ ಪ್ರಶ್ನೆಗೆ ಪ್ರತಿಕ್ರಿಯಿಸಿ, ಸಂಬಂಧಿಸಿದವರ ವಿರುದ್ಧ ಸೂಕ್ತಕಾಲದಲ್ಲಿ ಸೂಕ್ತ ಕ್ರಮ ಜರುಗಿಸಲಾಗುವುದು ಎಂದು ಸಚಿವ ಆರಗ ಹೇಳಿದರು.
