ವಿತ್ತ ಸಚಿವೆಯಿಂದ 2022-23ನೇ ಸಾಲಿನ ಜಮ್ಮು ಕಾಶ್ಮೀರದ ಬಜೆಟ್!

ನವದೆಹಲಿ: ಸಂಸತ್ತಿನಲ್ಲಿ ಎರಡನೇ ಹಂತದ ಬಜೆಟ್ ಅಧಿವೇಶನ ಆರಂಭವಾಗಲಿದ್ದು, ಕೇಂದ್ರ ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ ಅವರು 2022-23ನೇ ಸಾಲಿನ ಜಮ್ಮು ಮತ್ತು ಕಾಶ್ಮೀರದ ಬಜೆಟ್ ಮಂಡಿಸಲಿದ್ದಾರೆ.
2022-23 ನೇ ಸಾಲಿನ ಜಮ್ಮು ಮತ್ತು ಕಾಶ್ಮೀರ ಕೇಂದ್ರಾಡಳಿತ ಪ್ರದೇಶದ ಅಂದಾಜು ಸ್ವೀಕೃತಿಗಳು ಮತ್ತು ವೆಚ್ಚಗಳನ್ನು ನಿರ್ಮಲಾ ಸೀತಾರಾಮನ್ ಅವರು ಅಧಿಕೃತವಾಗಿ ಪ್ರಸ್ತುತಪಡಿಸಲಿದ್ದಾರೆ. ಅಲ್ಲದೇ ಸದನದಲ್ಲಿ ಪ್ರತಿಪಕ್ಷಗಳು ಹೆಚ್ಚುತ್ತಿರುವ ನಿರುದ್ಯೋಗ, ಉದ್ಯೋಗಿಗಳ ಭವಿಷ್ಯ ನಿಧಿ ಮೇಲಿನ ಬಡ್ಡಿದರದಲ್ಲಿ ಕಡಿತ ಮತ್ತು ಯುದ್ಧ ಪೀಡಿತ ಉಕ್ರೇನ್ನಲ್ಲಿ ಸಿಲುಕಿರುವ ಭಾರತೀಯರ ಸ್ಥಳಾಂತರ ಸೇರಿದಂತೆ ಹಲವಾರು ವಿಷಯಗಳನ್ನು ಪ್ರಸ್ತಾಪಿಸುವ ನಿರೀಕ್ಷೆಯಿದೆ.
ಇಂದು ಎರಡನೇ ಹಂತದ ಬಜೆಟ್ ಅಧಿವೇಶನ ಆರಂಭವಾಗಲಿದ್ದು, ಬಜೆಟ್ ಅಧಿವೇಶನದ ದ್ವಿತೀಯಾರ್ಧವು ಏಪ್ರಿಲ್ 8 ರಂದು ಮುಕ್ತಾಯಗೊಳ್ಳಲಿದೆ. ಬಜೆಟ್ ಅಧಿವೇಶನದ ಮೊದಲಾರ್ಧವು ಜನವರಿ 31 ರಂದು ಪ್ರಾರಂಭವಾಗಿ ನಂತರ ಫೆಬ್ರವರಿ 11 ರಂದು ಮುಕ್ತಾಯವಾಯಿತು.
ಈ ವಿಚಾರವಾಗಿ ಚರ್ಚಿಸಲು ಭಾನುವಾರ ಕಾಂಗ್ರೆಸ್ ಪ್ರತಿಪಕ್ಷಗಳ ಜೊತೆ ಸಭೆ ನಡೆಸಲು ಕರೆದಿತ್ತು. ಆದರೆ ಈ ಬಗ್ಗೆ ಕಾಂಗ್ರೆಸ್ ಆತಂಕ ವ್ಯಕ್ತಪಡಿಸಿದೆ. ವಿಧಾನಸಭೆ ಚುನಾವಣೆ ಫಲಿತಾಂಶದ ನಂತರ ರಾಜಕೀಯ ಪರಿಸ್ಥಿತಿ ಬದಲಾಗಿದ್ದು, ಕಾಂಗ್ರೆಸ್ ಸಭೆ ಕರೆದರೆ ಕೆಲವು ಪಕ್ಷಗಳು ಸೇರುವುದಿಲ್ಲ ಎಂದು ರಾಜ್ಯಸಭೆಯ ವಿರೋಧ ಪಕ್ಷದ ನಾಯಕ ಮಲ್ಲಿಕಾರ್ಜುನ ಖರ್ಗೆ ಅವರು ಅನುಮಾನವನ್ನು ವ್ಯಕ್ತಪಡಿಸಿದ್ದಾರೆ ಎಂದು ಹೇಳಲಾಗುತ್ತಿದೆ.
