ಕವಿ ಸಿದ್ದಲಿಂಗಯ್ಯ ಸೇರಿದಂತೆ ಐವರು ಕನ್ನಡಿಗರು 2022ರ ಪದ್ಮ ಪ್ರಶಸ್ತಿಗೆ ಭಾಜನ

ನವದೆಹಲಿ: ಗಣರಾಜ್ಯೋತ್ಸವದ ಪ್ರಯುಕ್ತ ಕವಿ ಸಿದ್ದಲಿಂಗಯ್ಯ ಸೇರಿದಂತೆ ರಾಜ್ಯದ ಐವರಿಗೆ 2022ನೇ ಸಾಲಿನ ಪದ್ಮ ಪ್ರಶಸ್ತಿಗಳನ್ನು ಮಂಗಳವಾರ ರಾತ್ರಿ ಕೇಂದ್ರ ಸರ್ಕಾರ ಪ್ರಕಟಿಸಿದೆ. ನಾಲ್ಕು ಮಂದಿಗೆ ಪದ್ಮ ವಿಭೂಷಣ,17 ಮಂದಿಗೆ ಪದ್ಮಭೂಷಣ ಹಾಗೂ 107 ಮಂದಿಗೆ ಪದ್ಮ ಶ್ರೀ ಪ್ರಶಸ್ತಿ ಘೋಷಣೆಯಾಗಿದೆ. ಸೇನಾಪಡೆಗಳ ಮುಖ್ಯಸ್ಥರಾಗಿದ್ದ ಇತ್ತೀಚೆಗೆ ತಮಿಳುನಾಡಿನಲ್ಲಿ ಹೆಲಿಕಾಪ್ಟರ್ ದುರಂತದಲ್ಲಿ ಮೃತಪಟ್ಟ ಬಿಪಿನ್ ರಾವತ್, ಉತ್ತರ ಪ್ರದೇಶದ ಮಾಜಿ ಸಿಎಂ ಕಲ್ಯಾಣ್ ಸಿಂಗ್ ಅವರಿಗೆ ಮರಣೋತ್ತರವಾಗಿ ಪದ್ಮವಿಭೂಷಣ ಗೌರವ; ಒಲಂಪಿಕ್ ಚಿನ್ನದ ಪದಕ ವಿಜೇತ ನೀರಜ್ ಚೋಪ್ರಾಗೆ ಪದ್ಮಶ್ರೀ ಪ್ರಶಸ್ತಿ ಪ್ರಕಟಿಸಲಾಗಿದೆ.
ಉಳಿದಂತೆ ಕರ್ನಾಟಕದ ಕವಿ, ಸಾಹಿತಿ ಸಿದ್ದಲಿಂಗಯ್ಯ ಅವರು ಸಾಹಿತ್ಯ ಮತ್ತು ಶಿಕ್ಷಣ ಕ್ಷೇತ್ರಕ್ಕೆ ಸಲ್ಲಿಸಿದ ಸೇವೆಯನ್ನು ಪರಿಗಣಿಸಿ ಮರಣೋತ್ತರವಾಗಿ ಪದ್ಮ ಶ್ರೀ ಪ್ರಶಸ್ತಿಯನ್ನು ಪ್ರಕಟಿಸಲಾಗಿದೆ. ವಿಜ್ಞಾನ ಮತ್ತು ಇಂಜಿನಿಯರಿಂಗ್ ವಿಭಾಗದಲ್ಲಿ ಸುಬ್ಬಣ್ಣ ಅಯ್ಯಪ್ಪನ್, ಕಲಾ ಕ್ಷೇತ್ರ ವಿಭಾಗದಲ್ಲಿ ಹೆಚ್.ಆರ್.ಕೇಶವಮೂರ್ತಿ, ಕೃಷಿ ಕ್ಷೇತ್ರ ವಿಭಾಗದಲ್ಲಿ ಅಮೈ ಮಹಾಲಿಂಗ ನಾಯ್ಕ ಹಾಗೂ ಅಬ್ದುಲ್ ಖಾದರ್ ನಡಕಟ್ಟಿನ ಅವರಿಗೆ ಆವಿಷ್ಕಾರ ಕ್ಷೇತ್ರ ವಿಭಾಗದಲ್ಲಿ ಪದ್ಮಶ್ರೀ ಪ್ರಶಸ್ತಿಗೆ ಭಾಜನರಾಗಿದ್ದಾರೆ.
ರಾಷ್ಟ್ರಪತಿ ರಾಮನಾಥ್ ಕೋವಿಂದ್ ಪ್ರಶಸ್ತಿ ಪ್ರದಾನ ಮಾಡಲಿದ್ದಾರೆ. ನಡೆದಾಡುವ ದೇವರು ಎಂದೇ ಹೆಸರಾಗಿದ್ದ ತುಮಕೂರಿನ ಸಿದ್ದಗಂಗಾ ಮಠದ ದಿವಂಗತ ಶಿವಕುಮಾರ ಸ್ವಾಮೀಜಿ ಅವರಿಗೆ ಈ ಬಾರಿಯೂ ಪದ್ಮ ಪ್ರಶಸ್ತಿ ಕೈತಪ್ಪಿದೆ.
