ಪಿಎಂ ಭದ್ರತಾಲೋಪ: ದಾಖಲೆಗಳ ವಶಕ್ಕೆ ಸುಪ್ರೀಂಕೋರ್ಟ್ ನಿರ್ದೇಶನ

ನವದೆಹಲಿ : ಪ್ರಧಾನಿ ನರೇಂದ್ರ ಮೋದಿ ಅವರ ಇತ್ತೀಚಿನ ಪಂಜಾಬ್ ಭೇಟಿ ಸಮಯದಲ್ಲಿ ಭದ್ರತೆ ಕುರಿತಂತೆ ಪಂಜಾಬ್ ಸರ್ಕಾರ, ಪೊಲೀಸ್ ಮತ್ತು ಕೇಂದ್ರ ಏಜೆನ್ಸಿಗಳಿಂದ ಮಾಡಲಾಗಿದ್ದ ಭದ್ರತಾ ವ್ಯವಸ್ಥೆಗಳಿಗೆ ಸಂಬಂಧಿಸಿದ ಎಲ್ಲ ದಾಖಲೆಗಳನ್ನು ತಕ್ಷಣವೇ ಪಡೆದುಕೊಳ್ಳುವಂತೆ ಪಂಜಾಬ್ ಮತ್ತು ಹರಿಯಾಣ ಹೈಕೋರ್ಟ್ನ ರಿಜಿಸ್ಟ್ರಾರ್ ಜನರಲ್ ಅವರಿಗೆ ಶುಕ್ರವಾರ ಸುಪ್ರೀಂ ಕೋರ್ಟ್ ಸೂಚಿಸಿದೆ.
ಮುಖ್ಯ ನ್ಯಾಯಮೂರ್ತಿ ಎನ್.ವಿ. ರಮಣ ನೇತೃತ್ವದ ಪೀಠವು ಪಂಜಾಬ್ ಮತ್ತು ಕೇಂದ್ರ ಸರ್ಕಾರಗಳನ್ನು ಪ್ರತಿನಿಧಿಸುವ ವಕೀಲರಿಗೆ ಕೇಂದ್ರ ಮತ್ತು ರಾಜ್ಯ ಪ್ರತ್ಯೇಕವಾಗಿ ರಚಿಸಿರುವ ತನಿಖಾ ಸಮಿತಿಯನ್ನು ಮುಂದಿನ ವಿಚಾರಣೆಯವರೆಗೆ ಅಂದರೆ ಸೋಮವಾರದವರೆಗೆ ತಡೆಹಿಡಿಯುವಂತೆಯೂ ಕೋರ್ಟ್ ಹೇಳಿದೆ.
ಪಂಜಾಬ್ನಲ್ಲಿ ಪ್ರಧಾನಿ ಮೋದಿಯವರ ಭದ್ರತೆಯಲ್ಲಿನ ಉಲ್ಲಂಘನೆಯ ಬಗ್ಗೆ ಸಮಗ್ರ ತನಿಖೆ ಮತ್ತು ಭವಿಷ್ಯದಲ್ಲಿ ಇಂತಹ ಘಟನೆ ನಡೆಯದಂತೆ ಖಚಿತಪಡಿಸಿಕೊಳ್ಳುವಂತೆ ವಕೀಲರರೊಬ್ಬರು ಸುಪ್ರೀಂ ಕೋರ್ಟ್ ಮೊರೆ ಹೋಗಿದ್ದರು .
ಪಂಜಾಬ್ನ ಫಿರೋಜ್ಪುರದಲ್ಲಿನ ಪ್ರಧಾನಿ ಭದ್ರತೆಯಲ್ಲಿ ಗಂಭೀರ ಲೋಪವಾಗಿದೆ ಎಂದು ಆರೋಪಿಸಿದ್ದ ಮನವಿಯ ವಿಚಾರಣೆಗೆ ಕೋರ್ಟ್ ಕೈಗೆತ್ತಿಕೊಂಡಿದೆ.
