ಸುರಕ್ಷಿತ ಕುಡಿಯುವ ನೀರು ಪೂರೈಸಲು ಕ್ರಮಕ್ಕೆ ಡಿಸಿಗೆ ಮನವಿ

ದೇವನಹಳ್ಳಿ: ಸುರಕ್ಷಿತ ಕುಡಿಯುವ ನೀರನ್ನು ಪೂರೈಸಲು ಕ್ರಮ ಕೈಗೊಳ್ಳಬೇಕು ಎಂದು ಶಾಶ್ವತ ನೀರಾವರಿ ಹೋರಾಟ ಸಮಿತಿಯ ವತಿಯಿಂದ ಜಿಲ್ಲಾಧಿಕಾರಿ ಕೆ ಶ್ರೀನಿವಾಸ್ ಅವರಿಗೆ ಮನವಿ ನೀಡಲಾಯಿತು
ತಾಲೂಕಿನಲ್ಲಿ ಕುಡಿಯುವ ನೀರಿಗಾಗಿ ಕೊರೆಸಿರುವ ಬಿದಲೂರು, ಆವತಿ ಮತ್ತು ಗೊಡ್ಲುಮುದ್ದೇನಹಳ್ಳಿಗಳ 5 ಕೊಳವೆ ಬಾವಿಗಳ ನೀರನ್ನು ಪ್ರಾಯೋಗಿಕ ಪರೀಕ್ಷೆಗೆ ಒಳಪಡಿಸಿದಾಗ ವಿಕಿರಣ ಪೂರಿತ ಯುರೇನಿಯಂ ಅಂಶ ಪತ್ತೆಯಾಗಿದೆ. ಇದರಿಂದ ಜನರ ಆರೋಗ್ಯದ ಮೇಲೆ ಗಂಭೀರವಾದ ಪರಿಣಾಮ ಉಂಟಾಗುವುದರಿಂದ ಈ ಕೂಡಲೇ ಸುರಕ್ಷಿತ ಕುಡಿಯುವ ನೀರಿನ ಪೂರೈಕೆಗೆ ಕ್ರಮ ಕೈಗೊಳ್ಳಬೇಕು. ಗ್ರಾಮಾಂತರ ಜಿಲ್ಲೆಯ ಇತರ ಭಾಗಗಳಲ್ಲಿಯೂ ನೀರಿನ ಪರೀಕ್ಷೆ ನಡೆಸಬೇಕು ಎಂದು ಶಾಶ್ವತ ನೀರಾವರಿ ಹೋರಾಟ ಸಮಿತಿಯ ಅಧ್ಯಕ್ಷ ಮತ್ತು ಪದಾಧಿಕಾರಿಗಳು ಜಿಲ್ಲಾಧಿಕಾರಿಗಳಿಗೆ ಮನವಿ ನೀಡಿದರು.
ಭಾರತೀಯ ವಿಜ್ಞಾನ ಸಂಸ್ಥೆಯ ಸಂಶೋಧನಾ ವಿಜ್ಞಾನಿಗಳು ನಡೆಸಿದ ಅಧ್ಯಯನದಲ್ಲಿ ಕುಡಿಯುವ ನೀರಿನಲ್ಲಿ ಯುರೇನಿಯಂ ಅಂಶವು ಅಪಾಯದ ಮಟ್ಟ ಮೀರಿದ ಪ್ರಮಾಣದಲ್ಲಿ ಇರುವುದು ಪತ್ತೆಯಾದ ಹಿನ್ನೆಲೆಯಲ್ಲಿ ಗ್ರಾಮಾಂತರ ಭಾಗದ ಪ್ರತಿಯೊಂದು ಕೊಳವೆ ಬಾವಿಗಳ ನೀರನ್ನು ಕೂಡ ಪರೀಕ್ಷೆಗೆ ಒಳ ಪಡಿಸಬೇಕು ಎಂದು ಸಮಿತಿಯ ಅಧ್ಯಕ್ಷ ಆಂಜನೇಯ ರೆಡ್ಡಿ ಆಗ್ರಹಿಸಿದರು.
ಕುಡಿಯುವ ನೀರಿನಲ್ಲಿ ಯುರೇನಿಯಂ ವಿಕಿರಣದ ಅಂಶ ಇರುವುದರಿಂದ ಇಂತಹ ನೀರನ್ನು ಉಪಯೋಗಿಸಿದರೆ ಮೂತ್ರಪಿಂಡ ಖಾಯಿಲೆಗೆ, ಕ್ಯಾನ್ಸರ್, ಪಾರ್ಶ್ವವಾಯು, ನವಜಾತ ಶಿಶುಗಳ ಮರಣ ಮುಂತಾದ ಮಾರಣಾಂತಿಕ ಕಾಯಿಲೆಗಳು ಬಾಧಿಸುವ ಅಪಾಯವಿದೆ ಎಂದು ದೊಡ್ಡ ತುಮಕೂರು ಗ್ರಾಮ ಪಂಚಾಯಿತಿಯ ಮಾಜಿ ಅಧ್ಯಕ್ಷ ಮಂಜುನಾಥ್ ಆತಂಕ ವ್ಯಕ್ತಪಡಿಸಿದರು.
