ಶಿವಕುಮಾರ ಸ್ವಾಮೀಜಿಗಳ 115ನೇ ಜಯಂತೋತ್ಸವ

ತುಮಕೂರು: ಡಾ. ಶ್ರೀ ಶಿವಕುಮಾರ ಸ್ವಾಮೀಜಿ 115ನೇ ಜಯಂತೋತ್ಸವ ಕಾರ್ಯಕ್ರಮ ಸಿದ್ದಗಂಗಾ ಮಠದ ಆವರಣದಲ್ಲಿ ಇಂದು ಅದ್ಧೂರಿಯಾಗಿ ನಡೆಯಲಿದೆ. ಕಾರ್ಯಕ್ರಮದಲ್ಲಿ ಕೇಂದ್ರ ಗೃಹ ಸಚಿವ ಅಮಿತ್ ಶಾ ಭಾಗಿ ಆಗಲಿದ್ದಾರೆ. ಅಮಿತ್ ಶಾ ಬೆಳಗ್ಗೆ 11ಕ್ಕೆ ತುಮಕೂರು ವಿವಿಯ ಹೆಲಿಪ್ಯಾಡ್ಗೆ ಆಗಮಿಸಲಿದ್ದಾರೆ. ಬಳಿಕ ರಸ್ತೆ ಮಾರ್ಗವಾಗಿ ಸಿದ್ದಗಂಗಾ ಮಠದತ್ತ ಪ್ರಯಾಣ ಮಾಡಲಿದ್ದಾರೆ. ಬೆಳಗ್ಗೆ 11.30ರ ಸುಮಾರಿಗೆ ಸಿದ್ದಗಂಗಾ ಮಠಕ್ಕೆ ಭೇಟಿ ನೀಡಲಿದ್ದು ಶಿವಕುಮಾರ ಶ್ರೀಗಳ ಗದ್ದುಗೆಗೆ ಪೂಜೆ ಸಲ್ಲಿಸಲಿದ್ದಾರೆ. ಬಳಿಕ ವೇದಿಕೆ ಕಾರ್ಯಕ್ರಮದಲ್ಲಿ ಅಮಿತ್ ಶಾ ಭಾಗಿ ಆಗಲಿದ್ದಾರೆ. ಬೆಳಗ್ಗೆ 11 ರಿಂದ 1 ಗಂಟೆಯವರೆಗೆ ಕಾರ್ಯಕ್ರಮ ನಡೆಯಲಿದೆ. ಕಾರ್ಯಕ್ರಮದಲ್ಲಿ ಸುತ್ತೂರು ಶ್ರೀಗಳು, ಸಿಎಂ ಬಸವರಾಜ ಬೊಮ್ಮಾಯಿ, ಕೇಂದ್ರ ಸಚಿವರಾದ ಪ್ರಲ್ಹಾದ್ ಜೋಶಿ, ಭಗವಂತ್ ಖೂಬಾ, ಸಚಿವರು, ಸಂಸದರು ಸೇರಿದಂತೆ ಹಲವು ಗಣ್ಯರು ಭಾಗಿ ಆಗಲಿದ್ದಾರೆ. ವೇದಿಕೆ ಮೇಲೆ ಕೂರಲು 22 ಗಣ್ಯರಿಗೆ ಆಸನದ ವ್ಯವಸ್ಥೆ ಮಾಡಲಾಗಿದೆ.
ಸಿದ್ದಗಂಗಾ ಮಠದ ಆವರಣದಲ್ಲಿ ಇಂದು ನಡೆಯವ ಅದ್ಧೂರಿ ಕಾರ್ಯಕ್ರಮಕ್ಕೆ ಮಠದಲ್ಲಿ ‘ನಡೆದಾಡುವ ಬಸವ ಭಾರತ ವೇದಿಕೆ’ ನಿರ್ಮಾಣ ಮಾಡಲಾಗಿದೆ. ಸಿದ್ದಗಂಗಾ ಮಠದ ಸಿದ್ದಲಿಂಗ ಶ್ರೀಗಳ ನೇತೃತ್ವದಲ್ಲಿ ಕಾರ್ಯಕ್ರಮ ನಡೆಯಲಿದೆ. ವೇದಿಕೆ ಮುಂಭಾಗ ಒಟ್ಟು 10 ಸಾವಿರಕ್ಕೂ ಹೆಚ್ಚು ಆಸನ ವ್ಯವಸ್ಥೆ ಮಾಡಲಾಗಿದೆ.
