ಬಿಎಸ್ಎನ್ಎಲ್ ಟವರ್ ಗಳಿಗೆ ಅನಿಯಮಿತ ವಿದ್ಯುತ್ ಪೂರೈಕೆ: ಕೇಂದ್ರ ಸಚಿವೆ ಶೋಭಾ ಕರಂದ್ಲಾಜೆ

ಚಿಕ್ಕಮಗಳೂರು: ಬಿಎಸ್ಎನ್ಎಲ್ ಟವರ್ ಗಳಿಗೆ ದಿನದ ೨೪ ಗಂಟೆಗಳ ಕಾಲವೂ ಅನಿಯಮಿತವಾಗಿ ವಿದ್ಯುತ್ ಸರಬರಾಜು ಮಾಡುವಂತೆ ಕೇಂದ್ರ ಮತ್ತು ರೈತರ ಕಲ್ಯಾಣ ರಾಜ್ಯ ಸಚಿವೆ ಶೋಭಾ ಕರಂದ್ಲಾಜೆ ಸೂಚಿಸಿದ್ದಾರೆ.
ಜಿಲ್ಲಾ ಪಂಚಾಯಿತಿ ಸಭಾಂಗಣದಲ್ಲಿ ಕೇಂದ್ರ ಪುರಸ್ಕೃತ ಯೋಜನೆಗಳ ಅನುಷ್ಠಾನದ ಪ್ರಗತಿ ಪರಿಶೀಲನಾ ʼದಿಶಾʼ ಸಮಿತಿ ಸಭೆಯ ಅಧ್ಯಕ್ಷತೆ ವಹಿಸಿ ಮಾತನಾಡಿದರು. ಟವರ್ ಗಳಿಗೆ ವಿದ್ಯುತ್ ಸರಬರಾಜು ವ್ಯತ್ಯಯದಿಂದ ಮೊಬೈಲ್ ಸಂಪರ್ಕಕ್ಕೂ ತೊಂದರೆಯಾಗುತ್ತಿರುವ ಬಗ್ಗೆ ಸಾರ್ವಜನಿಕರಿಂದ ದೂರು ಬರುತ್ತಿದೆ ಎಂದು ಬೇಸರ ವ್ಯಕ್ತಪಡಿಸಿದರು.
ಆ.೧೫ರಂದು ೪ಜಿ ಸಂಪರ್ಕಕ್ಕೆ ಚಾಲನೆ ನೀಡಲಾಗುವುದು ಎಂದು ಅಧಿಕಾರಿಗಳು ತಿಳಿಸಿದರು. ರಸ್ತೆ ಅಗೆಯುವ ಸಂದರ್ಭದಲ್ಲಿ ದೂರವಾಣಿ ಕೇಬಲ್ಗಳಿಗೆ ಹಾನಿಯಾಗಿ ಇಂಟರ್ನೆಟ್ ಸಂಪರ್ಕ ವ್ಯತಯಯವಾಗುತ್ತಿದ್ದು, ಇನ್ನುಮುಂದೆ ಸಂಬಂಧಿಸಿದ ಇಲಾಖೆಯವರು ಸಮನ್ವಯದಿಂದ ಕಾರ್ಯನಿರ್ವಹಿಸಿ ಸಮಸ್ಯೆಯಾಗದಂತೆ ಗಮನಹರಿಸಲು ಸಚಿವರು ಸೂಚಿಸಿದರು.
ರೈಲ್ವೆ ಕಾಮಗಾರಿ: ಚಿಕ್ಕಮಗಳೂರು-ಬೇಲೂರು ರೈಲ್ವೆ ೨೨ ಕಿ.ಮೀ. ಮಾರ್ಗ ಕಾಮಗಾರಿಗೆ ಚಿಕ್ಕಮಗಳೂರು ಜಿಲ್ಲಾ ವ್ಯಾಪ್ತಿಯಲ್ಲಿ ಭೂ ಸ್ವಾಧೀನ ಪೂರ್ಣಗೊಂಡಿದೆ ಎಂದು ರೈಲ್ವೆ ಅಧಿಕಾರಿಗಳು ತಿಳಿಸಿದರು.
ಹೆದ್ದಾರಿ ಕಾಮಗಾರಿ: ಚಿಕ್ಕಮಗಳೂರು ಮೂಗ್ತಿಹಳ್ಳಿಯಿಂದ ಕಡೂರುವರೆಗೆ ಹೆದ್ದಾರಿ ಅಗಲೀಕರಣ ಕಾಮಗಾರಿ ಬಹುತೇಕ ಮುಕ್ತಾಯಗೊಂಡಿದೆ ಎಂದು ಅಧಿಕಾರಿಗಳು ಮಾಹಿತಿ ನೀಡಿದರು. ದಂಟರಮಕ್ಕಿ ಬಳಿ ಹೆದ್ದಾರಿಯಲ್ಲಿ ಹಲವು ಅಪಘಾತಗಳು ನಡೆದಿದ್ದು ಈ ಪ್ರದೇಶದಲ್ಲಿ ಅಪಘಾತ ನಿಯಂತ್ರಣಕ್ಕೆ ಕ್ರಮ ಕೈಗೊಳ್ಳಲು ಸಚಿವರು ಸೂಚಿಸಿದರು.
