ಸಿದ್ದರಾಮಯ್ಯ ಇಂದು ಕೋಲಾರ ಪ್ರವೇಶ

ಬೆಂಗಳೂರು: ಮುಂದಿನ ವಿಧಾನಸಭೆ ಚುನಾವಣೆಯಲ್ಲಿ ಕೋಲಾರ ಕ್ಷೇತ್ರದಿಂದ ಸ್ಪರ್ಧಿಸ ಬೇಕು ಎಂಬ ಒತ್ತಡದ ಹಿನ್ನೆಲೆಯಲ್ಲಿ ವಿಪಕ್ಷ ನಾಯಕ ಸಿದ್ದರಾಮಯ್ಯ ಅವರು ರವಿವಾರ ಕೋಲಾರ ಪ್ರವೇಶಿಸಲಿದ್ದಾರೆ.
ಸಿದ್ದರಾಮಯ್ಯ ಆಗಮನ ಹಿನ್ನೆಲೆಯಲ್ಲಿ ಭರ್ಜರಿ ಸ್ವಾಗತಕ್ಕೆ ಸಿದ್ಧತೆ ಮಾಡಿಕೊಳ್ಳಲಾಗಿದೆ. ಮಾಜಿ ಮುಖ್ಯಮಂತ್ರಿ ಭೇಟಿ ಸಂದರ್ಭದಲ್ಲಿ ನಗರದ ಶಕ್ತಿ ದೇವತೆ ಕೋಲಾರಮ್ಮ ದೇವಾಲಯದಲ್ಲಿ ಪೂಜೆ, ಚರ್ಚ್ ಮತ್ತು ಮಸೀದಿಗೆ ಭೇಟಿ, ಮಹಾತ್ಮಾ ಗಾಂಧಿ, ಸಂವಿಧಾನಶಿಲ್ಪಿ ಡಾ| ಬಾಬಾ ಸಾಹೇಬ್ ಅಂಬೇಡ್ಕರ್, ವಾಲ್ಮೀಕಿ, ಕನಕದಾಸ, ಯೋಗಿ ನಾರಾಯಣ ಯತೀಂದ್ರರ ಪ್ರತಿಮೆಗೆ ಮಾಲಾರ್ಪಣೆ ಕಾರ್ಯಕ್ರಮ ಹಮ್ಮಿಕೊಳ್ಳಲಾಗಿದೆ. ಇದಲ್ಲದೆ ಸೀತಿ ಬೆಟ್ಟದ ಭೈರವೇಶ್ವರ ದೇವಾಲಯದಲ್ಲಿ ವಿಶೇಷ ಪೂಜೆ ಏರ್ಪಡಿಸಲಾಗಿದೆ. ದಿ| ಬೈರೇಗೌಡರ ಸಮಾಧಿ ಸ್ಥಳಕ್ಕೆ ಭೇಟಿ ಕಾರ್ಯಕ್ರಮ ನಿಗದಿಯಾಗಿದೆ. ಅನಂತರ ಮಾಜಿ ಸಚಿವ ಕೃಷ್ಣ ಬೈರೇಗೌಡರ ತೋಟದ ಮನೆಯಲ್ಲಿ ಪ್ರಮುಖ ಮುಖಂಡರ ಸಭೆ ನಡೆಸಲಿದ್ದಾರೆ.
ರಾಜಕೀಯ ವಲಯದಲ್ಲಿ ಸಿದ್ದರಾಮಯ್ಯ ಅವರ ಕೋಲಾರ ಭೇಟಿ ಸಂಚಲನ ಮೂಡಿಸಿದ್ದು, ಮುಂದಿನ ವಿಧಾನಸಭೆ ಚುನಾವಣೆಗೆ ಸ್ಪರ್ಧಿಸುವ ಮುನ್ಸೂಚನೆ ಎನ್ನಲಾಗುತ್ತಿದೆ. ಸಿದ್ದರಾಮಯ್ಯ ಕೋಲಾರಕ್ಕೆ ಭೇಟಿ ನೀಡುವ ಮುನ್ನ ಕೇಂದ್ರದ ಮಾಜಿ ಸಚಿವ ಕೆ.ಎಚ್. ಮುನಿಯಪ್ಪ ಜತೆಗೂ ದೂರವಾಣಿ ಮೂಲಕ ಮಾತನಾಡಿ ಒಪ್ಪಿಗೆ ಪಡೆದಿದ್ದಾರೆ ಎನ್ನಲಾಗಿದೆ.
ಆದರೆ ರವಿವಾರ ಮಾಜಿ ಸಚಿವ ಕೆ.ಎಚ್. ಮುನಿಯಪ್ಪ ಗುಜರಾತ್ ಪ್ರವಾಸದಲ್ಲಿ ಇರಲಿದ್ದಾರೆ. ಹೀಗಾಗಿ ಅವರು ಸಿದ್ದರಾಮಯ್ಯ ಜತೆಗೆ ಇರುವುದಿಲ್ಲ. ಇದು ನಾನಾ ರೀತಿಯ ವ್ಯಾಖ್ಯಾನಗಳಿಗೆ ಎಡೆಮಾಡಿಕೊಟ್ಟಿದೆ.
