ಬೊಮ್ಮಾಯಿ ಬಿಎಸ್ವೈ ರಬ್ಬರ್ ಸ್ಟಾಂಪ್ ಆಗದೇ ಇರಲು ಸಾಧ್ಯವೇ?; ಸಿದ್ದರಾಮಯ್ಯ ವ್ಯಂಗ್ಯ

ಬೆಂಗಳೂರು: ಬಸವರಾಜ ಬೊಮ್ಮಾಯಿಯನ್ನು ಮುಖ್ಯಮಂತ್ರಿ ಮಾಡಿಸಿರುವುದೇ ಯಡಿಯೂರಪ್ಪ. ಹಾಗಾಗಿ ಬೊಮ್ಮಾಯಿಯವರು ಯಡಿಯೂರಪ್ಪ ಅವರ ರಬ್ಬರ್ ಸ್ಟಾಂಪ್ ರೀತಿ ಕೆಲಸ ಮಾಡದೆ ಸ್ವತಂತ್ರವಾಗಿ ಕೆಲಸ ಮಾಡೋಕಾಗುತ್ತಾ ಎಂದು ಮಾಜಿ ಸಿಎಂ ಸಿದ್ದರಾಮಯ್ಯ ವ್ಯಂಗ್ಯವಾಡಿದ್ದಾರೆ.
ಯಡಿಯೂರಪ್ಪ ಅವರಿಗೆ ಮುಂಬಾಗಿಲ ಮೂಲಕ ರಾಜಕಾರಣ ಮಾಡಿಯೇ ಗೊತ್ತಿಲ್ಲ. ಆಪರೇಷನ್ ಕಮಲ, ಕುದುರೆ ವ್ಯಾಪಾರದಂತ ಹಿಂಬಾಗಿಲ ರಾಜಕಾರಣ ಮಾತ್ರ ಅವರಿಗೆ ಗೊತ್ತಿರೋದು ಎಂದು ಸಿದ್ದರಾಮಯ್ಯ ಟೀಕಿಸಿದ್ದಾರೆ.
ಪದ್ಮನಾಭನಗರದಲ್ಲಿ ಆಯೋಜಿಸಿದ್ದ ದಿನಸಿ ಕಿಟ್ಗಳ ವಿತರಣಾ ಕಾರ್ಯಕ್ರಮದಲ್ಲಿ ಅವರು ಮಾತನಾಡುತ್ತಿದ್ದರು.
ಕೇಂದ್ರದಲ್ಲಿ ನರೇಂದ್ರ ಮೋದಿ, ರಾಜ್ಯದಲ್ಲಿ ಯಡಿಯೂರಪ್ಪ ಸರ್ಕಾರ ಬಂದರೆ ಸ್ವರ್ಗ ಸೃಷ್ಟಿಯಾಗುತ್ತೆ ಎಂದಿದ್ದರು. ಯಡಿಯೂರಪ್ಪ ಭ್ರಷ್ಟಾಚಾರ ಜಾಸ್ತಿಯಾದ ಕಾರಣ ಅಧಿಕಾರದಿಂದ ಕಿತ್ತುಹಾಕಿದ್ದಾರೆ ಇದು ಸತ್ಯಸಂಗತಿ. ಆರ್.ಟಿ.ಜಿ.ಎಸ್ ಮೂಲಕ ಲಂಚ ಪಡೆದ ಭ್ರಷ್ಟ ರಾಜಕಾರಣಿ ಯಾರಾದ್ರೂ ಇದ್ದರೆ ಅದು ಯಡಿಯೂರಪ್ಪ ಮಾತ್ರ ಎಂದರು.
ಮೋದಿ ಮೋದಿ ಎಂದು ಕುಣಿಯುತ್ತಿದ್ದವರಿಗೆ ಮೋದಿಯವರು ಮೂರು ನಾಮ ಹಾಕಿದ್ದಾರೆ. ಬಿಜೆಪಿ ಭ್ರಷ್ಟ ಪಕ್ಷ, ಈ ಪಕ್ಷದಿಂದ ಅಭಿವೃದ್ಧಿ ನಿರೀಕ್ಷೆ ಸಾಧ್ಯವಿಲ್ಲ ಎಂದು ಸಿದ್ದರಾಮಯ್ಯ ಹೇಳಿದರು.
ಇಲ್ಲಿ ಸಾರ್ವಜನಿಕ ಸ್ಥಳದಲ್ಲಿ ಸಭೆ ಮಾಡಲು ಅಶೋಕ್ ಅವರ ಅನುಮತಿ ಪಡೆಯಬೇಕು ಅಂತಾರೆ, ಇದೇನು ಅಶೋಕ್ ಅವರ ಸ್ವಂತ ಸ್ವತ್ತೇ? ಇಂತಹಾ ಅಸಂಬದ್ಧ ವಿಷಯಗಳಿಗೆ ಪೊಲೀಸ್ ಇಲಾಖೆ ಸೊಪ್ಪು ಹಾಕಬಾರದು, ಇನ್ನು ಒಂದೂವರೆ ವರ್ಷ ಕಳೆದರೆ ನಾವೇ ಅಧಿಕಾರಕ್ಕೆ ಬರುತ್ತೇವೆ. ಆಗ ಇದಕ್ಕೆಲ್ಲ ಉತ್ತರ ಕೊಡಬೇಕಾಗುತ್ತದೆ ಎಂದರು.
ಪದ್ಮನಾಭ ನಗರದಲ್ಲಿ ಕೊರೊನಾ ಸೋಂಕಿಗೆ ಯಾರಾದರೂ ಬಲಿಯಾಗಿದ್ದರೆ ಅದಕ್ಕೆ ಕ್ಷೇತ್ರದ ಶಾಸಕ ಆರ್. ಅಶೋಕ್ ಕಾರಣ ಎಂದು ಸಿದ್ದರಾಮಯ್ಯ ಟೀಕಿಸಿದರು.
