ಹೊಸ ರಾಷ್ಟ್ರೀಯ ಶಿಕ್ಷಣ ನೀತಿ ಮಕ್ಕಳ ಭವಿಷ್ಯದ ಕತ್ತು ಕೊಯ್ಯುವ ಕೆಲಸ: ಸಿದ್ದರಾಮಯ್ಯ

ಬೆಂಗಳೂರು: ರಾಜ್ಯದಲ್ಲಿ ಪ್ರಾಯೋಗಿಕವಾಗಿ ಜಾರಿಗೊಳಿಸಿರುವ ರಾಷ್ಟ್ರೀಯ ಶಿಕ್ಷಣ ನೀತಿ ಕುರಿತಾದ ಚರ್ಚೆಯಲ್ಲಿ ತಾವು ಭಾಗವಹಿಸುವುದಿಲ್ಲ ಎಂದು ವಿಧಾನಸಭೆ ವಿರೋಧ ಪಕ್ಷದ ನಾಯಕ ಸಿದ್ದರಾಮಯ್ಯ ಹೇಳಿದ್ದಾರೆ.
ಉನ್ನತ ಶಿಕ್ಷಣ ಸಚಿವ ಡಾ.ಅಶ್ವತ್ಥ ನಾರಾಯಣ ಅವರಿಗೆ ಪ್ರತಿಕ್ರಿಯಿಸಿ ಬರೆದಿರುವ ಪತ್ರದಲ್ಲಿ ಸಿದ್ದರಾಮಯ್ಯ ಈ ವಿಷಯ ಸ್ಪಷ್ಟಪಡಿಸಿದ್ದಾರೆ.
ಈಗಾಗಲೇ ತರಾತುರಿಯಲ್ಲಿ ವಿದ್ಯಾರ್ಥಿಗಳು, ತಜ್ಞರು, ಪ್ರಾಧ್ಯಾಪಕರು, ಪೋಷಕರುಗಳ ಜೊತೆ ಚರ್ಚಿಸದೆ, ಸಾಧಕ-ಬಾಧಕಗಳನ್ನು ಪರಿಶೀಲಿಸದೆ ಈ ಶೈಕ್ಷಣಿಕ ವರ್ಷದಿಂದಲೇ ಅನುಷ್ಠಾನ ಮಾಡುವುದಾಗಿ ಹೇಳಿ ಉದ್ಘಾಟನೆಯನ್ನೂ ಮಾಡಲಾಗಿದ್ದು, ಈಗ ಚರ್ಚೆ ಮಾಡಬೇಕು ಎನ್ನುತ್ತಿರುವುದಕ್ಕೆ ಆಕ್ಷೇಪ ಎತ್ತಿರುವ ಅವರು, ಇದು ಸಂಸದೀಯವಾಗಿ ಸರಿಯಲ್ಲ ಎಂದಿದ್ದಾರೆ.
ಒಂದು ಶಿಕ್ಷಣ ನೀತಿಯ ಅನುಷ್ಠಾನವೆಂದರೆ ಸಣ್ಣ ಸಂಗತಿಯೆ ಎಂದು ಪ್ರಶ್ನಿಸಿರುವ ಅವರು, ಕುವೆಂಪು ಅವರನ್ನು ಉಲ್ಲೇಖಿಸಿದ್ದಾರೆ. ಕುವೆಂಪು ಅವರು ಶಿಕ್ಷಣ, ಅದರ ಗುಣಮಟ್ಟವನ್ನು ಸುಧಾರಣೆ, ಕಲಿಕೆಯ ಮಾಧ್ಯಮ ಹಾಗೂ ಸರ್ಕಾರದ ಜವಾಬ್ಧಾರಿಗಳ ಬಗ್ಗೆ ಮಾತನಾಡಿದ್ದಾರೆ. ಶಿಕ್ಷಣದ ಕುರಿತಂತೆ ಕೆಲಸ ಮಾಡುತ್ತಿರುವವರೆಲ್ಲರೂ ಕುವೆಂಪು ಅವರ ವಿಚಾರಗಳನ್ನು ಓದಿ, ಅದರಂತೆ ನಡೆದುಕೊಳ್ಳಬೇಕಾಗಿದೆ ಎಂದಿರುವ ಸಿದ್ದರಾಮಯ್ಯ, ನೀವೂ ಬೆವರಿನ ಸಂಸ್ಕೃತಿಯ ಹಿನ್ನೆಲೆಯ ಸಮುದಾಯದಿಂದ ಬಂದಿದ್ದೀರಿ ಎಂದು ಅಶ್ವತ್ಥನಾರಾಯಣ ಅವರಿಗೆ ನೆನಪಿಸಿದ್ದಾರೆ.
ಮುಂದುವರೆದ ದೇಶಗಳಲ್ಲಿ ಶಿಕ್ಷಣ ಮತ್ತು ಆರೋಗ್ಯ ಕ್ಷೇತ್ರಗಳನ್ನು ಸರ್ಕಾರಗಳೇ ನಿರ್ವಹಿಸುತ್ತವೆ. ಯಾವುದೇ ನಾಡಿನಲ್ಲಿ ಉನ್ನತ ಶಿಕ್ಷಣ ವ್ಯವಸ್ಥೆ ಸಮರ್ಪಕವಾಗಿದ್ದರೆ ಆ ನಾಡಿನ ಸಮಸ್ತ ಆರೋಗ್ಯವೂ ಸರಿಯಾಗಿರುತ್ತದೆ. ಇಂದು ಭಾರತದ ಸಮಾಜಗಳು ತೀವ್ರ ರೂಪದ ಬಿಕ್ಕಟ್ಟುಗಳನ್ನು ಎದುರಿಸುತ್ತಿವೆ. ಅದಕ್ಕೆ ಕಾರಣಗಳು ಹಲವಿವೆ ಎಂದು ಆ ಕಾರಣಗಳನ್ನು ಪಟ್ಟಿ ಮಾಡಿದ್ದಾರೆ.
ಮೊದಲನೆಯದಾಗಿ ವಿದ್ಯಾರ್ಥಿ ಶಿಕ್ಷಕ ಪ್ರಮಾಣ ವಿಪರೀತ ಹೆಚ್ಚಾಗಿದೆ, ಅದು ಕಡಿಮೆಯಾಗಬೇಕು. ಶಿಕ್ಷಣ ಕ್ಷೇತ್ರಕ್ಕೆ ಅತಿ ಕಡಿಮೆ ಅನುದಾನ ನೀಡಲಾಗುತ್ತಿದೆ. ಈ ನೀತಿಯ ಶಿಫಾರಸ್ಸುಗಳ ಪ್ರಕಾರ ಜಿಡಿಪಿಯಲ್ಲಿ ಕನಿಷ್ಠ ಶೇ 6ರಷ್ಟು ಮೀಸಲಿರಿಸಬೇಕು. ಇದಾಗಬೇಕೆಂದರೆ ಕರ್ನಾಟಕದಲ್ಲಿ ಕನಿಷ್ಠ 1.08 ಲಕ್ಷ ಕೋಟಿ ರೂಪಾಯಿಗಳನ್ನು ಮೀಸಲಿರಿಸಬೇಕಾಗುತ್ತದೆ ಎಂದು ಸಿದ್ದರಾಮಯ್ಯ ಹೇಳಿದ್ದಾರೆ.
ಹೊಸ ಶಿಕ್ಷಣ ನೀತಿಯ ಹೇರಿಕೆಯು ಹಲವು ಸಮಸ್ಯೆಗಳನ್ನು ಒಳಗೊಂಡಿದೆ. ಒಕ್ಕೂಟ ವ್ಯವಸ್ಥೆಯ ಮೂಲ ಸ್ಫೂರ್ತಿಯ ನಿರಾಕರಣೆ, ಖಾಸಗೀಕರಣ, ತರಗತಿಗಳನ್ನು ನಿರಾಕರಿಸಿ ಕಾಲೇಜು, ವಿಶ್ವ ವಿದ್ಯಾಲಯಗಳ ಪಾವಿತ್ರ್ಯದ ನಿರಾಕರಣೆ, ಬಡವರು, ಹಿಂದುಳಿದವರು, ದಮನಿತರ ಸಿಗಬಹುದಾದ ಸುಲಭ ಶಿಕ್ಷ,ಣದ ನಿರಾಕರಣೆ, ಕೋಮು ಅಜೆಂಡಾಗಳನ್ನು ತಂದು ಅವೈಜ್ಞಾನಿಕತೆಯನ್ನು, ದ್ವೇಷವನ್ನು ತುಂಬಿ ಭಾರತವನ್ನು ಶಾಶ್ವತ ಅಂಧಕಾರಕ್ಕೆ ತಳ್ಳಲಾಗುತ್ತಿದೆ ಮುಂತಾದ ಗಂಭೀರ ಆರೋಪಗಳಿರುವುದರ ಬಗ್ಗೆ ಅವರು ಗಮನ ಸೆಳೆದಿದ್ದಾರೆ.
ಸರ್ಕಾರ ಈ ಎಲ್ಲದರ ಕುರಿತು ಚರ್ಚೆ ನಡೆಸಬೇಕಾಗಿತ್ತು. ಇದೇನನ್ನೂ ನೀವು ಮಾಡಿಲ್ಲ. ನನ್ನ, ನಿಮ್ಮ ಆಯಸ್ಸು, ರಾಜಕೀಯ ವೃತ್ತಿ ಎಲ್ಲವೂ ಒಂದು ದಿನ ಮುಗಿಯುತ್ತದೆ. ಆದರೆ ಶಿಕ್ಷಣ ನೀತಿಯ ಹೆಸರಲ್ಲಿ ಬಲಿಪಶುಗಳಾಗುವ ಮಕ್ಕಳ ಮುಂದೆ 70-80 ವರ್ಷಗಳ ಭವಿಷ್ಯವಿದೆ. ಶಿಕ್ಷಣದ ಹಂತದಲ್ಲಿ ಅವರ ಭವಿಷ್ಯ ಅಲ್ಲೋಲ, ಕಲ್ಲೋಲವಾದರೆ ಅದರ ಶಾಪವನ್ನು ಹೊರುವವರು ಯಾರು? ಈ ನಾಡಿನ, ರೈತರ, ಪಶುಪಾಲಕರ, ಕುಶಲಕರ್ಮಿಗಳ, ಸಣ್ಣ ಪುಟ್ಟ ವ್ಯಾಪಾರಿಗಳ, ಕಾರ್ಮಿಕರ ಮನೆಗಳಿಂದ ಬಂದ ಮಕ್ಕಳು ಗುಣ ಮಟ್ಟದ ಶಿಕ್ಷಣ ಪಡೆದು ಜಾಗತಿಕ ಮಟ್ಟದ ಉದಾರ ಮಾನವತಾವಾದಿ, ವೈಜ್ಞಾನಿಕ ಶಿಕ್ಷಣ ಪಡೆಯಬಾರದೆ ಎಂಬ ಮಹತ್ವದ ಪ್ರಶ್ನೆಯನ್ನು ಪತ್ರದಲ್ಲಿ ಸಿದ್ದರಾಮಯ್ಯ ಎತ್ತಿದ್ದಾರೆ.
ತಾವು ನಿಜವಾಗಿಯೂ ನೈಜ ಸ್ಫೂರ್ತಿಯಲ್ಲಿ ಚರ್ಚೆಮಾಡಬಯಸಿದರೆ, ಕೂಡಲೆ ಈ ಹೊಸ ಶಿಕ್ಷಣ ನೀತಿಯನ್ನು ಹಿಂದಕ್ಕೆ ಪಡೆಯಿರಿ. ಚರ್ಚೆ ನಡೆಸಿದ ಮೇಲೆ ನಿಜವಾಗಿಯೂ ಈ ನೀತಿ ಆರೋಗ್ಯಕರವೆನ್ನಿಸಿ ಅನುಷ್ಠಾನ ಸೂಕ್ತವೆನ್ನಿಸಿದರೆ, ಈ ಶತಮಾನಕ್ಕೆ ಅತ್ಯಗತ್ಯ ಎನ್ನಿಸಿದರೆ ಅನುಷ್ಠಾನ ಮಾಡಲು ನಾವೇ ಬೆಂಬಲಿಸುತ್ತೇವೆ. ಇಲ್ಲದಿದ್ದರೆ ಮಕ್ಕಳ ಭವಿಷ್ಯದ ಕುತ್ತಿಗೆ ಕೊಯ್ಯುವಂಥ ಪಾಪದ ಕೆಲಸದಲ್ಲಿ ಭಾಗಿಯಾದೆವು ಎಂಬ ಪಶ್ಚಾತ್ತಾಪವನ್ನು ಹೊರಬೇಕಾಗುತ್ತದೆ ಎಂದು ಸಿದ್ದರಾಮಯ್ಯ ಎಚ್ಚರಿಸಿದ್ದಾರೆ.
