ಬಲಿಷ್ಠ ಭಾರತ ನಿರ್ಮಾಣಕ್ಕೆ ಸಮನ್ವಯತೆ ಅಗತ್ಯ- ನಿತಿನ್ ಗಡ್ಕರಿ

ನವದೆಹಲಿ: ದೇಶದಲ್ಲಿ ಮೂಲಸೌಕರ್ಯಗಳ ಅಭಿವೃದ್ಧಿಯಾಗಬೇಕಾದರೆ ಕೇಂದ್ರ ಮತ್ತು ರಾಜ್ಯ ಗಳ ನಡುವೆ ಸಮನ್ವಯತೆ, ಸಹಕಾರ ಬಹಳ ಅಗತ್ಯ ಎಂದು ಕೇಂದ್ರ ರಸ್ತೆ ಮತ್ತು ಹೆದ್ದಾರಿ ಸಚಿವ ನಿತಿನ್ ಗಡ್ಕರಿ ಒತ್ತಿ ಹೇಳಿದ್ದಾರೆ. ಪ್ರಧಾನಮಂತ್ರಿ ಗತಿ ಶಕ್ತಿ ದಕ್ಷಿಣ ವಲಯ ಸಮಾವೇಶ ಉದ್ಘಾಟಿಸಿ ಅವರು ಮಾತನಾಡಿದರು. ಪರಸ್ಪರ ಸಹಕಾರ ಮತ್ತು ಸಂವಹನ ಕೇಂದ್ರ ಮತ್ತು ರಾಜ್ಯ ಸರ್ಕಾರಗಳ ಸಂಬಂಧವನ್ನು ಬಹಳ ಗಟ್ಟಿ ಮಾಡಲಿದೆ ಎಂದು ಅವರು ಅಭಿಪ್ರಾಯಪಟ್ಟರು.
ವಿಶೇಷವಾಗಿ ಮೂಲಸೌಲಭ್ಯಗಳನ್ನು ಒದಗಿಸುವ ವಿಚಾರದಲ್ಲಿ ಪರಸ್ಪರ ಭಿನ್ನಾಭಿಪ್ರಾಯ ಮರೆತು ಕೇಂದ್ರ ಮತ್ತು ರಾಜ್ಯ ಸರ್ಕಾರಗಳು ಒಂದಾಗಿ ಕೆಲಸ ಮಾಡಿದಾಗ ಮಾತ್ರ ಸರ್ಕಾರದ ಉದ್ದೇಶ ಮತ್ತು ಅಭಿವೃದ್ಧಿ ಕಾರ್ಯಗಳ ಪ್ರಯೋಜನ ಜನತೆ ತಲುಪಲಿದೆ ಎಂದು ಹೇಳಿದರು.
ದಕ್ಷಿಣ ವಲಯ ಸಮಾವೇಶದಲ್ಲಿ ಕರ್ನಾಟಕ, ತಮಿಳುನಾಡು, ತೆಲಂಗಾಣ, ಆಂದ್ರ ಪ್ರದೇಶ, ಕೇರಳ, ಮಹಾರಾಷ್ಟ್ರ ಪುದುಚೆರಿ ಹಾಗೂ ಅಂಡಮಾನ್ ನಿಕೋಬಾರ್ ದ್ವೀಪಗಳು ಭಾಗಿಯಾಗಿವೆ. ಭಾರತ ರ ವಿಶ್ವದ ಆರ್ಥಿಕ ಶಕ್ತಿಶಾಲಿ ರಾಷ್ಟ್ರವಾಗಿ ಹೊರ ಹೋಮ್ಮಬೇಕಾದರೆ ದೇಶದಲ್ಲಿ ಮೂಲಸೌಲಭ್ಯ ವ್ಯಾಪಕ ಪ್ರಮಾಣದಲ್ಲಿ ಹೆಚ್ಚಾಗಬೇಕಾಗಿದೆ ಎಂದು ಕೇಂದ್ರ ಸಚಿವರು ಹೇಳಿದರು.
ಕರ್ನಾಟಕದ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ, ರಾಜ್ಯಗಳ ಬೃಹತ್ ಯೋಜನೆಗಳಿಗೆ ಕೇಂದ್ರ ತ್ವರಿತ ಅನುಮೋದನೆ ಹಾಗೂ ಹಾಗೂ ಗರಿಷ್ಠಮಟ್ಟದ ಆರ್ಥಿಕ ಸಹಕಾರ ನೀಡಬೇಕು ಎಂದು ಒತ್ತಾಯಿಸಿದ್ದಾರೆ.
