ಕಾಂಗ್ರೆಸ್ ಸಂಪರ್ಕ, ಸ್ವತಃ ಸಚಿವರೇ ಒಪ್ಪಿಕೊಂಡಿದ್ದಾರೆ: ಶಿವಕುಮಾರ್
ಬೆಂಗಳೂರು: ಬಿಜೆಪಿ ಮತ್ತು ಕಾಂಗ್ರೆಸ್ ನಡುವೆ ಪಕ್ಷಾಂತರ ವಾರ್ ನಡೆದಿದೆ. ಕಾಂಗ್ರೆಸ್ ಸಂಪರ್ಕದಲ್ಲಿರುವುದನ್ನು ಈಗಾಗಲೇ ಒಬ್ಬ ಸಚಿರು ಸ್ವತಃ ಅವರೇ ಒಪ್ಪಿಕೊಂಡಿದ್ದಾರೆ ಎಂದು ಕೆಪಿಸಿಸಿ ರಾಜ್ಯಾಧ್ಯಕ್ಷ ಡಿ.ಕೆ.ಶಿವಕುಮಾರ್ ಹೇಳಿದ್ದಾರೆ. ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಬಿಜೆಪಿ ಶಾಸಕರು ನಮ್ಮ ಸಂಪರ್ಕದಲ್ಲಿರುವುದು ನಿಜ. ಸಚಿವರೊಬ್ಬರು ಸಿದ್ದರಾಮಯ್ಯ ಜತೆ ಮಾತನಾಡಿದ್ದಾರೆ ಎಂದು ಅವರು ಹೇಳಿದ್ದಾರೆ.
ಆರ್.ಅಶೋಕ್ ತಿರುಗೇಟು
ಈ ನಡುವೆ ಶಿವಕುಮಾರ್ ಗೆ ತಿರುಗೇಟು ನೀಡಿರುವ ಕಂದಾಯ ಸಚಿವ ಆರ್.ಅಶೋಕ್, ಸೂರ್ಯ-ಚಂದ್ರರಿರುವವರಿಗೂ ಬಿಜೆಪಿಗೆ ವಲಸೆ ಬಂದ 17 ಶಾಸಕರನ್ನು ಮತ್ತೆ ಕಾಂಗ್ರೆಸ್ ಗೆ ಸೇರಿಸಿಕೊಳ್ಳುವುದಿಲ್ಲ ಎಂದು ವಿರೋಧ ಪಕ್ಷದ ನಾಯಕ ಸಿದ್ದರಾಮಯ್ಯ ಹೇಳಿದ್ದರು. ಈಗ ಕಾಂಗ್ರೆಸ್ ಪಕ್ಷಕ್ಕೆ ಸೋಲಿನ ಭಯ ಕಾಡುತ್ತಿದೆ. ಚುನಾವಣೆಯಲ್ಲಿ ಕಾಂಗ್ರೆಸ್ ಗೆಲ್ಲುವುದಿಲ್ಲ ಎಂಬುದು ಅವರಿಗೆ ಸ್ಪಷ್ಟವಾಗಿದೆ ಎಂದಿದ್ದಾರೆ.
ಈ ನಡುವೆ ನಾನು ಬಿಜೆಪಿ ಸಂಪರ್ಕದಲ್ಲಿದ್ದೇನೆ ಎಂದು ಪೌರಡಾಳಿತ ಸಚಿವ ಎಂ.ಟಿ.ಬಿ.ನಾಗರಾಜ್ ಚಿಕ್ಕಬಳ್ಳಾಪುರದಲ್ಲಿ ಸ್ಪಷ್ಟಪಡಿಸಿದ್ದಾರೆ. ಸಿದ್ದರಾಮಯ್ಯ ಬಿಜೆಪಿಗೆ ಬಂದರೆ ಸ್ವಾಗತೀಸುತ್ತೇವೆ ಎಂದು ಸಚಿವ ಬಿ.ಸಿ.ಪಾಟೀಲ್ ಚಿತ್ರದುರ್ಗದಲ್ಲಿ ಹೇಳಿದ್ದರೆ, ಕಾಂಗ್ರೆಸ್ ಗೆ ಯಾರೂ ಅರ್ಜಿ ಹಾಕಿಲ್ಲ ಎಂದು ಅಬಕಾರಿ ಸಚಿವ ಕೆ.ಗೋಪಾಲಯ್ಯ ಮಂಡ್ಯದಲ್ಲಿ ಹೇಳಿಕೆ ನಿಡಿದ್ದಾರೆ.
ತಮ್ಮ ಸಂಪರ್ಕದಲ್ಲಿರುವ ಶಾಸಕರ ಪಟ್ಟಿ ಬಿಡುಗಡೆ ಮಾಡುವಂತೆ ಸಚಿವ ಡಾ.ಕೆ.ಸುಧಾಕರ್ ಕಾಂಗ್ರೆಸ್ ಗೆ ಸವಾಲು ಹಾಕಿದ್ದಾರೆ. ಕಾಂಗ್ರೆಸ್ ಮುಳುಗುವ ಹಡಗು. ಅದನ್ನು ಕಾಂಗ್ರೆಸ್ಸಿಗರೇ ಅರ್ಥ ಮಾಡಿಕೊಳ್ಳಬೇಕು ಎಂದು ಸಚಿವ ಮುರುಗೇಶ್ ನಿರಾಣಿ ಕಲಬುರಗಿಯಲ್ಲಿ ಹೇಳಿದ್ದಾರೆ.
