
ಭದ್ರತಾ ಪಡೆ ಸಿಬ್ಬಂದಿ ಶ್ರೀನಗರದ ನೌಗಮ್ ಪ್ರದೇಶದಲ್ಲಿ ಮೂವರು ಉಗ್ರರನ್ನ ಹೊಡೆದುರುಳಿಸಿದೆ. ಮೃತ ಭಯೋತ್ಪಾದಕರಿಂದ ಅಪಾರ ಪ್ರಮಾಣದ ಮಾರಕಾಸ್ತ್ರಗಳು, ಶಸ್ತ್ರಗಳನ್ನು ವಶಪಡಿಸಿಕೊಂಡಿದ್ದಾರೆ ಎಂದು ಸ್ಥಳೀಯ ಪೊಲೀಸರು ಮಾಹಿತಿ ನೀಡಿದ್ದಾರೆ. ನೌಗಾಮ್ನಲ್ಲಿ ಉಗ್ರರು ಅಡಗಿದ್ದಾರೆ ಎಂಬ ಖಚಿತ ಮಾಹಿತಿ ಮೇರೆಗೆ ಸ್ಥಳೀಯ ಪೊಲೀಸರು ಮತ್ತು ಭದ್ರತಾ ಸಿಬ್ಬಂದಿ ಕಾರ್ಯಾಚರಣೆ ನಡೆಸಿದ್ದರು. ಆ ಪ್ರದೇಶವನ್ನು ಸುತ್ತುವರಿದಿದ್ದರು. ರಕ್ಷಣಾ ಸಿಬ್ಬಂದಿ ಪ್ರದೇಶವನ್ನು ಸುತ್ತುವರಿದ ಬೆನ್ನಲ್ಲೇ, ಉಗ್ರರು ಗುಂಡಿನ ದಾಳಿ ನಡೆಸಿದ್ದರು. ಅದಕ್ಕೆ ಪ್ರತಿ ದಾಳಿ ನಡೆಸಿದ ಪೊಲೀಸರು ಮೂವರನ್ನು ಹತ್ಯೆ ಮಾಡಿದ್ದಾರೆ.
ನಿನ್ನೆ ಜಮ್ಮು-ಕಾಶ್ಮೀರದ ಪುಲ್ವಾಮಾದ ಆವಂತಿಪೋರಾದಲ್ಲಿ ಕೂಡ ಭಯೋತ್ಪಾದಕರು ಮತ್ತು ಭದ್ರತಾ ಸಿಬ್ಬಂದಿ ನಡುವೆ ಗುಂಡಿನ ಚಕಮಕಿ ನಡೆದಿತ್ತು. ಅದರಲ್ಲಿ ಜೈಶ್ ಇ ಮೊಹಮ್ಮದ್ ಸಂಘಟನೆಯ ಉಗ್ರನೊಬ್ಬನನ್ನು ಹತ್ಯೆ ಮಾಡಲಾಗಿತ್ತು. ನಿನ್ನೆ ಚಾರ್ಸೂ ಗ್ರಾಮದಲ್ಲಿ ಉಗ್ರರ ಉಪಸ್ಥಿತಿಯ ಬಗ್ಗೆ ನಿರ್ದಿಷ್ಟ ಮಾಹಿತಿ ಸಿಕ್ಕ ಹಿನ್ನೆಲೆಯಲ್ಲಿ ಭದ್ರತಾ ಪಡೆಗಳ ಜಂಟಿ ತಂಡವು ಶೋಧ ಕಾರ್ಯಾಚರಣೆಯನ್ನು ಪ್ರಾರಂಭಿಸಿತ್ತು. ಶೋಧ ಕಾರ್ಯ ನಡೆಸುತ್ತಿರುವ ತಂಡವು ಶಂಕಿತ ಸ್ಥಳವನ್ನು ಸುತ್ತುವರೆದಿದ್ದರಿಂದ ಅಡಗಿಕೊಂಡಿದ್ದ ಭಯೋತ್ಪಾದಕನು ಭದ್ರತಾ ಪಡೆಗಳ ಮೇಲೆ ಗುಂಡು ಹಾರಿಸಿದನು. ಇದರಿಂದ ಎರಡೂ ಕಡೆಗಳಿಂದ ಗುಂಡಿನ ಚಕಮಕಿ ಶುರುವಾಗಿತ್ತು ಎಂದು ಕಾಶ್ಮೀರ ಐಜಿಪಿ ವಿಜಯ್ಕುಮಾರ್ ತಿಳಿಸಿದ್ದರು. ಶ್ರೀನಗರದಲ್ಲಿ ಈ ಮೂವರು ಉಗ್ರರು ಸರಪಂಚ್ ಸಮೀರ್ ಅಹ್ಮದ್ ಭಟ್ ಹತ್ಯೆ ಮಾಡಿದ್ದರು ಎಂದು ತಿಳಿದುಬಂದಿದೆ.
