ರಾಜಕೀಯ ಧೃವೀಕರಣಕ್ಕೆ ನಾಂದಿ ಹಾಡಿದ ಯುಪಿ ಚುನಾವಣೆ ಘೋಷಣೆ

ಲಖ್ನೋ: ಉತ್ತರಪ್ರದೇಶದಲ್ಲಿ ಚುನಾವಣೆ ಘೋಷಣೆಯಾಗುತ್ತಿದ್ದಂತೆ ಪಕ್ಷಾಂತರ ಪರ್ವ ಆರಂಭವಾಗಿದ್ದು, ರಾಜಕೀಯ ಧೃವೀಕರಣಕ್ಕೆ ನಾಂದಿ ಹಾಡಿದೆ. ಬಿಜೆಪಿ ಸಚಿವ ಸ್ವಾಮಿ ಪ್ರಸಾದ್ ಮೌರ್ಯ ಮತ್ತು ಬೆಂಬಲಿಗ ನಾಲ್ವರು ಶಾಸಕರು ಮಂಗಳವಾರ ಬಿಜೆಪಿ ತ್ಯಜಿಸಿ ಅಖಿಲೇಶ್ ಯಾದವ್ ನೇತೃತ್ವದ ಸಮಾಜವಾದಿ ಪಕ್ಷಕ್ಕೆ ಬೆಂಬಲ ಘೋಷಿಸಿದ ಬೆನ್ನಲ್ಲೇ, ಕಾಂಗ್ರೆಸ್ ನಿಂದ ನಾಲ್ಕು ಬಾರಿ ಸಂಸದರಾಗಿದ್ದ ಅವತಾರ್ ಸಿಂಗ್ ಬಂಡ ಪಕ್ಷಕ್ಕೆ ಗುಡ್ ಬೈ ಹೇಳಿ ಜಯಂತ್ ಚೌಧರಿ ನೇತೃತ್ವದ ಆರ್ ಎಲ್ ಡಿ ಸೇರಿದ್ದಾರೆ . ಅವರು ಜೀವರ್ ವಿಧಾನಸಭಾ ಅಭ್ಯರ್ಥಿಯಾಗಿ ಚುನಾವಣಾ ಕಣಕ್ಕೆಇಳಿಯಲಿದ್ದಾರೆ ಎನ್ನಲಾಗಿದೆ.
ಮತ್ತೊಬ್ಬ ಸಚಿವ ರಾಜಿನಾಮೆ
ಕಾಂಗ್ರೆಸ್ ಶಾಸಕ ನರೇಂದ್ರ ಶೈನಿ ಹಾಗೂ ಸಮಾಜವಾದಿ ಪಕ್ಷದ ಶಾಸಕ ಹರಿ ಓಂ ಯಾದವ್ ಮತ್ತು ಸಮಾಜವಾದಿ ಪಕ್ಷದ ಮಾಜಿ ಶಾಸಕ ಧರ್ಮಪಾಲ್ ಯಾದವ್ ಪಕ್ಷಕ್ಕೆ ಗುಡ್ ಬೈ ಹೇಳಿ ಬುಧವಾರ ಬಿಜೆಪಿ ಸೇರಿದ್ದಾರೆ. ಉತ್ತರ ಪ್ರದೇಶ ಬಿಜೆಪಿ ಘಟಕದ ಅಧ್ಯಕ್ಷ ಸ್ವತಂತ್ರ ದೇವ್ ಸಿಂಗ್ ಹಾಗೂ ಉಪ ಮುಖ್ಯಮಂತ್ರಿ ಕೇಶವ ಪ್ರಸಾದ್ ಮೌರ್ಯ ಸಮ್ಮುಖದಲ್ಲಿ ಬಿಜೆಪಿ ಸೇರಿದ್ದಾರೆ. ಈ ನಡುವೆ ಬಿಜೆಪಿಯ ಮತ್ತೊಬ್ಬ ಸಚಿವ ಧಾರಾಸಿಂಗ್ ಚೌಹಾಣ್ ಪಕ್ಷಕ್ಕೆ ರಾಜಿನಾಮೆ ಸಲ್ಲಿಸಿದ್ದು ಎಸ್ ಪಿ ಸೇರುವ ಸಾಧ್ಯತೆ ನಿಶ್ಚಿತವಾಗಿದೆ. ಸ್ವಾಮಿ ಪ್ರಸಾದ್ ಮೌರ್ಯ ಇದೇ ಜ.14 ರಂದು ತಮ್ಮ ಬೆಂಬಲಿಗರೊಂದಿಗೆ ಅಧಿಕೃತವಾಗಿ ಎಸ್ ಪಿ ಸೇರುವ ಸಾಧ್ಯತೆ ಇದೆ.
