ಅಡಿಕೆ ಬೆಳೆ ಹಾನಿ ತಡೆಗೆ 10 ಕೋಟಿ ಬಿಡುಗಡೆ; ಸಿಎಂ ಬೊಮ್ಮಾಯಿ

ಶಿವಮೊಗ್ಗ: ಬೇಡಿಕೆ ಕಡಿಮೆಯಾಗಿರುವ ಹಿನ್ನೆಲೆ ಇತ್ತೀಚಿನ ದಿನಗಳಲ್ಲಿ ಅಡಿಕೆ ಧಾರಣೆಯಲ್ಲಿ ನಿರಂತರವಾಗಿ ಇಳಿಕೆಯಾಗುತ್ತಿದೆ.
ಇದು ಅಡಿಕೆ ಕೃಷಿಯನ್ನೇ ನಂಬಿ ಬದುಕು ಸಾಗಿಸುತ್ತಿರುವ ಸಾವಿರಾರು ರೈತ ಕುಟುಂಬಗಳು ಬೆಳೆದ ಅಡಿಕೆಗೆ ಮಾರುಕಟ್ಟೆಯಲ್ಲಿ ಸರಿಯಾದ ಬೆಲೆ ಸಿಗದೆ ಕಂಗಾಲಾಗಿದ್ದಾರೆ. ಈ ನಡುವೆ ಅಡಿಕೆಗಳಿಗೆ ರೋಗ ಬಾಧೆ ಹೆಚ್ಚಾಗಿದ್ದರಿಂದ ಅಡಿಕೆ ಬೆಳೆಗಾರರನ್ನು ಇನ್ನಷ್ಟು ಕುಗ್ಗಿಸಿದೆ. ನಿನ್ನೆ (ನ.27) ಶಿವಮೊಗ್ಗ ಜಿಲ್ಲೆಯ ತೀರ್ಥಹಳ್ಳಿ ತಾಲೂಕು ಕ್ರೀಡಾಂಗಣದಲ್ಲಿ 618 ಕೋಟಿ ರೂ ವೆಚ್ಚದ ವಿವಿಧ ಯೋಜನೆಗಳಿಗೆ ಚಾಲನೆ ನೀಡಿದ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ.
ಅಡಿಕೆ ಬೆಳೆ ಗಳನ್ನು ವೀಕ್ಷಿಸಿದರು. ಈ ವೇಳೆ ಮಾತನಾಡಿದ ಅವರು, ಅಡಿಕೆ ಬೆಳೆಗಾರರು ಧೈರ್ಯ ಕಳೆದುಕೊಳ್ಳುವುದು ಬೇಡ. ನಿಮ್ಮೊಂದಿಗೆ ಸರ್ಕಾರ ಇದೆ. ಬಗರ್ ಹುಕುಂ ಪ್ರದೇಶದಲ್ಲಿ ಅಡಕೆ ಬೆಳೆದಿರುವ ರೈತರಿಗೂ ಸರ್ಕಾರ ಸಹಾಯ ಮಾಡಲಿದೆ. ಈ ಬಗ್ಗೆ ಸರ್ಕಾರ ಚಿಂತನೆ ನಡೆಸಲಿದೆ ಎಂದು ಭರವಸೆ ನೀಡಿದರು.
ಕ್ರಿಮಿಕೀಟಗಳಿಂದ ಅಡಿಕೆ ಬೆಳೆ ಹಾನಿಯಾಗದಂತೆ ತಡೆಯಲು ರಾಜ್ಯ ಸರ್ಕಾರ 10 ಕೋಟಿ ರೂಪಾಯಿ ಅನುದಾನ ಬಿಡುಗಡೆ ಮಾಡಿದೆ ಎಂದು ಹೇಳಿದ ಸಿಎಂ ಬೊಮ್ಮಾಯಿ, ಚಿಕ್ಕಮಗಳೂರು, ಶಿವಮೊಗ್ಗ ಹಾಗೂ ಇತರ ಪ್ರದೇಶಗಳಲ್ಲಿ ಮುಂಜಾಗ್ರತಾ ಕ್ರಮಗಳನ್ನು ಕೈಗೊಳ್ಳಲು ನಿಧಿಯನ್ನು ಬಳಸಲಾಗುವುದು, ಕೀಟ ಸಮಸ್ಯೆಗಳ ಅಧ್ಯಯನಕ್ಕೆ ತಜ್ಞರ ತಂಡವನ್ನು ರಚಿಸಲಾಗಿದೆ ಎಂದರು.
