ಸಾಲ ಬಾಧೆ ತಾಳಲಾರದೆ ಯುವ ರೈತ ಆತ್ಮಹತ್ಯೆ

ಮಂಡ್ಯ : ಸಾಲದ ಬಾಧೆ ತಾಳಲಾರದ ಐವ ರೈತನೋರ್ವ ತನ್ನ ಜಮೀನಿನಲ್ಲಿ ವಿಷ ಸೇವಿಸಿ ಆತ್ಮಹತ್ಯೆ ಮಾಡಿಕೊಂಡಿರುವ ಹೃದಯವಿದ್ರಾವಕ ಘಟನೆ ಪಾಂಡವಪುರ ತಾಲ್ಲೂಕಿನ ಕೋಡಾಲ ಗ್ರಾಮದಲ್ಲಿ ನಡೆದಿದೆ.
ಗ್ರಾಮದ ಕೃಷಿಕ ವರದರಾಜು ಅವರ ಪುತ್ರ ಹೇಮಂತ್ ಕುಮಾರ್(20) ಸಾಲದ ಸುಳಿಗೆ ಸಿಲುಕಿ ಆತ್ಮಹತ್ಯೆ ಮಾಡಿಕೊಂಡಿರುವ ದುರ್ದೈವಿ. ತಂದೆ ವರದರಾಜು ಅವರಿಗೆ ಐದು ಎಕರೆ ಖುಷ್ಕಿ ಜಮೀನಿದ್ದು ಕಳೆದ ಎರಡು ವರ್ಷಗಳ ಹಿಂದೆ ರಸ್ತೆ ಅಪಘಾತವಾಗಿ ಅನಾರೋಗ್ಯಕ್ಕೀಡಾಗಿದ್ದ ಹಿನ್ನೆಲೆಯಲ್ಲಿ ಕುಟುಂಬದ ಜವಾಬ್ದಾರಿಯನ್ನು ಹೇಮಂತ್ ಅವರೇ ನಿಭಾಯಿಸುತ್ತಿದ್ದರು ಎನ್ನಲಾಗಿದೆ. ಕೃಷಿ ಹಾಗೂ ಕುಟುಂಬ ನಿರ್ವಹಣೆಗಾಗಿ ಖಾಸಗಿ ವ್ಯಕ್ತಿಗಳಿಂದ ಹಾಗೂ ವಿವಿಧ ಸಂಘಸಂಸ್ಥೆಗಳಿಂದ ಸುಮಾರು ಹತ್ತು ಲಕ್ಷ ರೂಗಳಿಗೂ ಅಧಿಕ ಸಾಲ ಮಾಡಿದ್ದು ಸಾಲಗಾರರು ಕಿರುಕುಳ ನೀಡುತ್ತಿದ್ದರು ಎನ್ನಲಾಗಿದೆ.
ಈ ಹಿನ್ನೆಲೆಯಲ್ಲಿ ಮನನೊಂದು ಕಳೆದ ಗುರುವಾರ ರಾತ್ರಿ ಊರ ಹೊರವಲಯದ ತಮ್ಮ ಜಮೀನಿನಲ್ಲಿ ವಿಷ ಸೇವಿಸಿದ್ದ ಹೇಮಂತ್ ಅವರನ್ನು ಮೈಸೂರಿನ ಖಾಸಗಿ ಆಸ್ಪತ್ರೆಗೆ ಸೇರಿಸಲಾಗಿತ್ತು. ಆದರೂ ಚಿಕಿತ್ಸೆ ಫಲಕಾರಿಯಾಗದೆ ಸಾವಿಗೀಡಾಗಿದ್ದಾರೆ. ಈ ಸಂಬಂಧ ಪಾಂಡವಪುರ ಪೋಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ




