ಜಿಲ್ಲೆಯಲ್ಲಿ ಬಿಜೆಪಿಗೆ ಬಹುಮತವಿಲ್ಲ ಆದರೂ ಸುಳ್ಳು ಪ್ರಚಾರ: ಬಿ ಎಲ್ ಶಂಕರ್

ಚಿಕ್ಕಮಗಳೂರು: ಜಿಲ್ಲೆಯಲ್ಲಿ 2435 ಮತಗಳಲ್ಲಿ ಬಿಜೆಪಿಗೆ ಬಹುಮತವಿಲ್ಲ. ಆದರೂ ಸುಳ್ಳು ಪ್ರಚಾರ ಭಾಷಣದ ಮೂಲಕ ತಮಗೆ ಬಹುಮತವಿದೆ ಎಂದು ಹೇಳಿಕೊಳ್ಳುತ್ತಿದ್ದಾರೆ ಎಂದು ವಿಧಾನಪರಿಷತ್ ಮಾಜಿ ಸಭಾಪತಿ ಬಿ ಎಲ್ ಶಂಕರ್ ಹೇಳಿದರು.
ಸಖರಾಯಪಟ್ಟಣ ಎಸ್ ಕೆ ಕನ್ವೆನ್ಷನ್ ಹಾಲ್ ನಲ್ಲಿ ಬ್ಲಾಕ್ ಕಾಂಗ್ರೆಸ್ ವತಿಯಿಂದ ಆಯೋಜಿಸಿದ್ದ ವಿಧಾನ ಪರಿಷತ್ ಚುನಾವಣೆ ಪೂರ್ವಭಾವಿ ಸಭೆಯಲ್ಲಿ ಮಾತನಾಡಿ, ಸುಳ್ಳು ಅಭಿಪ್ರಾಯಕ್ಕೆ ತಲೆಕೆಡಿಸಿಕೊಳ್ಳುವ ಅಗತ್ಯವಿಲ್ಲ ಎಂದರು.
ಗಾಯತ್ರಿ ಶಾಂತೇಗೌಡ ರಾಜಕೀಯ ಅನುಭವದ ಜತೆಗೆ ಜನಸಂಪರ್ಕ, ಮತದಾರರನ್ನು ಒಲಿಸಿಕೊಳ್ಳುವ, ಅಧಿಕಾರಿಗಳನ್ನು ಪ್ರಶ್ನಿಸುವ, ಜನರ ಸಮಸ್ಯೆಗಳಿಗೆ ಸ್ಪಂದಿಸುವ ಗುಣ ಹೊಂದಿದ್ದಾರೆ. ಪಕ್ಷದ ಪ್ರತಿಯೊಬ್ಬ ಮುಖಂಡರನ್ನು ವಿಶ್ವಾಸಕ್ಕೆ ಪಡೆದು ಒಮ್ಮತದ ಕಾಂಗ್ರೆಸ್ ಅಭ್ಯರ್ಥಿಯಾಗಿ ಗಾಯತ್ರಿ ಶಾಂತೇಗೌಡ ಅವರನ್ನು ಪರಿಷತ್ ಚುನಾವಣೆಗೆ ಆಯ್ಕೆ ಮಾಡಲಾಗಿದೆ. ಅವರನ್ನು ಗೆಲ್ಲಿಸುವ ನಿಟ್ಟಿನಲ್ಲಿ ಪಕ್ಷದ ಕಾರ್ಯಕರ್ತರು ಸಂಘಟನೆ ಮೂಲಕ ಪಕ್ಷದ ಅಭ್ಯರ್ಥಿ ಗೆಲುವಿಗೆ ಶ್ರಮಿಸಬೇಕೆಂದರು.
ಕಾಂಗ್ರೆಸ್ ಅಭ್ಯರ್ಥಿ ಗಾಯತ್ರಿ ಶಾಂತೇಗೌಡ ಮಾತನಾಡಿ, ಗ್ರಾಮ ಪಂಚಾಯಿತಿಗಳಲ್ಲಿ ಹಲವು ಸಮಸ್ಯೆಗಳಿವೆ. ಅಭಿವೃದ್ಧಿಯಲ್ಲಿ ಹಿನ್ನೆಡೆಯಾಗಿರುವುದನ್ನು ಕಾಣುತ್ತಿದ್ದೇವೆ. ಊದ್ಯೋಗ ಖಾತ್ರಿ ಯೋಜನೆ ಸಮರ್ಪಕವಾಗಿ ಅನುಷ್ಠಾನಗೊಂಡಿಲ್ಲ. ಅನುದಾನದ ಕೊರತೆಯಿದೆ ಎಂದು ಆರೋಪಿಸಿದರು.
ಕಾಂಗ್ರೆಸ್ ಸಮಿತಿ ಜಿಲ್ಲಾಧ್ಯಕ್ಷ ಡಾ. ಕೆ ಪಿ ಅಂಶುಮಂತ್, ಮುಖಂಡ ಎ ಎನ್ ಮಹೇಶ್, ಎಂ ಎಲ್ ಮೂರ್ತಿ ಮಾತನಾಡಿದರು.




