ಹುಬ್ಬಳ್ಳಿಯಲ್ಲಿ ಹರ್ಷ ಕೊಲೆ ಆರೋಪಿಗಳಿಗೆ ಕಠಿಣ ಶಿಕ್ಷೆ ವಿಧಿಸಲು ಅಗ್ರಹ

ಹುಬ್ಬಳ್ಳಿ: ಶಿವಮೊಗ್ಗ ಮೂಲದ ಭಜರಂಗದಳ ಕಾರ್ಯಕರ್ತ ಹರ್ಷ ಹತ್ಯೆಯನ್ನು ಖಂಡಿಸಿ ಹಾಗೂ ಕೊಲೆ ಆರೋಪಿಗಳಿಗೆ ಕಠಿಣ ಶಿಕ್ಷೆ ವಿಧಿಸಲು ಅಗ್ರಹಿಸಿ ಹುಬ್ಬಳ್ಳಿಯಲ್ಲಿ ಉತ್ತರ ಕರ್ನಾಟಕ ಹಿಂದೂ ಪರಿಷತ್ ಕಾರ್ಯಕರ್ತರು ಬೀದಿಗೆ ಇಳಿದು ಪ್ರತಿಭಟನೆ ನಡೆಸಿ ಆಕ್ರೋಶ ಹೊರ ಹಾಕಿದರು.
ನಗರದ ಸಂಗೊಳ್ಳಿ ರಾಯಣ್ಣ ವೃತ್ತದಲ್ಲಿ ಉತ್ತರ ಕರ್ನಾಟಕ ವಿಶ್ವ ಹಿಂದೂ ಪರಿಷತ್ ನೇತೃತ್ವದಲ್ಲಿ ಪ್ರತಿಭಟನೆ ನಡೆಸಿದ ಕಾರ್ಯಕರ್ತರು ಹರ್ಷ ಕೊಲೆ ಆರೋಪಿಗಳ ವಿರುದ್ಧ ಹಾಗೂ ರಾಜ್ಯ ಸರ್ಕಾರದ ವಿರುದ್ಧ ಧಿಕ್ಕಾರ ಕೂಗಿ ತಮ್ಮ ಆಕ್ರೋಶ ಹೊರಹಾಕಿದರು.
ಕಳೆದ ಹಲವು ವರ್ಷಗಳಿಂದ ಹಿಂದೂ ಪರ ಸಂಘಟಕರ ಮೇಲೆ ಹಲ್ಲೆಗಳು ನಡೆಯಿತ್ತಲೇ ಬರುತ್ತಿವೆ. ಇದೀಗ ಭಂಜರಂಗದಳ ಕಾರ್ಯಕರ್ತ ಹರ್ಷ ಅವರನ್ನು ಕೊಲೆ ಮಾಡಲಾಗಿದೆ. ಇದು ಒಳ್ಳೆಯ ಬೆಳವಣಿಗೆಯಲ್ಲ. ಕೊಲೆಗಡುಕರ ವಿರುದ್ಧ ಸರ್ಕಾರ ಕಠಿಣ ಕ್ರಮ ಕೈಗೊಳ್ಳಬೇಕು. ಈಗಾಗಲೇ ಹರ್ಷಾ ಕೊಲೆ ಆರೋಪಿಗಳನ್ನು ಬಂಧಿಸಲಾಗಿದೆ. ಬಂಧಿತ ಆರೋಪಿಗಳ ವಿರುದ್ಧ ಪೊಲೀಸ್ ಇಲಾಖೆ ಸರಿಯಾದ ರೀತಿಯಲ್ಲಿ ಸಾಕ್ಷಿಗಳನ್ನು ಸಂಗ್ರಹ ಮಾಡಬೇಕು. ಸರ್ಕಾರ ಪೊಲೀಸ ಇಲಾಖೆಗೆ ಈ ನಿಟ್ಟಿನಲ್ಲಿ ಎಚ್ಚರಿಕೆಯನ್ನು ನೀಡಬೇಕು ಎಂದು ಅಗ್ರಹಿಸಿದರು.
ಕೊಲೆ ಆರೋಪಿಗಳಿಗೆ ಸಹಕಾರ ನೀಡುವ ಸಂಘಟನೆಗಳ ಕುರಿತು ತನಿಖೆಯನ್ನು ಮಾಡಬೇಕು. ಈ ಕೊಲೆಯ ಹಿಂದೆ ಎಸ್ ಡಿ ಪಿಐ ಹಾಗೂ ಪಿಎಫ್ಐ ಸಂಘಟನೆಗಳ ಕೈವಾಡವಿದೆ. ಹಾಗಾಗಿ ಈ ಸಂಘಟನೆಗಳನ್ನು ಬ್ಯಾನ್ ಮಾಡುವ ಕಡೆಗೆ ರಾಜ್ಯ ಸರ್ಕಾರ ಹೆಜ್ಜೆಯನ್ನು ಇಡಬೇಕು. ಇಲ್ಲವಾದಲ್ಲಿ ರಾಜ್ಯವ್ಯಾಪಿ ಪ್ರತಿಭಟನೆಗೆ ಮುಂದಾಗಬೇಕಾಗುತ್ತದೆ ಎಂದು ಎಚ್ಚರಿಕೆ ನೀಡಿದರು.




