ಸಂವಿಧಾನ ಶಿಲ್ಪಿಗೆ ಅಗೌರವ : ವಿವಿಧ ಸಂಘಟನೆಗಳು ಕರೆ ನೀಡಿದ್ದ ಚಿಕ್ಕಮಗಳೂರು ನಗರ ಬಂದ್ ಉತ್ತಮ ಪ್ರತಿಕ್ರಿಯೆ

ಚಿಕ್ಕಮಗಳೂರು : ರಾಯಚೂರಿನಲ್ಲಿ ನ್ಯಾಯಾಧೀಶ ಮಲ್ಲಿಕಾರ್ಜುನಗೌಡ ಅವರು ಅಂಬೇಡ್ಕರ್ ಭಾವಚಿತ್ರವನ್ನು ತೆಗೆಯದೇ ಧ್ವಜಾರೋಹಣ ಮಾಡುವುದಿಲ್ಲ ಎಂದು ಹೇಳುವ ಮೂಲಕ ಸಂವಿಧಾನ ಶಿಲ್ಪಿಗೆ ಅಪಚಾರ ಮಾಡಿದ ವರ್ತನೆಯನ್ನು ಖಂಡಿಸಿ ವಿವಿಧ ಸಂಘಟನೆಗಳು ನೀಡಿದ್ದ ಚಿಕ್ಕಮಗಳೂರು ಬಂದ್ ಕರೆಗೆ ಉತ್ತಮ ಪ್ರತಿಕ್ರಿಯೆ ವ್ಯಕ್ತವಾಗಿದೆ.
ಗಣರಾಜ್ಯೋತ್ಸವ ದಿನದಂದು, ಅಂಬೇಡ್ಕರ್ ಭಾವಚಿತ್ರವನ್ನು ತೆಗೆಸುವ ಮೂಲಕ ಅಪಚಾರ ಮಾಡಿದ್ದಾರೆ ಎಂದು ವಿವಿಧ ದಲಿತಪರ ಸಂಘಟನೆಗಳು ಆರೋಪಿಸಿವೆ. ನ್ಯಾಯಾಧೀಶರ ವಿರುದ್ಧ ಕಾನೂನು ಕ್ರಮ ಕೈಗೊಳ್ಳುವಂತೆ ಆಗ್ರಹಿಸಿ ಚಿಕ್ಕಮಗಳೂರು ನಗರ ಬಂದ್ ಕರೆ ನೀಡಿದ್ದು ಮುಖ್ಯರಸ್ತೆ ಸೇರಿದಂತೆ ಹಲವೆಡೆ ಅಂಗಡಿ ಮುಂಗಟ್ಟುಗಳನ್ನು ಬಂದ್ ಮಾಡಲಾಗಿತ್ತು. ಜನ ಹಾಗೂ ವಾಹನ ಸಂಚಾರ ಎಂದಿನಂತೆ ಇತ್ತು. ರಾಜ್ಯ ರಸ್ತೆ ಸಾರಿಗೆ ಸಂಸ್ಥೆ ಕೆಲವೊಂದು ಬಸ್ಸುಗಳನ್ನು ಹೊರತುಪಡಿಸಿ, ಉಳಿದಂತೆ ಎಲ್ಲಾ ವಾಹನಗಳು ಸಂಚರಿಸಿದವು.
ಸಂಘಟಕರು ಬಂದ್ ಯಶಸ್ವಿಗೊಳಿಸಲು ಬೆಳಗ್ಗೆಯಿಂದಲೇ ಕಾರ್ಯಪ್ರವೃತ್ತರಾಗಿ ಬೈಕ್ ಜಾಥಾ ನಡೆಸುವ ಮೂಲಕ, ನ್ಯಾಯಾಧೀಶರ ವಿರುದ್ಧ ಘೋಷಣೆ ಕೂಗಿ, ಕ್ರಮ ಕೈಗೊಳ್ಳುವಂತೆ ಸರ್ಕಾರವನ್ನು ಅಗ್ರಹಿಸಿದರು.
ಯಾವುದೇ ಅಹಿತಕರ ಘಟನೆಗಳು ನಡೆಯದಂತೆ ಪೊಲೀಸರು ಕಟ್ಟೆಚ್ಚರ ವಹಿಸಿದ್ದರು. ಕೆಲವರು ಅಂಗಡಿ ಬಾಗಿಲುಗಳು ತೆಗೆದಿರುವುದನ್ನು ಖಂಡಿಸಿ ಪ್ರತಿಭಟನಾಕಾರರು ಆಕ್ರೋಶ ವ್ಯಕ್ತಪಡಿಸಿದರಲ್ಲದೆ, ಬಾಗಿಲು ಹಾಕಿಸುವಲ್ಲಿ ಯಶಸ್ವಿಯಾದರು.
