ಮಳೆ ವೈಪರೀತ್ಯದಿಂದ ರೈತರು ಗುಳೇ ಹೋಗುವ ಪರಿಸ್ಥಿತಿ: ಶಾಸಕ ಟಿ ಡಿ ರಾಜೇಗೌಡ

ಚಿಕ್ಕಮಗಳೂರು: ಮಲೆನಾಡು ಭಾಗದಲ್ಲಿ ಅತೀವೃಷ್ಟಿ, ಅನಾವೃಷ್ಟಿಯಿಂದ ಬೆಳೆದ ಬೆಳೆಗಳ ಮೇಲೆ ವ್ಯತಿರಿಕ್ತ ಪರಿಣಾಮ ಬೀರುತ್ತಿದ್ದು, ರೈತರು ಗುಳೇ ಹೋಗುವ ಪರಿಸ್ಥಿತಿ ಎದುರಾಗಿದೆ ಎಂದು ಶಾಸಕ ಟಿ ಡಿ ರಾಜೇಗೌಡ ಆತಂಕ ವ್ಯಕ್ತಪಡಿಸಿದರು.
ಕೊಪ್ಪದಲ್ಲಿ ಕಾಲೇಜು ಮತ್ತು ತಾಂತ್ರಿಕ ಶಿಕ್ಷಣ ಇಲಾಖೆ ಸಹಯೊಗದಲ್ಲಿ ನೂತನವಾಗಿ ನಿರ್ಮಾಣವಾಗಿರುವ ಸರ್ಕಾರಿ ಪಾಲಿಟೆಕ್ನಿಕ್ ಕಾಲೇಜಿನ ಪ್ರಥಮ ವರ್ಷದ ಡಿಪ್ಲೋಮಾ ಪ್ರವೇಶಾತಿ ಸಂಬಂಧ ಸುದ್ದಿಗೋಷ್ಠಿಯಲ್ಲಿ ಅವರು ಮಾತನಾಡಿ, ಇತ್ತೀಚಿನ ಅರಣ್ಯ ಕಾಯ್ದೆಗಳಿಂದ ಕೃಷಿ ಚಟುವಟಿಕೆ ಮುಂದುವರಿಸಲು ಸಾಧ್ಯವಾಗುತ್ತಿಲ್ಲ. ರೈತರು ಉಪಯೋಗಿಸುವ ರಸಗೊಬ್ಬರ, ನೀರಾವರಿಗೆ ಬಳಸುವ ಪಂಪ್ಸೆಟ್, ಪೆಟ್ರೋಲ್, ಡೀಸೆಲ್ ಬೆಲೆ ಗಗನಕ್ಕೆ ಏರಿ ಕೃಷಿ ಚಟುವಟಿಕೆ ನಡೆಸದಂತಹ ಪರಿಸ್ಥಿತಿ ಎದುರಾಗಿದೆ ಎಂದರು.
ಹೀಗಿರುವಾಗ ಮಲೆನಾಡಿನ ಗ್ರಾಮೀಣ ಭಾಗದಲ್ಲಿ ನೂತನವಾಗಿ ಪ್ರಾರಂಭಿಸುತ್ತಿರುವ ಪಾಲಿಟೆಕ್ನಿಕ್ ಕಾಲೇಜು ಈ ಭಾಗದ ವಿದ್ಯಾರ್ಥಿಗಳ ಭವಿಷ್ಯಕ್ಕೆ ಆಶಾದಾಯಕವಾಗಿದೆ. ಕೃಷಿಕರ, ಬಡವರ್ಗದ ಮಕ್ಕಳು ಇಲ್ಲಿ ತಾಂತ್ರಿಕ ಶಿಕ್ಷಣವನ್ನುಪಡೆದು ನಂತರ ಉನ್ನತ ಶಿಕ್ಷಣ ಪಡೆದು, ಸ್ವ-ಉದ್ಯೋಗ ಹೊಂದಿ ಸ್ವಾವಲಂಬಿಗಳಾಗಲು ಸಹಕಾರಿಯಾಗಲಿದೆ ಎಂದರು.
ಕೊಪ್ಪದಲ್ಲಿ ಪಾಲಿಟೆಕ್ನಿಕ್ ಕಾಲೇಜಿಗೆ ಹಿಂದೆಯೇ ಪ್ರಸ್ತಾವನೆ ಸಲ್ಲಿಸಲಾಗಿತ್ತು. ನಂತರದ ಅವಧಿಯಲ್ಲಿ ಸಿದ್ದರಾಮಯ್ಯ ಸಿಎಂ ಆದಾಗ ಅನುದಾನ ಬಿಡುಗಡೆಯಾಗಿತ್ತು. ಒಟ್ಟು 15 ಕೋಟಿ ವೆಚ್ಚದಲ್ಲಿ ನಿರ್ಮಾಣಗೊಂಡಿದ್ದ ಕಾಲೇಜು ಆರಂಭಕ್ಕೆ ಸಿದ್ಧತೆ ನಡೆದಿದೆ ಎಂದು ಮಾಹಿತಿ ನೀಡಿದರು.




