ACB Raid: ಗುತ್ತಿಗೆದಾರನಿಂದ ಲಂಚ ಸ್ವೀಕರಿಸುವಾಗ ಎಸಿಬಿ ಬಲೆಗೆ ಬಿದ್ದ ಜಿಲ್ಲಾ ಪಂಚಾಯತ್ ಅಧಿಕಾರಿ

ಕಾರವಾರ : ಕಟ್ಟಡ ನಿರ್ಮಿಸಿದ್ದ ಗುತ್ತಿಗೆದಾರನಿಗೆ ಬಿಲ್ ಮಾಡಿಕೊಡಲು ಲಂಚ ಸ್ವೀಕರಿಸುತ್ತಿದ್ದ ವೇಳೆ ಎಸಿಬಿ ದಾಳಿ ನಡೆಸಿ, ಇಬ್ಬರು ಆರೋಪಿಗಳನ್ನು ಬಂಧಿಸಿದ ಘಟನೆ ಉತ್ತರ ಕನ್ನಡ ಜಿಲ್ಲೆಯ ಶಿರಸಿ ನಗರದ ಜಿಲ್ಲಾ ಪಂಚಾಯತದಲ್ಲಿ ಇಂದು ನಡೆದಿದೆ.
ಶಿರಸಿ ಜಿಲ್ಲಾ ಪಂಚಾಯತದಲ್ಲಿ ಪ್ರಥಮ ದರ್ಜೆ ಸಹಾಯಕರಾಗಿ ಕರ್ತವ್ಯ ನಿರ್ವಹಿಸುತ್ತಿದ್ದ ಯದುನಂದನ್ ಮತ್ತು ಗುತ್ತಿಗೆ ಆಧಾರದ ಮೇಲೆ ಕಾರ್ಯ ನಿರ್ವಹಿಸುತ್ತಿದ್ದ ಸಿಬ್ಬಂದಿ ಸುಬ್ರಹ್ಮಣ್ಯ ಬಂಧಿತ ಆರೋಪಿಗಳಾಗಿದ್ದಾರೆ. ಶಿವಮೊಗ್ಗದ ಸುನೀಲ್ ಎಂಬ ಗುತ್ತಿಗೆದಾರನಿಂದ 12 ಸಾವಿರ ರೂ.ಲಂಚ ಸ್ವೀಕರಿಸುತ್ತಿದ್ದ ವೇಳೆ ಹಣದ ಸಮೇತ ವಶಕ್ಕೆ ಪಡೆಯಲಾಗಿದೆ.
ಗುತ್ತಿಗೆದಾರನಿಗೆ 4 ಲಕ್ಷ ರೂ. ಗಳ ಬಿಲ್ ಮಾಡಿಕೊಡಲು ಲಂಚ ಸ್ವೀಕರಿಸುತ್ತಿದ್ದಾಗ ದಾಳಿ ನಡೆದಿದ್ದು,ಹಿಂದಿನಿಂದಲೂ ಈ ಗುತ್ತಿಗೆದಾರನಿಂದ ಹಣಕ್ಕಾಗಿ ಪೀಡಿಸುತ್ತಿದ್ದರು. ಈ ಹಿನ್ನೆಲೆಯಲ್ಲಿ ಕಾರವಾರದ ಎಸಿಬಿ ಠಾಣೆಯಲ್ಲಿ ಗುತ್ತಿಗೆದಾರ ದೂರು ನೀಡಿದ್ದರು. ದೂರಿನನ್ವಯ ಇಂದು ಡಿವೈಎಸ್ಪಿ ವೀರೇಶ್ ನೇತೃತ್ವದಲ್ಲಿ ದಾಳಿ ನಡೆದಿದ್ದು, ಕಾರವಾರ ಎಸಿಬಿ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.




