ದಕ್ಷಿಣ ಕನ್ನಡ
ಆಂಬುಲೆನ್ಸ್ ಸಂಚಾರಕ್ಕೆ ಅಡ್ಡಿಪಡಿಸಿದ ಆರೋಪಿಯ ಬಂಧನ

ಮಂಗಳೂರು: ದೇರಳಕಟ್ಟೆಯಿಂದ ಮಂಗಳೂರು ರಸ್ತೆಯಲ್ಲಿ ಚಲಿಸುತ್ತಿದ್ದ ತುರ್ತು ಆರೋಗ್ಯ ವಾಹನದ ಸಂಚಾರಕ್ಕೆ ಅಡ್ಡಿಪಡಿಸಿದ ಆರೋಪದಲ್ಲಿ ಯುವಕನೋರ್ವನನ್ನು ಮಂಗಳೂರು ಸಂಚಾರ ದಕ್ಷಿಣ ಠಾಣೆಯ ಪೊಲೀಸರು ಬಂಧಿಸಿದ್ದಾರೆ.
ಕುಂಪಲದ ಚರಣ್ (31) ಬಂಧಿತ ಆರೋಪಿ. ತುರ್ತಾಗಿ ಬರುತ್ತಿದ್ದ ಅಂಬುಲೆನ್ಸ್ ಸಂಚಾರಕ್ಕೆ ಅಡ್ಡಿಯಾಗುವಂತೆ ಆರೋಪಿ ತನ್ನ ಕಾರನ್ನು ಮನಬಂದಂತೆ ಅಡ್ಡಾದಿಡ್ಡಿ ಚಲಾಯಿಸಿದ್ದ. ಆಂಬುಲೆನ್ಸ್ ಒಳಗಿದ್ದವರು ಕಾರ್ ಚಾಲಕನ ಅತಿರೇಕದ ವರ್ತನೆಯನ್ನು ಮೊಬೈಲ್ ಕ್ಯಾಮೆರದಲ್ಲಿ ಸೆರೆಹಿಡಿದು ಸಾಮಾಜಿಕ ಜಾಲತಾಣಗಳಲ್ಲಿ ಹಾಕಿದ್ದರು. ಕಾರ್ ಚಾಲಕನ ವರ್ತನೆ ಸಾರ್ವಜನಿಕ ವಲಯದಲ್ಲಿ ವ್ಯಾಪಕ ಆಕ್ರೋಶಕ್ಕೆ ಕಾರಣವಾಗಿತ್ತು. ಇದನ್ನು ಗಮನಿಸಿದ ಪೊಲೀಸರು ಸ್ವಯಂ ಪ್ರಕರಣ ದಾಖಲಿಸಿಕೊಂಡು ತನಿಖೆ ನಡೆಸಿ, ಆರೋಪಿ ಚರಣ್ ಮತ್ತು ಆತನ ಕಾರನ್ನು ವಶಕ್ಕೆ ಪಡೆದಿದ್ದಾರೆ.




