ದಾವಣಗೆರೆ: ಆ.16ರವರೆಗೆ ರಾತ್ರಿ ಕರ್ಫ್ಯೂ

ದಾವಣಗೆರೆ: ಕೊರೊನಾ ಮೂರನೇ ಅಲೆ ಭೀತಿ ಹಿನ್ನೆಲೆಯಲ್ಲಿ ಜಿಲ್ಲೆಯಾದ್ಯಂತ ಇಂದು ರಾತ್ರಿ 10 ಗಂಟೆಯಿಂದ ಆಗಸ್ಟ್ 16 ರ ಬೆಳಿಗ್ಗೆ 6 ಗಂಟೆಯವರೆಗೆ ಕರ್ಫ್ಯೂ ಜಾರಿಗೊಳಿಸಿ ಜಿಲ್ಲಾಡಳಿತ ಆದೇಶ ಹೊರಡಿಸಿದೆ.
ವಿಪತ್ತು ನಿರ್ವಹಣಾ ಕಾಯ್ದೆಯನ್ವಯ ಅನುಮತಿಸಿದ ಚಟುವಟಿಕೆಗಳಿಗೆ ವಿನಾಯಿತಿ ನೀಡಿ ತಕ್ಷಣದಿಂದ ಜಾರಿಗೆ ಬರುವಂತೆ ರಾತ್ರಿ ಹತ್ತು ಗಂಟೆಯಿಂದ ಬೆಳಿಗ್ಗೆ 5ಗಂಟೆಯವರೆಗೆ ಕರ್ಫ್ಯೂ ಜಾರಿಗೊಳಿಸಿ ಜಿಲ್ಲಾಧಿಕಾರಿ ಮಹಾಂತೇಶ ಬೀಳಗಿ ಆದೇಶ ಹೊರಡಿಸಿದ್ದಾರೆ.
ಮಹಾರಾಷ್ಟ್ರ ಮತ್ತು ಕೇರಳ ರಾಜ್ಯದಿಂದ ಬರುವ ವ್ಯಕ್ತಿಗಳ ಮೇಲೆ ವಿಶೇಷ ಕಣ್ಗಾವಲು ಇಡಲು ನಿರ್ಧರಿಸಲಾಗಿದೆ.
ಇಂದಿನಿಂದ ಆಗಸ್ಟ್ 31ರವರೆಗೆ ಕೂಡಲೇ ಜಾರಿಗೆ ಬರುವಂತೆ ಜಿಲ್ಲೆಯ ಎಲ್ಲಾ ಮುಜರಾಯಿ ದೇವಾಲಯಗಳು ಮತ್ತು ಖಾಸಗಿ ದೇಗುಲಗಳಲ್ಲಿ ಕಡ್ಡಾಯವಾಗಿ ಸಾಮಾಜಿಕ ಅಂತರ, ಅಗತ್ಯ ಕೋವಿಡ್ ನಿಯಂತ್ರಣ ಮುಂಜಾಗ್ರತಾ ಕ್ರಮ ಕೈಗೊಂಡು ಭಕ್ತಾದಿಗಳಿಗೆ ದೇವಾಲಯದ ಪ್ರವೇಶ, ದೇವರ ದರ್ಶನಕ್ಕೆ ಮಾತ್ರ ಸೀಮಿತಗೊಳಿಸಿ ಆದೇಶಿಸಲಾಗಿದೆ.
ಉತ್ಸವ, ಸೇವೆ, ಮುಡಿ, ಪ್ರಸಾದ, ದಾಸೋಹ ಸೇರಿದಂತೆ ಜನರು ನಡೆಸುವ ಹೋಮ, ಹವನಕ್ಕೆ ನಿಷೇಧಿಸಲಾಗಿದೆ. ಶನಿವಾರ ಮತ್ತು ಭಾನುವಾರ ಅರ್ಚಕರಿಂದ ಸಾಂಪ್ರಾದಾಯಿಕ ಪೂಜೆ ಮಾತ್ರ ಅವಕಾಶ ನೀಡಲಾಗಿದೆ. ಭಕ್ತಾದಿಗಳ ಪ್ರವೇಶವನ್ನು ಸಂಪೂರ್ಣವಾಗಿ ನಿರ್ಬಂಧಿಸಿ ಆದೇಶ ಹೊರಡಿಸಲಾಗಿದೆ ಎಂದು ಜಿಲ್ಲಾಧಿಕಾರಿ ಮಹಾಂತೇಶ್ ಆರ್. ಬೀಳಗಿ ತಿಳಿಸಿದ್ದಾರೆ.




