Farmers Protest: ಈರುಳ್ಳಿ, ಆಲೂಗೆಡ್ಡೆಗೆ ಬೆಂಬಲ ಬೆಲೆ ಘೋಷಿಸಲು ರೈತರ ಆಗ್ರಹ

ಚಿಕ್ಕಮಗಳೂರು: ಈರುಳ್ಳಿ ಮತ್ತು ಆಲೂಗೆಡ್ಡೆಗೆ ಸರ್ಕಾರ ಬೆಂಬಲ ಬೆಲೆ ಘೋಷಿಸಬೇಕೆಂದು ಆಗ್ರಹಿಸಿ ರೈತರು ಅಜ್ಜಂಪುರದಲ್ಲಿ ಪ್ರತಿಭಟನೆ ನಡೆಸಿದರು.
ಈ ಪ್ರದೇಶದಲ್ಲಿ ಸುಮಾರು 4 ಸಾವಿರಕ್ಕೂ ಹೆಚ್ಚು ರೈತರು 11.5 ಸಾವಿರ ಎಕರೆಯಲ್ಲಿ ಈರುಳ್ಳಿ ಬೆಳೆಯುತ್ತಿದ್ದಾರೆ. ಬೆಲೆ ಕುಸಿತದಿಂದ ರೈತರು ಕಂಗಾಲಾಗಿದ್ದಾರೆ ಎಂದು ಪ್ರತಿಭಟನಾಕಾರರು ಕಳವಳ ವ್ಯಕ್ತಪಡಿಸಿದರು.
ಪ್ರತೀ ಎಕರೆಗೆ 50 ಸಾವಿರ ರೂ. ಉತ್ಪಾದನಾ ವೆಚ್ಚ ತಗುಲುತ್ತಿದೆ. ಈಗ ಕೇವಲ 10 ಸಾವಿರ ರೂ ಸಿಗುತ್ತಿದೆ. ನಷ್ಟ ಸರಿದೂಗಿಸಲು ಸರ್ಕಾರ ತಕ್ಷಣ ಮಧ್ಯಪ್ರವೇಶಿಸಬೇಕೆಂದು ವಿವಿಧ ಪಕ್ಷ ಸಂಘಟನೆಗಳ ಮುಖಂಡರು ಆಗ್ರಹಿಸಿದರು.
ಬೆಲೆ ಕುಸಿತದಿಂದ ರೈತರು ಸಂಕಷ್ಟಕ್ಕೆ ಒಳಗಾಗಿದ್ದಾರೆ. ಸರ್ಕಾರ ಸ್ಪಂದಿಸದೆ ಜಾಣಕುರುಡುತನ ಪ್ರದರ್ಶಿಸುತ್ತಿದೆ. ಈ ಭಾಗದ ಶಾಸಕರು ಸದನದಲ್ಲಿ ವಿಷಯ ಪ್ರಸ್ತಾಪಿಸಿ ರೈತರ ನೆರವಿಗೆ ಧಾವಿಸಬೇಕೆಂದು ಒತ್ತಾಯಿಸಿದರು.
ಗುರು ಸಿದ್ದರಾಮೇಶ್ವರ ರೈತ ಉತ್ಪಾದಕರ ಸಂಘದ ಆಶ್ರಯದಲ್ಲಿ ಹಮ್ಮಿಕೊಂಡಿದ್ದ ಪ್ರತಿಭಟನಾ ಮೆರವಣಿಗೆಯಲ್ಲಿ ಕೃಷಿಕರು ಪಾಲ್ಗೊಂಡಿದ್ದರು. ವಿವಿಧ ಸಂಘಟನೆಗಳು ಬೆಂಬಲ ನೀಡಿದ್ದು, ಕೃಷಿಕರ ಹೋರಾಟಕ್ಕೆ ಬೆಂಬಲವಾಗಿ ಕೆಲಕಾಲ ಅಂಗಡಿ ಮುಂಗಟ್ಟುಗಳು ಮುಚ್ಚಿದ್ದವು.




