100 ಕೋಟಿ ಲಸಿಕೆ ಸಾಧನೆ : ಬಾಗಲಕೋಟೆಯಲ್ಲಿ ವೈದ್ಯರಿಗೆ ಸನ್ಮಾನ

ಬಾಗಲಕೋಟೆ: ದೇಶದಲ್ಲಿ 100 ಕೋಟಿ ಲಸಿಕೆ ವಿತರಣೆ ಗುರಿ ತಲುಪಿದ ಹಿನ್ನೆಲೆಯಲ್ಲಿ ಬಾಗಲಕೋಟೆಯಲ್ಲಿ ಬಿಜೆಪಿ ಘಟಕದಿಂದ ವೈದ್ಯರಿಗೆ ಸನ್ಮಾನಿಸಿ ಅಭಿನಂದಿಸಲಾಯಿತು.
ಬಾಗಲಕೋಟೆ ಜಿಲ್ಲಾಸ್ಪತ್ರೆಯಲ್ಲಿ ಜಿಲ್ಲಾ ಸರ್ಜನ್ ಪ್ರಕಾಶ್ ಬಿರಾದಾರ ಸೇರಿದಂತೆ ಜಿಲ್ಲೆಯ ವೈದ್ಯಕೀಯ ಸಿಬ್ಬಂದಿ ಕಾರ್ಯವನ್ನು ಶ್ಲಾಘಿಸಿದರು. ಬಿಜೆಪಿ ಜಿಲ್ಲಾಧ್ಯಕ್ಷ ಶಾಂತಗೌಡ ಪಾಟೀಲ್ ವೈದ್ಯರಿಗೆ ಸನ್ಮಾನಿಸಿ ಮಾತನಾಡಿದರು. ಕೋವಿಡ್ ಸಂಕಷ್ಟದಲ್ಲೂ ವೈದ್ಯರು ಜೀವದ ಹಂಗು ತೊರೆದು ಕಾರ್ಯ ನಿರ್ವಹಿಸಿದ್ದಾರೆ. ಈಗ ಲಸಿಕಾ ಅಭಿಯಾನದಲ್ಲಿ ವೈದ್ಯಕೀಯ ಸಿಬ್ಬಂದಿ ಕಾರ್ಯದಿಂದ ದೇಶದಲ್ಲಿ 100 ಕೋಟಿ ಜನರಿಗೆ ಲಸಿಕೆ ಹಾಕಲಾಗಿದೆ. ದೇಶದ ಪ್ರಧಾನಿ ನರೇಂದ್ರ ಮೋದಿ ದೇಶದ ಜನತೆಗೆ ಉಚಿತ ಲಸಿಕೆ ನೀಡುವ ಮೂಲಕ ವಿಶ್ವಕ್ಕೆ ಮಾದರಿಯಾಗಿದ್ದಾರೆ ಎಂದರು.
ಬಳಿಕ ಸುದ್ದಿಗೋಷ್ಠಿಯಲ್ಲಿ ಶಾಸಕ ವೀರಣ್ಣ ಚರಂತಿಮಠ ಹಾಗೂ ಬಿಜೆಪಿ ಜಿಲ್ಲಾಧ್ಯಕ್ಷ ಶಾಂತಗೌಡ ಪಾಟೀಲ್ ಸೇರಿದಂತೆ ಬಿಜೆಪಿ ಮುಖಂಡರು ಭಾಗಿಯಾಗಿ. 100ಕೋಟಿ ಜನರಿಗೆ ಲಸಿಕೆ ನೀಡಿರುವ ಕಾರ್ಯಕ್ಕೆ ಮೆಚ್ಚುಗೆ ವ್ಯಕ್ತಪಡಿಸಿದರು. ಜೊತೆಗೆ ಪ್ರಧಾನಮಂತ್ರಿ ನರೇಂದ್ರ ಮೋದಿ ಹಾಗು ವೈದ್ಯರು, ಮುಂಚೂಣಿ ಕಾರ್ಯಕರ್ತರಿಗೆ ಅಭಿನಂದಿಸಿದರು.
ಈ ಸಂದರ್ಭದಲ್ಲಿ ಬಿಜೆಪಿ ಜಿಲ್ಲಾ ಪ್ರಧಾನ ಕಾರ್ಯದರ್ಶಿ ರಾಜು ನಾಯ್ಕರ, ಜಿಲ್ಲಾ ವಕ್ತಾರ ಸತ್ಯನಾರಾಯಣ ಹೇಮಾದ್ರಿ, ಜಿಲ್ಲಾ ವೈದ್ಯಕೀಯ ಪ್ರಕೋಷ್ಟ ಸಂಚಾಲಕರು ಡಾ ಶೇಖರ ಮಾನೆ ಹಾಗೂ ಕಾರ್ಯಕರ್ತರು ಇದ್ದರು.




