ಬಾಲಚಂದ್ರ ಜಾರಕಿಹೊಳಿ ಜಾಣಕುರುಡತನ: ಪ್ರವಾಹಕ್ಕೆ ಸಿಲುಕಿದವರಿಗೆ ಸಿಕ್ಕಿಲ್ಲ ಇನ್ನು ಸೂರಿನ ಭಾಗ್ಯ

ಧಾರವಾಡ: ರಾಜ್ಯ ರಾಜಕಾರಣದಲ್ಲಿ ಸದಾ ಆ್ಯಕ್ಟಿವ್ ಆಗಿರುವ ಪವರ್ ಫುಲ್ ವ್ಯಕ್ತಿ ರಮೇಶ್ ಜಾರಕಿಹೋಳಿ ತಮ್ಮದೇ ಕ್ಷೇತ್ರದ ಜನರ ಕಣ್ಣೀರು ಒರೆಸುವಲ್ಲಿ ವಿಫಲರಾಗಿದ್ದಾರೆ. ಅಧಿಕಾರಿಗಳು, ರಾಜಕಾರಣಿಗಳ ನಿರ್ಲಕ್ಷಕ್ಕೆ ಬೇಸತ್ತ ನೆರೆ ಸಂತ್ರಸ್ತರು ಇಂದು ಬೆಳಗಾವಿಯ ಜಿಲ್ಲಾಧಿಕಾರಿ ಕಚೇರಿ ಮುಂದೆ ಪ್ರತಿಭಟನೆ ನಡೆಸಿ ಸರ್ಕಾರದ ಕಣ್ಣು ತೆರೆಸಲು ಪ್ರಯತ್ನಿಸಿದ್ದಾರೆ.
ಗೋಕಾಕ್ ತಾಲೂಕಿನ ಅರಭಾವಿ ಕ್ಷೇತ್ರದಲ್ಲಿ 2019ರಲ್ಲಿ ಪ್ರವಾಹದಿಂದ ಮನೆ ಕಳೆದುಕೊಂಡ ಸಂತ್ರಸ್ತರಿಗೆ ಇದುವರೆಗೂ ಸರ್ಕಾರ ಮನೆ ಕಟ್ಟಿ ಕೊಟ್ಟಿಲ್ಲವಂತೆ. ಇದರಿಂದ ಆಕ್ರೋಶಗೊಂಡಿರುವ ಸಂತ್ರಸ್ತರು ಭುತ್ತಿ ಕಟ್ಟಿಕೊಂಡು ಬೆಳಗಾವಿ ಡಿಸಿ ಕಚೇರಿ ಮುಂಭಾಗದಲ್ಲಿ ಪ್ರತಿಭಟನೆಗೆ ಮುಂದಾಗಿರುವ ಸಂತ್ರಸ್ತರು ನಮಗೆ ಮನೆ ಆದೇಶ ಬರುವರೆಗೂ ಇಲ್ಲಿಂದ ಕದಲುವುದಿಲ್ಲ ಎಂದು ಎಚ್ಚರಿಸಿದ್ದಾರೆ.
ಅರಭಾವಿ ಕ್ಷೇತ್ರದ ಅಡಿಬಟ್ಟಿ, ಚಿಗಡೊಳ್ಳಿ, ಮೇಳವಂಕಿ, ಹಡಗಿನಾಳ, ಉದಗಟ್ಟಿ, ತಿಗಡಿ, ಮಸಗುಪ್ಪಿ, ಕಲಾರಕೊಪ್ಪ, ಅಳ್ಳಿಮಟ್ಟಿ, ಸುಣಧೋಳಿ, ಢವಳೇಶ್ವರ, ಮುನ್ಯಾಳ, ಕಮಲದಿನ್ನಿ, ರಂಗಾಪುರ ಸೇರಿದಂತೆ ಘಟಪ್ರಭಾ ನದಿ ದಂಡೆಯ ಹಲವು ಹಳ್ಳಿಗಳ 200ಕ್ಕೂ ಹೆಚ್ಚು ಸಂತ್ರಸ್ತರು ಬುಧವಾರ ಬೆಳಗಾವಿಯ ಕನ್ನಡ ಸಾಹಿತ್ಯ ಭವನದಿಂದ ಡಿಸಿ ಕಚೇರಿ ವರೆಗೂ ಪ್ರತಿಭಟನಾ ರ್ಯಾಲಿ ನಡೆಸಿ ಡಿಸಿ ಕಚೇರಿ ಮುಂಭಾಗದಲ್ಲಿ ಧರಣಿ ನಡೆಸಿದರು. ತಮಗೆ ಮನೆ ಕಟ್ಟಿಸಿಕೊಡುವಂತೆ ಆಗ್ರಹಿಸಿ ಘೋಷಣೆ ಕೂಗಿದರು.
ಇನ್ನು ನೆರೆ ಸಂತ್ರಸ್ತರ ಮನೆ ಕಟ್ಟಿ ಕೊಡುವಂತೆ ಸ್ಥಳೀಯ ಬಿಜೆಪಿ ಶಾಸಕ ಬಾಲಚಂದ್ರ ಜಾರಕಿಹೋಳಿ ಅವರನ್ನ ಸಂಪರ್ಕಿಸಿದರೂ ಕೂಡ ಯಾವುದೇ ಪ್ರಯೋಜನವಾಗಿಲ್ಲ ಎಂದು ಜನ ಅಳಲು ತೋಡಿಕೊಳ್ಳುತ್ತಿದ್ದಾರೆ. ತಮ್ಮ ಮನೆ ಬಿದ್ದಿರುವ ಫೋಟೋ ಹಿಡಿದು ಪ್ರತಿಭಟನೆ ನಡೆಸಿದ ಹಳ್ಳಿಗರ ಪರಿಸ್ಥಿತಿ ಕಂಡು ಬೆಳಗಾವಿ ಜನ ಕೂಡ ಮರಕು ಪಟ್ಟು ಶಾಸಕರು ಹಾಗೂ ಅಧಿಕಾರಿಗಳಿಗೆ ಹಿಡಿ ಶಾಪ ಹಾಕಿದರು.
ಇನ್ನು ಹೋರಾಟಕ್ಕೆ ಸಂಬಂಧಿಸಿದಂತೆ ಮಾಹಿತಿ ಹಕ್ಕು ಕಾರ್ಯಕರ್ತ ಭೀಮಪ್ಪ ಗಡಾದ್ ಮಾತನಾಡಿ ಅರಭಾವಿ ಕ್ಷೇತ್ರದಲ್ಲಿ 2019ರಲ್ಲಿ ಪ್ರವಾಹದಿಂದ ಮನೆ ಕಳೆದುಕೊಂಡವರಿಗೆ ಮನೆ ಪರಿಹಾರ ಕೊಟ್ಟಿಲ್ಲ. ಅಧಿವೇಶನದಲ್ಲಿ ಈ ಬಗ್ಗೆ ಚರ್ಚೆ ಮಾಡಬೇಕು. ಜಿಲ್ಲಾ ಉಸ್ತುವಾರಿ ಸಚಿವರು ಎಲ್ಲಾ ಮನೆಗಳಿಗೆ ಪರಿಹಾರ ಕೊಟ್ಟಿದ್ದೇವೆ ಎಂದು ಹೇಳಿದ್ದಾರೆ. ಅವರು ಪ್ರತ್ಯಕ್ಷವಾಗಿ ಪ್ರವಾಹಕ್ಕೆ ಹಾನಿಯಾದ ಮನೆಗಳಿಗೆ ಭೇಟಿ ನೀಡಿ ಸತ್ಯಾಸತ್ಯತೆಯನ್ನು ಪರಿಶೀಲನೆ ನಡೆಸಬೇಕು. ಮನೆಗಳ ಆದೇಶ ಬರುವವರೆಗೆ ಜಿಲ್ಲಾಧಿಕಾರಿಗಳ ಕಚೇರಿ ಬಿಟ್ಟು ಹೋಗುವುದಿಲ್ಲ. ಬುತ್ತಿ ಕಟ್ಟಿಕೊಂಡೇ ಬಂದಿದ್ದೇವೆ ಎಂದು ಹೇಳಿದರು.
ಒಟ್ಟಾರೆ ಜಾರಕಿಹೊಳಿ ಸಾಹುಕಾರ್ರ ಕ್ಷೇತ್ರದಲ್ಲಿಯೇ ಈ ರೀತಿ ಬಡ ಸಂತ್ರಸ್ತರಿಗೆ ಇದುವರೆಗೂ ಸರ್ಕಾರದಿಂದ ಮನೆ ಸಿಗದೇ ಇರುವುದು ದೊಡ್ಡ ವಿಪರ್ಯಾಸದ ಸಂಗತಿ. ಇನ್ನು ಮೇಲಾದರೂ ಈ ಭಾಗದ ಶಾಸಕ ಬಾಲಚಂದ್ರ ಜಾರಕಿಹೊಳಿ ತಮ್ಮದೇ ಪಕ್ಷ ಅಧಿಕಾರದಲ್ಲಿ ಇರುವುದರಿಂದ ಆದಷ್ಟು ಬೇಗನೇ ಈ ಸಂತ್ರಸ್ತರಿಗೆ ಮನೆ ಕಟ್ಟಿಸಿಕೊಡುವ ಕೆಲಸ ಆಗಬೇಕಿದೆ.




