ಆದಿವಾಸಿ ಮಹಿಳೆಯರ ಮೇಲಿನ ದೌರ್ಜನ್ಯ ತಡೆಯುವಲ್ಲಿ ಪ್ರಧಾನಿ ಮೋದಿ ವಿಫಲ: ಎಫ್. ಹೆಚ್. ಜಕ್ಕಪ್ಪನವರ್

ಧಾರವಾಡ : ಪ್ರಧಾನಿ ನರೇಂದ್ರ ಮೋದಿ ನೇತೃತ್ವದ ಕೇಂದ್ರ ಸರ್ಕಾರ ಬಂದಾಗಿನಿಂದ ರಾಷ್ಟ್ರದಲ್ಲಿ ದಲಿತ ಮತ್ತು ಆದಿವಾಸಿಗಳ ಮಹಿಳೆಯರ ಮೇಲೆ ಹೆಚ್ಚು ದೌರ್ಜನ್ಯಗಳು ನಡೆಯುತ್ತಿವೆ. ಅಲ್ಲದೆ ಬಿಜೆಪಿ ನೇತೃತ್ವದ ಸರ್ಕಾರಗಳು ಇರುವ ರಾಜ್ಯದಲ್ಲಿಯು ಕೂಡಾ ದಲಿತ ಆದಿವಾಸಿ ಮಹಿಳೆಯರ ಮೇಲೆ ಅತ್ಯಾಚಾರ, ಕೊಲೆ ಪ್ರಕರಣಗಳು ಆತಂಕ ಮೂಡಿಸುತ್ತಿವೆ. ಪ್ರಧಾನಿ ಮೋದಿಯವರು ಈ ದೌರ್ಜನ್ಯ ತಡೆಯುವಲ್ಲಿ ಸಂಪೂರ್ಣ ವಿಫಲರಾಗಿದ್ದಾರೆ ಎಂದು ಕರ್ನಾಟಕ ಪ್ರದೇಶ ಕಾಂಗ್ರೆಸ್ ಸಮಿತಿಯ ಪರಿಶಿಷ್ಟ ಜಾತಿಯ ಅಧ್ಯಕ್ಷ ಎಫ್. ಎಚ್.ಜಕ್ಕಪ್ಪನವರ್ ವಾಗ್ದಾಳಿ ನಡೆಸಿದರು.
ಹುಬ್ಬಳ್ಳಿಯಲ್ಲಿ ಸುದ್ದಿಗೋಷ್ಠಿ ನಡೆಸಿ ಮಾತನಾಡಿದ ಅವರು, ಕೇಂದ್ರ ಸರ್ಕಾರ ಹಾಗೂ ಬಿಜೆಪಿ ನೇತೃತ್ವದಲ್ಲಿ ಇರುವ ರಾಜ್ಯಗಳಲ್ಲಿ ದಲಿತರ ಸಂರಕ್ಷಣೆ ಆಗುತ್ತಿಲ್ಲ. ಕಳೆದ ಮೂರು ವರ್ಷಗಳ ಹಿಂದೆ ಸಂವಿಧಾನ ಪ್ರತಿ ಸುಟ್ಟು ಅಪಮಾನ ಮಾಡಿದವರನ್ನು ಇದುವರೆಗೂ ಪ್ರಧಾನಿ ನರೇಂದ್ರ ಮೋದಿ ಸರ್ಕಾರ ಬಂಧಿಸಿಲ್ಲ. ಬಿಜೆಪಿ ಅಧಿಕಾರಕ್ಕೆ ಬಂದಾಗಿನಿಂದ ದಲಿತ ಮತ್ತು ಆದಿವಾಸಿಗಳ ಮಹಿಳೆಯರ ಮೇಲೆ ದೌರ್ಜನ್ಯ ಮತ್ತು ಅತ್ಯಾಚಾರ, ಕೊಲೆ ಪ್ರಕರಣ ಹೆಚ್ಚಾಗುತ್ತಿವೆ ಬರುತ್ತಿವೆ ಎಂದು ಕಳವಳ ವ್ಯಕ್ತಪಡಿಸಿದ್ದರು.
ರಾಷ್ಟ್ರದಲ್ಲಿ ಇಂಥ ಪ್ರಕರಣಗಳು 45000 ಜರಗಿದ್ದು, ಉತ್ತರ ಪ್ರೇಶ ಒಂದೇ ರಾಜ್ಯದಲ್ಲಿ ಹತ್ತು ಸಾವಿರಕ್ಕೂ ಹೆಚ್ಚು ಪ್ರಕರಣಗಳು ವರದಿಯಾಗಿವೆ. ಪೊಲೀಸರು ಅಪರಾಧಿಗಳಿಗೆ ಕಾವಲಾಗಿ ನಿಂತಿದ್ದಾರೆ. ಪ್ರಧಾನ ಮಂತ್ರಿ ನರೇಂದ್ರ ಮೋದಿಯವರು ಈ ದೇಶದ ದಲಿತ ಮತ್ತು ಆದಿವಾಸಿಗಳ ಪ್ರಾಣ ಮತ್ತು ಅಸ್ತಿ ರಕ್ಷಿಸುವಲ್ಲಿ ವಿಫಲರಾಗಿದ್ದಾರೆ. ಆದ್ದರಿಂದ ಅಖಿಲ ಭಾರತ ಕಾಂಗ್ರೆಸ್ ಸಮಿತಿ, ಪರಿಶಿಷ್ಟ ಜಾತಿ ರಾಷ್ಟ್ರೀಯ ಅಧ್ಯಕ್ಷರಾದ ನಿತಿನ್ ರಾವತ್ ರವರ ಕರೆಯ ಮೇರೆಗೆ ದೆಹಲಿಯ ಜಂತರ್ ಮಂತರ್ ನಲ್ಲಿ ಅಗಸ್ಟ್ 12 ರಂದು ಬೃಹತ್ ಪ್ರತಿಭಟನೆ ನಡೆಸಲಾಗುವುದು ಎಂದು ತಿಳಿಸಿದರು.




