ಇಂದಿರಾ ಕ್ಯಾಂಟೀನ್ ಹೆಸರು ಬದಲಾಯಿಸಿದರೆ ಉಗ್ರ ಹೋರಾಟ: ಸತೀಶ್ ಜಾರಕಿಹೊಳಿ ಎಚ್ಚರಿಕೆ

ಬೆಳಗಾವಿ : ಮಾಜಿ ಪ್ರಧಾನಿ ಇಂದಿರಾ ಗಾಂಧಿ ಅವರು, ಬಡವರ ಪರವಾಗಿ ಕೆಲಸ ಮಾಡಿದವರು. ಹಿಂದುಳಿದ ವರ್ಗದ ಜನರಿಗಾಗಿಯೇ ತಮ್ಮ ಜೀವನ ಮೂಡಿಪಾಗಿಟ್ಟವರು, ಆ ಉದ್ದೇಶದಿಂದಲೇ ಇಂದಿರಾ ಕ್ಯಾಂಟೀನ್ ಎಂದು ಹೆಸರನ್ನು ಇಡಲಾಗಿದೆ. ಬಿಜೆಪಿ ನಾಯಕರ ಈ ನಿರ್ಧಾರ ಸರಿಯಲ್ಲ. ತಪ್ಪು ತೀರ್ಮಾನದಿಂದ ಹಿಂದೆ ಸರಿಯಬೇಕು ಎಂದು ರಾಜ್ಯ ಸರ್ಕಾರಕ್ಕೆ ಕೆಪಿಸಿಸಿ ಕಾರ್ಯಾಧ್ಯಕ್ಷ ಸತೀಶ್ ಜಾರಕಿಹೊಳಿ ಎಚ್ಚರಿಕೆ ನೀಡಿದ್ದಾರೆ.
ಗೋಕಾಕ್ ನ ಹಿಲ್ ಗಾರ್ಡನ್ ಕಚೇರಿಯಲ್ಲಿ ಮಾತನಾಡಿದ ಅವರು, ಈಗಾಗಲೇ ಕಾಂಗ್ರೆಸ್ ಪಕ್ಷದ ಅಧ್ಯಕ್ಷರು, ನಾಯಕರು ಎಲ್ಲರೂ ಮಾತನಾಡಿದ್ದೇವೆ. ವಿರೋಧದ ನಡುವೆಯೂ ಇಂದಿರಾ ಕ್ಯಾಂಟೀನ್ ಹೆಸರು ಬದಲಾವಣೆಗೆ ಮುಂದಾದರೇ ಕಾಂಗ್ರೆಸ್ ಪಕ್ಷದಿಂದ ಉಗ್ರ ಪ್ರತಿಭಟನೆ ಮಾಡಲಾಗುವುದು ಎಂದರು.
ಕ್ರೀಡೆಗೆ ಅನುದಾನ ಹೆಚ್ಚಿಸಲಿ :
ಬಿಜೆಪಿ ಕೇಂದ್ರ ಸರ್ಕಾರ ಕ್ರೀಡಾಪಟುಗಳನ್ನು ಪ್ರೋತ್ಸಾಹಿಸಲು ಅನುದಾನವನ್ನು ಪ್ರತಿ ವರ್ಷ ಹಂತ ಹಂತವಾಗಿ ಹೆಚ್ಚಿಸಬೇಕು. ಕ್ರೀಡಾಪಟುಗಳಿಗೆ ನೀಡುವ ಪ್ರೋತ್ಸಾಹ ಧನವನ್ನು ಸರ್ಕಾರ ಗಣನೀಯವಾಗಿ ಕಡಿತಗೊಳಿಸುವುದು ಸರಿಯಲ್ಲ. ಹೀಗೆ ಮಾಡುವುದರಿಂದ ಕ್ರೀಡೆಯ ಬಗ್ಗೆ ನಿರ್ಲಕ್ಷ್ಯ ತೋರಿದಂತಾಗುತ್ತದೆ ಎಂದು ಬೇಸರ ವ್ಯಕ್ತ ಪಡಿಸಿದರು.
ಟೋಕಿಯೋ ಒಲಂಪಿಕ್ಸ್ ನಲ್ಲಿ ಭಾರತಕ್ಕೆ ಚಿನ್ನದ ಪದಕ ತಂದು ಕೊಟ್ಟ ನೀರಜ್ ಚೋಪ್ರಾ ಅವರ ಹೆಸರು ಪ್ರಸ್ತಾಪಿಸಿ, ಜಾವೆಲಿನ್ ನಲ್ಲಿ ನೀರಜ್ ಚೋಪ್ರಾ ಅವರು ಇತಿಹಾಸ ಸೃಷ್ಟಿ ಮಾಡಿದ್ದಾರೆ. ಅವರ ಸಾಧನೆ ಇಡೀ ದೇಶಕ್ಕೆ ಗೌರವ ತರುವಂತಾಗಿದೆ. ದೇಶ ಹಾಗೂ ರಾಜ್ಯದಲ್ಲಿ ಇಂತಹ ಕ್ರೀಡಾ ಪಟುಗಳು ಅನೇಕರಿದ್ದಾರೆ. ಕೇಂದ್ರ ಹಾಗೂ ರಾಜ್ಯ ಸರ್ಕಾರ ಅವರೇಲ್ಲರಿಗೂ ಪ್ರೋತ್ಸಾಹ ಮಾಡಬೇಕು ಎಂದರು.
ಕೋವಿಡ್ ನಿಯಂತ್ರಣದಲ್ಲಿ ವಿಫಲ :
ಕೋವಿಡ್ ನಿಯಂತ್ರಣದಲ್ಲಿ ಸರ್ಕಾರ ಮೊದಲ ಹಾಗೂ ಎರಡನೇ ಅಲೆಯಲ್ಲಿ ವಿಫಲವಾಗಿದೆ. ಈಗ ಮೂರನೇ ಅಲೆ ಎದುರಾಗುವ ಸಾಧ್ಯತೆ ಇದೆ. ಆದ ಕಾರಣ ಸರ್ಕಾರ ಈಗಲೇ ಎಚ್ಚೆತ್ತುಕೊಳ್ಳಬೇಕು. ಇಲ್ಲದಿದ್ದರೆ ಕೈ ಮೀರಿದ ಬಳಿಕ ನಿಯಂತ್ರಣಕ್ಕೆ ಪ್ರಯತ್ನಿಸುವುದು ಸರಿಯಾದ ಕ್ರಮವಲ್ಲ. ಈಗಾಗಲೇ ಅನೇಕ ಕಡೆಗಳಿಂದ ವ್ಯಾಕ್ಸಿನ್ ವಿಳಂಬವಾಗುತ್ತಿವೆ ಎಂಬ ಮಾತುಗಳು ಕೇಳಿ ಬರುತ್ತಿವೆ. ಸರ್ಕಾರ ಪೂರೈಕೆ ತಕ್ಕಂತೆ ವ್ಯಾಕ್ಸಿನ್ ಪೂರೈಕೆ ಮಾಡಬೇಕು. ಇದರಿಂದ ಮೂರನೇ ಅಲೆ ತಡೆಯಲು ಸಾಧ್ಯೆ ಎಂದು ಸಲಹೆ ನೀಡಿದರು.
