ರನ್ನ ಸಹಕಾರಿ ಸಕ್ಕರೆ ಕಾರ್ಖಾನೆ ಕಾರ್ಮಿಕರಿಂದ ಭಿಕ್ಷಾಟನೆ: ಕಾರ್ಖಾನೆ ಪುನರಾರಂಭಕ್ಕೆ ಒತ್ತಾಯ

ಬಾಗಲಕೋಟೆ: ಮುಧೋಳ ರನ್ನ ರೈತರ ಸಹಕಾರಿ ಸಕ್ಕರೆ ಕಾರ್ಖಾನೆ ಪುನರ್ ಆರಂಭಿಸುವಂತೆ ಆಗ್ರಹಿಸಿ ಕಾರ್ಮಿಕರು ಭೀಕ್ಷೆ ಬೇಡುವ ಮೂಲಕ ವಿಭಿನ್ನ ಪ್ರತಿಭಟನೆ ಮಾಡುತ್ತಿದ್ದಾರೆ.
ಬಾಗಲಕೋಟೆ ಜಿಲ್ಲೆಯ ಮುಧೋಳ ತಾಲೂಕಿನ ತಿಮ್ಮಾಪುರ ಬಳಿಯಿರುವ ರನ್ನ ರೈತರ ಸಹಕಾರಿ ಸಕ್ಕರೆ ಕಾರ್ಖಾನೆ ಆಡಳಿತ ಮಂಡಳಿ ಅವ್ಯವಹಾರದಿಂದಾಗಿ ಆರ್ಥಿಕ ಸಂಕಷ್ಟಕ್ಕೆ ಸಿಲುಕಿ ಬಂದ್ ಆಗಿದೆ. ಹೀಗಾಗಿ ರೈತರು ಕಾರ್ಮಿಕರು ಕಾರ್ಖಾನೆ ಪುನರಾರಂಭಕ್ಕೆ ಆಗ್ರಹಿಸಿ ಮುಧೋಳ ತಹಶೀಲ್ದಾರ್ ಕಚೇರಿ ಎದುರು 50 ದಿನಗಳ ಕಾಲ ಧರಣಿ ಸತ್ಯಾಗ್ರಹ ನಡೆಸಿದ್ದಾರೆ.
ಜಲಸಂಪನ್ಮೂಲ ಸಚಿವ ಗೋವಿಂದ ಕಾರಜೋಳ ಕ್ಷೇತ್ರದಲ್ಲಿ ಸಹಕಾರಿ ಸಕ್ಕರೆ ಕಾರ್ಖಾನೆ ಅವರ ಆಪ್ತ ರಾಮಣ್ಣ ತಳೇವಾಡ ಅಧ್ಯಕ್ಷರಾಗಿದ್ದು, ಭ್ರಷ್ಟಾಚಾರದಿಂದ ಸಕ್ಕರೆ ಕಾರ್ಖಾನೆ ಬಂದ್ ಆಗಿದೆ. ಹೀಗಾಗಿ ಆಡಳಿತ ಮಂಡಳಿ ಸೂಪರ್ ಸೀಡ್ ಮಾಡಬೇಕು, ಸರ್ಕಾರ ಆರ್ಥಿಕ ನೆರವು ನೀಡಿ ಸಕ್ಕರೆ ಕಾರ್ಖಾನೆ ಪುನರ್ ಆರಂಭಿಸುವಂತೆ ಆಗ್ರಹಿಸಿ ರೈತರು ಕಾರ್ಮಿಕರು ಹೋರಾಟಕ್ಕೆ ಧುಮುಕಿದ್ದಾರೆ.
ಇನ್ನು ಸಂಬಳವಿಲ್ಲದೆ ಸಂಕಷ್ಟದಲ್ಲಿ ಕಾರ್ಮಿಕರು ಕುಟುಂಬಗಳು ಜೀವನ ಸಾಗಿಸುತ್ತಿದ್ದು, ಮುಧೋಳ ತಾಲೂಕಿನ ಮೆಟಗುಡ್ಡ ಗ್ರಾಮದಲ್ಲಿ ಮನೆ ಮನೆಗೆ ತೆರಳಿ ಭೀಕ್ಷೆ ಬೇಡುತ್ತಿದ್ದಾರೆ. ಜನರು ಆಹಾರ ಹಣ ನೀಡಿ ನೆರವಾಗುತ್ತಿದ್ದಾರೆ. ಇನ್ನೊಂದೆಡೆ ರೈತರು ಕಾರ್ಮಿಕರು ಸರ್ಕಾರ ಸಕ್ಕರೆ ಕಾರ್ಖಾನೆ ಅಧ್ಯಕ್ಷ ರಾಮಣ್ಣ ತಳೇವಾಡ ವಿರುದ್ಧ ಆಕ್ರೋಶ ವ್ಯಕ್ತಪಡಿಸಿದರು. ಈ ಸಂದರ್ಭದಲ್ಲಿ ರೈತ ಮುಖಂಡರು ಕಾರ್ಮಿಕರು ಭಾಗಿಯಾಗಿದ್ದರು.




