ಜಿಲ್ಲಾ ಸುದ್ದಿ

ಮಂಡ್ಯ ಜಿಲ್ಲೆ ಶಾಶ್ವತ ಕುಡಿಯುವ ನೀರಿನ ಯೋಜನೆಗೆ ಸರ್ಕಾರದಿಂದ ಅಧಿಕೃತ ಆದೇಶ

ಮಂಡ್ಯ : ಕಳೆದ ಸಚಿವ ಸಂಪುಟ ಸಭೆಯಲ್ಲಿ ಆಡಳಿತಾತ್ಮಕ ಅನುಮೋದನೆ ಪಡೆದಿದ್ದ, ಜಲ್ ಜೀವನ್ ಮಿಶನ್ ಯೋಜನೆಯಡಿ ಮಂಡ್ಯ ಜಿಲ್ಲೆಯ ಮೂರು ತಾಲ್ಲೂಕಿನ ಕುಡಿಯುವ ನೀರಿನ ಯೋಜನೆಗೆ ಸರ್ಕಾರದಿಂದ ಇಂದು ಅಧಿಕೃತ ಆದೇಶ ಹೊರಡಿಸಲಾಗಿದೆ. ರೂ. 690 ಕೋಟಿ ಮೊತ್ತದ ಯೋಜನೆ ಇದಾಗಿದ್ದು, ಮೂರು ತಿಂಗಳೊಳಗಾಗಿ ಟೆಂಡರ್ ಕರೆದು ಕಾಮಗಾರಿ ಆರಂಭಿಸಲಾಗುವುದು ಎಂದು ಜಿಲ್ಲಾ ಉಸ್ತುವಾರಿ ಸಚಿವ ನಾರಾಯಣಗೌಡ ತಿಳಿಸಿದ್ದಾರೆ.

ಜಲ ಜೀವನ್ ಮಿಷನ್ ಯೋಜನೆಯಡಿ ಹಾಗೂ ನಬಾರ್ಡ್ ನೆರವಿನಿಂದ ಜಿಲ್ಲೆಯಲ್ಲಿ ಕುಡಿಯುವ ನೀರಿನ ಯೋಜನೆ ಅನುಷ್ಠಾನಗೊಳ್ಳಲಿದೆ. ಕೆ.ಆರ್. ಪೇಟೆಯ ಉಪ ಚುನಾವಣೆ ಸಂದರ್ಭದಲ್ಲಿ ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ಹಾಗೂ ನಾರಾಯಣಗೌಡ ಅವರು ಕೆಆರ್‍ಎಸ್ ಜಲಾಶಯದಿಂದ ಕ್ಷೇತ್ರಕ್ಕೆ ಕುಡಿಯುವ ನೀರಿನ ಸಂಪರ್ಕ ಕಲ್ಪಿಸುವ ಭರವಸೆ ನೀಡಿದ್ದರು. ಅಂತೆಯೆ ಈಗ ಯೋಜನೆಗೆ ಆದೇಶ ಹೊರಡಿಸಲಾಗಿದ್ದು, 2023 ರ ರೊಳಗೆ ಪ್ರತಿ ಮನೆಗೆ ನಲ್ಲಿ ಮೂಲಕ ಕುಡಿಯುವ ನೀರಿನ ಸಂಪರ್ಕ ಕಲ್ಪಿಸುವ ಯೋಜನೆ ಸಾಕಾರಗೊಳ್ಳಲಿದೆ. ಮಂಡ್ಯ ಜಿಲ್ಲೆಯ ಕೆ.ಆರ್. ಪೇಟೆ, ಪಾಂಡವಪುರ ಮತ್ತು ನಾಗಮಂಗಲ ತಾಲ್ಲೂಕಿನ ಗ್ರಾಮೀಣ ಪ್ರದೇಶಗಳಿಗೆ ಹಾಗೂ ಬೆಳ್ಳೂರು ಪಟ್ಟಣ ಪಂಚಾಯತಿ, ನಾಗಮಂಗಲ ಪಟ್ಟಣ, ಬಿ.ಜಿ. ನಗರ ಮತ್ತು ಕೆ.ಆರ್. ಪೇಟೆ ತಾಲ್ಲೂಕಿನ 5 ವಸತಿ ಶಾಲೆಗಳಿಗೆ ಕುಡಿಯುವ ನೀರನ್ನು ಪೂರೈಸಲು ರೂ. 690.36 ಕೋಟಿ ವೆಚ್ಚದಲ್ಲಿ ಯೋಜನೆ ರೂಪಿಸಲಾಗಿತ್ತು. ಈಗ ಮಂಡ್ಯ ಜಿಲ್ಲಾ ಉಸ್ತುವಾರಿ ನಾರಾಯಣಗೌಡ ಮುಖ್ಯಮಂತ್ರಿಗಳ ಜೊತೆ ಚರ್ಚಿಸಿ, ಸಂಪುಟದ ಮುಂದಿಟ್ಟು ಒಪ್ಪಿಗೆ ಪಡೆದುಕೊಂಡ ಬಳಿಕ ಸರ್ಕಾರದಿಂದ ಅದೇಶ ಹೊರಡಿಸಲಾಗಿದೆ. ಈ ಯೋಜನೆಯಲ್ಲಿ ಗ್ರಾಮೀಣ ಪ್ರದೇಶಕ್ಕೆ 55 ಎಲ್‍ಪಿಸಿಡಿ ಹಾಗೂ ಪಟ್ಟಣ ಪ್ರದೇಶಕ್ಕೆ 135 ಎಲ್‍ಪಿಸಿಡಿ ಕುಡಿಯುವ ನೀರನ್ನು ಪೂರೈಸಲಾಗುವುದು.

ಎರಡು ವರ್ಷದೊಳಗೆ ಯೋಜನೆ ಪೂರ್ಣ:

ವಾರದೊಳಗೆ ಟೆಂಡರ್ ಆಹ್ವಾನಿಸಿ, ಮೂರು ತಿಂಗಳೊಳಗೆ ಟೆಂಡರ್ ಪ್ರಕ್ರಿಯೆ ಮುಗಿಸಲಾಗುವುದು. 24 ತಿಂಗಳೊಳಗಾಗಿ ಯೋಜನೆಯನ್ನು ಪೂರ್ಣಗೊಳಿಸಿ, ಯೋಜನೆಯ ರೂಪು ರೇಷೆಯಂತೆ ಮನೆಗಳಿಗೆ ನಲ್ಲಿ ಮೂಲಕ ನೀರಿನ ಸಂಪರ್ಕ ಕಲ್ಪಿಸಲಾಗುವುದು. ಒಟ್ಟು 791 ಹಳ್ಳಿಗಳಿಗೆ ಅನುಕೂಲವಾಗುವಂತೆ ಶಾಶ್ವತ ಕುಡಿಯುವ ನೀರಿನ ಯೋಜನೆ ಜಾರಿಗೊಳಿಸಲಾಗಿದೆ. ಕೆ.ಆರ್. ಪೇಟೆ ತಾಲ್ಲೂಕಿನ 310ಕ್ಕು ಹೆಚ್ಚು ಹಳ್ಳಿಗಳು, ನಾಗಮಂಗಲ ತಾಲ್ಲೂಕಿನ 391 ಹಳ್ಳಿಗಳು, ಬಿ.ಜಿ.ನಗರ ಹಾಗೂ ಬೆಳ್ಳೂರು ಪಟ್ಟಣ ಪಂಚಾಯತಿ ವ್ಯಾಪ್ತಿ ಹಾಗೂ ಪಾಂಡವಪುರ ತಾಲ್ಲೂಕಿನ 96 ಹಳ್ಳಿಗಳ ಪ್ರತಿ ಮನೆ ಮನೆಗೆ ನಲ್ಲಿ ಮೂಲಕ ಕುಡಿಯುವ ನೀರಿನ ಸಂಪರ್ಕ ಕಲ್ಪಿಸಲಾಗುವುದು. ಈ ಯೋಜನೆಯಿಂದ 4 ಲಕ್ಷಕ್ಕು ಹೆಚ್ಚಿನ ಜನರಿಗೆ ಅನುಕೂಲವಾಗಲಿದೆ. ಕೆ.ಆರ್.ಪೇಟೆ ತಾಲ್ಲೂಕಿನ 1,95,112 ಜನರಿಗೆ, ನಾಗಮಂಗಲ ತಾಲ್ಲೂಕಿನ 1,31,221 ಜನರಿಗೆ ಹಾಗೂ ಪಾಂಡವಪುರದ 90,235 ಜನ ಸೇರಿದಂತೆ ಒಟ್ಟು ಪಟ್ಟಣ ಹಾಗೂ ಹಳ್ಳಿ ಸೇರಿ ಒಟ್ಟು 4,16, 568 ಜನರಿಗೆ ಶಾಶ್ವತ ಕುಡಿಯುವ ನೀರಿನ ಯೋಜನೆಯಿಂದ ಅನುಕೂಲವಾಗಲಿದೆ. ಸುಮಾರು ಒಂದು ದಶಕದ ಬಳಿಕ ಜಿಲ್ಲೆಗೆ ಇಷ್ಟು ದೊಡ್ಡ ಮೊತ್ತದ ಯೋಜನೆ ಮಂಜೂರಾಗಿ, ಆದೇಶವಾಗಿರುವುದಕ್ಕೆ ಜಿಲ್ಲಾ ಉಸ್ತುವಾರಿ ಸಚಿವ ನಾರಾಯಣಗೌಡ ಸಂತಸ ವ್ಯಕ್ತಪಡಿಸಿದ್ದು, ಮೂರು ತಿಂಗಳಲ್ಲಿ ಟೆಂಡರ್ ಪ್ರಕ್ರಿಯೆ ಮುಗಿಸಿ, ಎರಡು ವರ್ಷದೊಳಗೆ ಯೋಜನೆ ಪೂರ್ಣಗೊಳಿಸುವಲ್ಲಿ ಯಶಸ್ವಿಯಾಗುತ್ತೇನೆ ಎಂದು ವಿಶ್ವಾಸ ವ್ಯಕ್ತಪಡಿಸಿದ್ದಾರೆ.

ರೂ. 690.36 ಕೋಟಿ ಮೊತ್ತದ ಈ ಯೋಜನೆ ಅನುಷ್ಠಾನಕ್ಕೆ ನಬಾರ್ಡ್‍ನಿಂದ 297.79 ಕೋಟಿ ರೂ., ಕೇಂದ್ರ ಸರ್ಕಾರದಿಂದ 220.23 ಕೋಟಿ ರೂ. ಹಾಗೂ ರಾಜ್ಯ ಸರ್ಕಾರದಿಂದ 172.33 ಕೋಟಿ ರೂ. ಅನುದಾನ ಒದಗಿಸಲಾಗುವುದು. ಎರಡು ವರ್ಷದೊಳಗೆ ಯೋಜನೆ ಪೂರ್ಣಗೊಳಿಸಿ 5 ವರ್ಷಗಳ ಕಾರ್ಯಾಚರಣೆ ಮತ್ತು ನಿರ್ವಹಣೆಗಾಗಿ ಒಟ್ಟು 690.36 ಕೋಟಿ ಅನುದಾನವನ್ನು ಒದಗಿಸಲಾಗುತ್ತಿದೆ.

Spread the love

Related Articles

Leave a Reply

Your email address will not be published. Required fields are marked *

Back to top button