ಪ್ರತಿಪಕ್ಷಗಳು RSS ಬಗ್ಗೆ ಟೀಕೆ ಮಾಡಿ ಉಪ ಚುನಾವಣೆ ಗೆಲ್ಲುತ್ತೇವೆ ಎಂಬ ಭ್ರಮೆಯಲ್ಲಿದ್ದಾರೆ: ಸಚಿವ ಮುನೇನಕೊಪ್ಪ

ಧಾರವಾಡ: ರಾಜ್ಯದಲ್ಲಿ ಎರಡು ಕ್ಷೇತ್ರದಲ್ಲಿ ಉಪ ಚುನಾವಣೆ ನಡೆಯುತ್ತಿದೆ. ಈ ಸಂದರ್ಭದಲ್ಲಿ ಕಾಂಗ್ರೆಸ್ ಜೆಡಿಎಸ್ ಪಕ್ಷದವರು ತಮ್ಮ ತಮ್ಮ ಚುನಾವಣೆ ಪ್ರಣಾಳಿಕೆಯನ್ನು ಇಟ್ಟುಕೊಂಡು ಮತಯಾಚಣೆ ಮಾಡಬೇಕಾಗಿತ್ತು. ಅದನ್ನು ಬಿಟ್ಟು ಎರಡು ಪಕ್ಷದ ನಾಯಕರು ಆರ್ ಎಸ್ ಎಸ್ ವಿರುದ್ಧ ಟೀಕೆ ಟಿಪ್ಪಣಿ ಮಾಡುವ ಮೂಲಕ ಉಪ ಚುನಾವಣೆಯನ್ನು ನಾವು ಗೆಲ್ಲುತ್ತೇವೆ ಎಂಬ ಭ್ರಮೆಯಲ್ಲಿದ್ದಾರೆ ಎಂದು ಪ್ರತಿಪಕ್ಷಗಳಿಗೆ ಸಚಿವ ಶಂಕರ್ ಪಾಟೀಲ್ ಮುನೇನಕೊಪ್ಪ ತಿರುಗೇಟು ನೀಡಿದ್ದಾರೆ.
ಮಾಧ್ಯಮ ಪ್ರತಿನಿಧಿಗಳೊಂಧಿಗೆ ಮಾತನಾಡಿದ ಅವರು, ನಮ್ಮ ಪಕ್ಷದ ರಾಜ್ಯಾಧ್ಯಕ್ಷರು ತಮ್ಮದೆಯಾದ ಮಾಹಿತಿಯನ್ನು ಆಧರಿಸಿ ಕಾಂಗ್ರೆಸ್ನ ರಾಹುಲ್ ಗಾಂಧಿ ಬಗ್ಗೆ ಹೇಳಿಕೆ ನೀಡಿದ್ದಾರೆ. ಆದರೆ ಮಾಜಿ ಸಿದ್ದರಾಮಯ್ಯನವರು ನಮ್ಮ ಪಕ್ಷದ ಅಧ್ಯಕ್ಷರಿಗೆ, ಮಾನಸಿಕ ಸ್ಥಿಮಿತ ಕಳೆದುಕೊಂಡಿದ್ದಾರೆ. ಅವರನ್ನು ಆಸ್ಪತ್ರೆಗೆ ಸೇರಿಸಬೇಕು ಎಂದು ಹೇಳಿದ್ದಾರೆ. ಅದೂ ಸರಿಯಾದ ಹೇಳಿಕೆ ಅಲ್ಲ. ಚುನಾವಣೆಗಳು ನಡೆಯುತ್ತಿರುವ ಸಂದರ್ಭದಲ್ಲಿ ತಮ್ಮ ತಮ್ಮ ಪ್ರಣಾಳಿಕೆ ಮುಂದಿಟುಕೊಂಡು ಎರಡು ಪಕ್ಷದ ನಾಯಕರು ಚುನಾವಣೆ ಎದುರಿಸಬೇಕು ಎಂದರು.
ಎರಡು ರಾಜಕೀಯ ಪಕ್ಷದ ನಾಯಕರ ಹೇಳಿಕೆಗಳನ್ನು ರಾಜ್ಯದ ಜನ ಗಮನಿಸುತ್ತಿದ್ದಾರೆ. ಒಂದು ಪಕ್ಷದ ಹಿರಿಯ ನಾಯಕರಾಗಿ ಮಾಜಿ ಸಿಎಂ ಸಿದ್ದರಾಮಯ್ಯನವರಿಗೆ ಅವರ ಹೇಳಿಕೆ ಶೋಭೆ ತರುವುದಿಲ್ಲ. ಎರಡು ಪಕ್ಷದ ನಾಯಕರು ಆರ್ ಎಸ್ ಎಸ್ ಸಂಘಟನೆಯನ್ನು ಕಟುವಾಗಿ ಟೀಕೆ ಮಾಡುತ್ತಾ ಬಂದಿದ್ದಾರೆ. ಆರ್ ಎಸ್ ಎಸ್ ಒಂದು ಉತ್ತಮ ವ್ಯಕ್ತಿ ಹಾಗೂ ದೇಶವನ್ನು ಕಟ್ಟುವ ಸಂಘವಾಗಿದೆ. ಹೀಗಿರುವಾಗ ಸಂಘದ ಬಗ್ಗೆ ಬೇಕಾಬಿಟ್ಟಿ ಹೇಳಿಕೆ ನೀಡುವುದು ಸರಿಯಲ್ಲ ಎಂದು ಕೀಡಿಕಾರಿದರು.




