ಪ್ರಧಾನಿ ನರೇಂದ್ರ ಮೋದಿ ದೇಶದ್ರೋಹಿಗಳಿಗೆ ಭಸ್ಮಾಸುರ – ಸಿ.ಟಿ.ರವಿ

ಬೆಂಗಳೂರು: ನರೇಂದ್ರ ಮೋದಿಯವರು ದೇಶದ್ರೋಹಿಗಳಿಗೆ ಭಸ್ಮಾಸುರ ಎಂದು ಬಿಜೆಪಿ ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿ ಸಿ.ಟಿ. ರವಿ ಅವರು ತಿಳಿಸಿದರು.
ಬಿಜೆಪಿ ರಾಜ್ಯ ಕಾರ್ಯಾಲಯ ‘ಜಗನ್ನಾಥ ಭವನ’ದಲ್ಲಿ ಇಂದು ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿ, ಮಾಧ್ಯಮ ಪ್ರತಿನಿಧಿಗಳ ಪ್ರಶ್ನೆಗೆ ಉತ್ತರ ಕೊಟ್ಟರು.
ದೇಶವನ್ನು ರಕ್ಷಿಸುವ ಹಾಗೂ ಜನರನ್ನು ಬದುಕಿಸಿದ ವಿಚಾರದಲ್ಲಿ ಮೋದಿಜಿ ಅವರು ಶ್ರೀಮನ್ನಾರಾಯಣ ಎಂದು ಪ್ರಶ್ನೆಗೆ ಉತ್ತರಿಸಿದರು. ಜನರ ಪಾಲಿಗೆ ಅವರು ಕಲ್ಪವೃಕ್ಷ, ಕಾಮಧೇನು ಎಂದು ಅವರು ತಿಳಿಸಿದರು.
ದತ್ತಪೀಠದ ವಿಚಾರದಲ್ಲಿ ನಮ್ಮ ಸರಕಾರ- ನಮ್ಮ ಪಕ್ಷ ಜನರಿಗೆ ಕೊಟ್ಟ ಮಾತಿನಂತೆ ನಡೆದುಕೊಂಡಿದೆ. 10 ದಿನಗಳ ಹಿಂದೆ ನ್ಯಾಯಾಲಯದ ಆದೇಶ, ಅದರ ಅನುಗುಣವಾಗಿ ಸಂಪುಟ ಉಪ ಸಮಿತಿ ತೆಗೆದುಕೊಂಡ ನಿರ್ಣಯದ ಶಿಫಾರಸುಗಳನ್ನು ಅಂಗೀಕರಿಸಿ ಸರಕಾರವು ಆಡಳಿತ ಮಂಡಳಿ ರಚಿಸಿದೆ. ಹಿಂದೂ ಅರ್ಚಕರ ನೇಮಕಕ್ಕಿದ್ದ ಅಡೆತಡೆ ಈಗ ನಿವಾರಣೆಯಾಗಿದೆ; ಹಿಂದೂ ಅರ್ಚಕರ ನೇಮಕಕ್ಕೆ ಕ್ರಮ ಕೈಗೊಳ್ಳಲಾಗಿದೆ. ಈ ಬಾರಿಯ ದತ್ತ ಜಯಂತಿ 4-5 ದಶಕಗಳ ಹೋರಾಟ ಈಡೇರಿದ ಸಂತೃಪ್ತಿಯ ಜಯಂತಿ ಆಗಲಿದೆ. ಸಿಎಂ ಬಸವರಾಜ ಬೊಮ್ಮಾಯಿ ಮತ್ತು ಸಚಿವ ಸಂಪುಟದ ಉಪಸಮಿತಿಗೆ ಧನ್ಯವಾದಗಳು ಎಂದು ತಿಳಿಸಿದರು.
ಸರಕಾರಿ ದಾಖಲೆಗಳ ಪ್ರಕಾರ ಉಳುವವನೇ ಹೊಲದೊಡೆಯ ಮಸೂದೆಗೆ ಮುಂಚೆ ದತ್ತಾತ್ರೇಯ ದೇವರ ಹೆಸರಿನಲ್ಲಿ 1,861 ಎಕರೆ ಜಾಗ ಇತ್ತು. ಕಾಂಗ್ರೆಸ್ ಆಡಳಿತವಿದ್ದಾಗ ದತ್ತಾತ್ರೇಯ ದೇವರ ಹೆಸರಿನ ಜಮೀನನ್ನು ಗೇಣಿದಾರರೂ ಅಲ್ಲದವರಿಗೆ ಕಾಂಗ್ರೆಸ್ ಮುಖಂಡರು ಅಕ್ರಮವಾಗಿ ಮಂಜೂರು ಮಾಡಿದ್ದರೆಂದು ಮಾಹಿತಿ ಮೇಲ್ನೋಟಕ್ಕೆ ಲಭಿಸಿದೆ. ಈ ಬಗ್ಗೆ ಸಮಗ್ರ ತನಿಖೆ ನಡೆಸಬೇಕು. ಅಕ್ರಮ ಮಂಜೂರಾತಿ ರದ್ದು ಮಾಡಲು ಆಗ್ರಹಿಸುತ್ತೇನೆ ಎಂದರು.
