ಭಾರತ್ ಬಂದ್ ಯಶಸ್ವಿಗೊಳಿಸಲು ನಿರ್ಧಾರ; ರೈತ ಜಾಗೃತಿ ಸಭೆ

ಚಿಕ್ಕಮಗಳೂರು: ವಿವಾದಿತ ಕೃಷಿ ಕಾಯ್ದೆ ವಿರೋಧಿಸಿ, ಸಂಯುಕ್ತ ಕಿಸಾನ್ ಮೋರ್ಚಾ ಕರೆ ನೀಡಿರುವ ಸೆ.27ರ ಭಾರತ್ ಬಂದ್ ಯಶಸ್ವಿಗೊಳಿಸಲು ವಿವಿಧ ಪಕ್ಷ, ಪ್ರಗತಿಪರ ಸಂಘಟನೆಗಳು ಒಕ್ಕೂರಲ ಬೆಂಬಲ ವ್ಯಕ್ತಪಡಿಸಿವೆ.
ಈ ಕುರಿತು ವಿವಿಧ ಪಕ್ಷಗಳ ಮುಖಂಡರು, ದಲಿತ ಮತ್ತು ಪ್ರಗತಿಪರ ಸಂಘಟನೆಗಳ ಮುಖಂಡರೊಂದಿಗೆ ನಡೆದ ಸಭೆಯಲ್ಲಿ ನಿರ್ಧಾರ ಕೈಗೊಳ್ಳಲಾಗಿದ್ದು, ಕೇಂದ್ರ ಸರ್ಕಾರ ರೈತರಿಗೆ ಮಾರಕವಾದ ಕರಾಳ ಕೃಷಿ ಮಸೂದೆ ಜಾರಿಗೊಳಿಸಲು ಮುಂದಾಗಿರುವುದನ್ನು ವಿರೋಧಿಸಿ ದೆಹಲಿಯ ಗಡಿಭಾಗದಲ್ಲಿ ರೈತರು ನಿರಂತರ ಹೋರಾಟ ನಡೆಸುತ್ತಿದ್ದರೂ ಸರ್ಕಾರ ಮರಣ ಶಾಸನದಂತಿರುವ ಕಾಯ್ದೆ ಜಾರಿಗೊಳಿಸಲು ಮುಂದಾಗಿರುವುದನ್ನು ಸಭೆಯಲ್ಲಿ ಖಂಡಿಸಲಾಯಿತು.
ಸಭೆಯಲ್ಲಿ ಸಿಪಿಐ ಮುಖಂಡ ಅಮ್ಜದ್ ಮಾತನಾಡಿ, ಭಾರತ್ ಬಂದ್ ಯಶಸ್ವಿಗೊಳಿಸುವ ನಿಟ್ಟಿನಲ್ಲಿ ಸೆ.20ರಂದು ನಗರದ ಎಪಿಎಂಸಿ ಸಭಾಂಗಣದಲ್ಲಿ ರೈತ ಜಾಗೃತಿ ಸಭೆ ಆಯೋಜಿಸಲಾಗಿದೆ. ರಾಜ್ಯ ರೈತ ಸಂಘದ ಮುಖಂಡ ಬಡಗಲಪುರ ನಾಗೇಂದ್ರ, ದಲಿತ ಸಂಘರ್ಷ ಸಮಿತಿ ರಾಜ್ಯ ಸಂಚಾಲಕ ಮಾವಳ್ಳಿ ಶಂಕರ್ ಪಾಲ್ಗೊಳ್ಳಲಿದ್ದಾರೆ ಎಂದು ತಿಳಿಸಿದರು.
ಶೃಂಗೇರಿ ಶಾಸಕ ಟಿ ಡಿ ರಾಜೇಗೌಡ, ರೈತ ಸಂಘದ ಜಿಲ್ಲಾಧ್ಯಕ್ಷ ಎಂ ಸಿ ಬಸವರಾಜ್, ಬಿಎಸ್ಪಿ ಜಿಲ್ಲಾಧ್ಯಕ್ಷ ಕೆ ಟಿ ರಾಧಾಕೃಷ್ಣ, ಸಿಪಿಐ ಮುಖಂಡ ರೇಣುಕಾರಾಧ್ಯ ಡಿಎಸ್ಎಸ್ ಮರ್ಲೆ ಅಣ್ಣಯ್ಯ, ರವೀಶ್ ಕ್ಯಾತನಬೀಡು, ಗುರುಶಾಂತಪ್ಪ, ರೂಬೆನ್ ಮೋಸಸ್, ಡಾ. ಕೆ ಸುಂದರಗೌಡ, ಹಿರೇಮಗಳೂರು ಪುಟ್ಟಸ್ವಾಮಿ, ಪ್ರಕಾಶ್, ನಟರಾಜ್, ಜೆಡಿಎಸ್ ಮುಖಂಡ ಚಂದ್ರಪ್ಪ, ಲಕ್ಷ್ಮಣ್, ಶ್ರೀನಿವಾಸ್, ದೊಡ್ಡಯ್ಯ, ಅಂಗಡಿ ಚಂದ್ರು, ಉಮೇಶ್, ತೇಗೂರು ಜಗದೀಶ್, ಕಳವಾಸೆ ರವಿ, ರಘು, ಸುರೇಶ್ ಇದ್ದರು.




