ಪದವಿ ಅಂತಿಮ ವರ್ಷದ ಪರೀಕ್ಷೆ ಮುಂದೂಡಿ: ರಾಣಿ ಚೆನ್ನಮ್ಮ ವಿವಿ ವಿರುದ್ಧ ವಿದ್ಯಾರ್ಥಿಗಳು ಆಕ್ರೋಶ

ಬಾಗಲಕೋಟೆ: ಬೆಳಗಾವಿ ರಾಣಿ ಚನ್ನಮ್ಮ ವಿಶ್ವವಿದ್ಯಾಲಯದ ಪದವಿಯ ಅಂತಿಮ ವರ್ಷದ ಪರೀಕ್ಷೆಗಳನ್ನು ಮುಂದೂಡಿ ಎಂದು ಎನ್ ಎಸ್ ಯುಐ ಸಂಘಟನೆಯಿಂದ ವಿದ್ಯಾರ್ಥಿಗಳು ಪ್ರತಿಭಟನೆ ನಡೆಸಿದರು.
ಬಸವೇಶ್ವರ ವೃತ್ತದದಲ್ಲಿ ಪ್ರತಿಭಟನೆ ನಡೆಸಿ ವಿಶ್ವವಿದ್ಯಾಲಯದ ಪರೀಕ್ಷಾ ವಿಭಾಗದ ಅಧಿಕಾರಿಗಳ ವಿರುದ್ಧ ಆಕ್ರೋಶ ವ್ಯಕ್ತಪಡಿಸಿದರು. ಧಾರವಾಡ ಕರ್ನಾಟಕ ವಿಶ್ವವಿದ್ಯಾಲಯ, ವಿಜಯಪುರ ಅಕ್ಕಮಹಾದೇವಿ ವಿಶ್ವವಿದ್ಯಾಲಯದ ಪದವಿ ಅಂತಿಮ ವರ್ಷದ ಪರೀಕ್ಷೆಗಳನ್ನು ಮುಂದೂಡಿದ್ದಾರೆ. ಆದರೆ ರಾಣಿ ಚೆನ್ನಮ್ಮ ವಿಶ್ವವಿದ್ಯಾಲಯದ ಪದವಿಯ ಅಂತಿಮ ವರ್ಷದ ಪರೀಕ್ಷೆಗಳನ್ನು ಮುಂದೂಡಿಲ್ಲ. ಪರೀಕ್ಷೆಯ ದಿನಾಂಕ ನಿಗದಿಗೊಳಿಸಿ ವಿದ್ಯಾರ್ಥಿಗಳ ಮೇಲೆ ಒತ್ತಡ ಹಾಕುತ್ತಿದ್ದಾರೆ. ಪರೀಕ್ಷಾ ಸಿದ್ಧತೆಗೆ 15 ರಿಂದ 20 ದಿನಗಳು ಬೇಕಾಗುತ್ತವೆ. ಆದರೆ ದಿಢೀರ್ ಪರೀಕ್ಷೆ ದಿನಾಂಕ ನಿಗದಿ ಮಾಡಿದರೆ ವಿದ್ಯಾರ್ಥಿಗಳಿಗೆ ಹೊರೆಯಾಗಲಿದೆ. ಪರೀಕ್ಷಾ ದಿನಾಂಕ ಮುಂದೂಡಿಕೆ ಮಾಡುವಂತೆ ಆಗ್ರಹಿಸಿದರು.
ಬಸವೇಶ್ವರ ಮಹಾವಿದ್ಯಾಲಯದಿಂದ ಬಸವೇಶ್ವರ ಸರ್ಕಲ್ ವರೆಗೆ ಪ್ರತಿಭಟನಾ ಮೆರವಣಿಗೆ ನಡೆಸಿದರು. ಪ್ರತಿಭಟನೆಯಲ್ಲಿ ವಿದ್ಯಾರ್ಥಿನಿಯರು, ವಿದ್ಯಾರ್ಥಿಗಳು ತಮ್ಮ ಆಕ್ರೋಶದ ಮಾತಗಳನ್ನಾಡಿದರು.




