ಸರ್ಕಾರ ಅರಣ್ಯವಾಸಿಗಳ ಪರ ಸುಪ್ರೀಂಕೋರ್ಟ್ ಗೆ ಪ್ರಮಾಣಪತ್ರ ಸಲ್ಲಿಸಲಿ:ರವೀಂದ್ರ ನಾಯ್ಕ್

ಕಾರವಾರ : ಬೆಳಗಾವಿಯ ಸುವರ್ಣ ಸೌಧದಲ್ಲಿ ನಡೆದ ಚಳಿಗಾಲದ ಅಧಿವೇಶನದಲ್ಲಿ ಅರಣ್ಯವಾಸಿಗಳ ಸಮಸ್ಯೆಗಳ ಬಗ್ಗೆ ಚರ್ಚೆ ನಡೆಯುವ ವಿಶ್ವಾಸವಿತ್ತು.ಆದರೆ ಅದು ಹುಸಿಯಾಗಿದೆ ಎಂದು ಅರಣ್ಯ ಭೂಮಿ ಹಕ್ಕು ಹೋರಾಟಗಾರರ ವೇದಿಕೆ ಅಧ್ಯಕ್ಷ ರವೀಂದ್ರನಾಥ ನಾಯ್ಕ ಬೇಸರ ವ್ಯಕ್ತಪಡಿಸಿದ್ದಾರೆ.
ಅನಧಿಕೃತ ಅರಣ್ಯವಾಸಿಗಳನ್ನು ತಕ್ಷಣ ಒಕ್ಕಲೆಬ್ಬಿಸಬೇಕು,ಸರಕಾರದ ಯಾವುದೇ ಸೌಲಭ್ಯ,ಸವಲತ್ತುಗಳನ್ನು ನಿರ್ಬಂಧಿಸಬೇಕು ಎಂದು ಕೆಲ ತಿಂಗಳ ಹಿಂದೆ ಸುಪ್ರೀಂಕೋರ್ಟ್ನಲ್ಲಿ ಪರಿಸರವಾದಿಗಳು ರಿಟ್ ಅರ್ಜಿ ಸಲ್ಲಿಸಿದ್ದಾರೆ.ಅರ್ಜಿ ವಿಚಾರಣೆ ನಡೆಯುತ್ತಿದೆ.ರಾಜ್ಯ ಸರ್ಕಾರ ಅಧಿವೇಶನದಲ್ಲಿ ಚರ್ಚಿಸಿ ಅರಣ್ಯವಾಸಿಗಳ ಪರ ಪ್ರಮಾಣಪತ್ರ ಸಲ್ಲಿಸಲು ನಿರ್ಣಯಿಸಬೇಕಿತ್ತು ಎಂದು ಅವರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
ಅರಣ್ಯವಾಸಿಗಳ ಮೇಲೆ ಅರಣ್ಯ ಇಲಾಖೆ ಅಧಿಕಾರಿಗಳು ನಡೆಸುತ್ತಿರುವ ದೌರ್ಜನ್ಯ,ಅರಣ್ಯ ಹಕ್ಕು ಕಾಯ್ದೆಯ ಅಸಮರ್ಪಕ ಅನುಷ್ಠಾನದ ಬಗ್ಗೆ ಸದನದಲ್ಲಿ ಯಾವೊಬ್ಬ ಜನಪ್ರತಿನಿಧಿಯೂ ಮಾತನಾಡಿಲ್ಲ.ಇದು ಅರಣ್ಯವಾಸಿಗಳ ಬಗ್ಗೆ ಸರ್ಕಾರ ನಿರ್ಲಕ್ಷ್ಯ ಧೋರಣೆ ತಳೆದಿದೆ ಎಂಬುದಕ್ಕೆ ನಿದರ್ಶನ ಎಂದು ಅವರು ಅಸಮಾಧಾನ ವ್ಯಕ್ತಪಡಿಸಿದ್ದಾರೆ.




