ಟಿಪ್ಪರ್ ಹಾಗೂ ಲಾರಿ ಮಧ್ಯೆ ಮುಖಾಮುಖಿ ಡಿಕ್ಕಿ : ನಾಲ್ವರಿಗೆ ಗಂಭಿರ ಗಾಯ

ಧಾರವಾಡ : ಧಾರವಾಡ ತಾಲೂಕಿನ ಇಟಿಗಟ್ಟಿ ಬಳಿಯ ರಾಷ್ಟ್ರೀಯ ಹೆದ್ದಾರಿಯಲ್ಲಿ ಇತ್ತೀಚೆಗೆ ಭೀಕರ ರಸ್ತೆ ಅಪಘಾತ ಸಂಭವಿಸಿ 11 ಜನರನ್ನು ಬಲಿ ಪಡೆದಿದ್ದ ಘಟನೆ ಮಾಸುವ ಮುನ್ನವೇ ಇಂದು ತಡ ಸಂಜೆ ಮತ್ತೊಂದು ಅಪಘಾತ ಸಂಭವಿಸಿದ ಘಟನೆ ನಡೆದಿದೆ.
ಟಿಪ್ಪರ್ ಹಾಗೂ ಲಾರಿ ಮಧ್ಯೆ ಮುಖಾಮುಖಿ ಡಿಕ್ಕಿ ಸಂಭವಿಸಿದ್ದು, ಎರಡೂ ಲಾರಿಗಳ ಮುಂಭಾಗ ಸಂಪೂರ್ಣ ನಜ್ಜುಗುಜ್ಜಾಗಿದ್ದು, ಈ ಅಪಘಾತ ನಡೆದ ತಕ್ಷಣವೇ ಹಿಂದಿನಿಂದ ಬರುತ್ತಿದ್ದ ಟ್ರ್ಯಾಕ್ಟರ್ ಕೂಡ ಆ ವಾಹನಗಳಿಗೆ ಡಿಕ್ಕಿ ಹೊಡೆದಿದೆ. ಇದರಿಂದ ನಾಲ್ಕೈದು ಮಂದಿ ಗಂಭೀರವಾಗಿ ಗಾಯಗೊಂಡಿದ್ದಾರೆ ಎಂದು ಹೇಳಲಾಗುತ್ತಿದೆ. ಘಟನೆಯ ಸುದ್ದಿ ತಿಳಿದು ಸ್ಥಳಕ್ಕೆ ಆಗಮಿಸಿ ಸಂಚಾರಿ ಪೊಲೀಸರು ಹಾಗೂ ಧಾರವಾಡ ಗ್ರಾಮೀಣ ಠಾಣೆಯ ಪೊಲೀಸರು ಗಾಯಾಳುಗಳನ್ನು ಜಿಲ್ಲಾಸ್ಪತ್ರೆಗೆ ರವಾನೆ ಮಾಡಿದ್ದರು.
ಇನ್ನೂ ಈ ಸರಣಿ ಅಪಘಾತದಿಂದ ರಾಷ್ಟ್ರೀಯ ಹೆದ್ದಾರಿಯಲ್ಲಿ ಸುಮಾರು ಒಂದು ಗಂಟೆಗೂ ಹೆಚ್ಚು ಕಾಲ ಟ್ರಾಫಿಕ್ ಜಾಮು ಉಂಟಾಗಿತ್ತು. ಘಟನಾ ಸ್ಥಳಕ್ಕೆ ಭೇಟಿ ನೀಡಿದ್ದ ಧಾರವಾಡ ಗ್ರಾಮೀಣ ಠಾಣೆ ಪೊಲೀಸರು ಹಾಗೂ ಸಂಚಾರಿ ಪೊಲೀಸರು ಜಂಟಿಯಾಗಿ ಅಪಘಾತವಾದ ವಾಹನಗಳನ್ನು ತಕ್ಷಣವೇ ರಸ್ತೆ ಪಕ್ಕಕ್ಕೆ ಸರಿಸಿ, ಬಳಿಕ ಬೇರೆಡೆ ಸಾಗಿಸಿ ಇನ್ನುಳಿದ ವಾಹನಗಳ ಸಂಚಾರಕ್ಕೆ ಅನುವು ಮಾಡಿಕೊಟ್ಟಿದ್ದಾರೆ.
ಇನ್ನೂ ಇದೇ ಸ್ಥಳದಲ್ಲಿ ಜನವರಿಯಲ್ಲಿ ಟಿಪ್ಪರ ಹಾಗೂ ಮಿನಿ ಬಸ್ ನಡುವೆ ಭೀಕರ್ ರಸ್ತೆ ಅಪಘಾತ ಸಂಭವಿಸಿ, ದಾವಣಗೆರೆಯ ಮೂಲದ 11 ಜನರು ಪ್ರಾಣ ಕಳೆಕೊಂಡಿರುವುದನ್ನು ಇಲ್ಲಿ ಸ್ಮರಿಸಬಹುದಾಗಿದೆ.
