ಹಾಲಕ್ಕಿ ಸಮಾಜವನ್ನು ಪರಿಶಿಷ್ಟ ಪಂಗಡಕ್ಕೆ ಸೇರ್ಪಡೆ ಮಾಡದಿದ್ದರೆ ಪದ್ಮಶ್ರೀ ಪ್ರಶಸ್ತಿ ಮರಳಿಸುವೆ: ಸುಕ್ರಿ ಬೊಮ್ಮು ಗೌಡ

ಕಾರವಾರ : ಉತ್ತರ ಕನ್ನಡ ಜಿಲ್ಲೆಯಲ್ಲಿ ಮಾತ್ರ ಸೀಮಿತವಾಗಿರುವ ಬುಡಕಟ್ಟು ಜನಾಂಗವಾದ ಹಾಲಕ್ಕಿ ಸಮುದಾಯವನ್ನು ಕೇಂದ್ರ ಸರ್ಕಾರ ಪರಿಶಿಷ್ಟ ಪಂಗಡಕ್ಕೆ ಸೇರಿಸದಿದ್ದರೆ ಕೇಂದ್ರ ಸರ್ಕಾರ ತನಗೆ ನೀಡಿದ ಪದ್ಮಶ್ರೀ ಪ್ರಶಸ್ತಿಯನ್ನು ಮರಳಿ ನೀಡುವುದಾಗಿ ಜಾನಪದ ಕೋಗಿಲೆ ಸುಕ್ರಿ ಬೊಮ್ಮು ಗೌಡ ಅವರು ನಿರ್ಧಾರ ಮಾಡಿದ್ದು, ತಮ್ಮ ಜನಾಂಗದ ಹಕ್ಕಿಗಾಗಿ ವಿಧಾನಸೌಧದಲ್ಲಿ ಪ್ರತಿಭಟನೆ ಕೂರುವ ಎಚ್ಚರಿಕೆ ನೀಡಿದ್ದಾರೆ.
ಈ ಕುರಿತು ಮಾಧ್ಯಮದವರ ಜೊತೆ ಮಾತನಾಡಿದ ಅವರು, ಉತ್ತರ ಕನ್ನಡ ಜಿಲ್ಲೆಗೆ ಮಾತ್ರ ಸೀಮಿತವಾಗಿರುವ ಕಾಡನ್ನು ನಂಬಿ ಬದುಕು ಕಟ್ಟಿಕೊಂಡ ಹಾಲಕ್ಕಿ ಜನಾಂಗ ಈ ವರೆಗೂ ಸಂಕಷ್ಟದಲ್ಲಿದೆ. ನಮ್ಮಲ್ಲಿ ಶಿಕ್ಷಣ ಪಡೆದವರು ಕಡಿಮೆ ಸಂಖ್ಯೆಯಲ್ಲಿದ್ದಾರೆ.ಅವರಿಗೆ ಉತ್ತಮ ಕೆಲಸ ಸಹ ಇಲ್ಲ. ಹೀಗಿರುವಾಗ ಕಳೆದ 20 ವರ್ಷದಿಂದ ನಮ್ಮ ಜನಾಂಗವನ್ನು ಪರಿಶಿಷ್ಟ ಪಂಗಡಕ್ಕೆ ಸೇರಿಸಬೇಕು ಎಂಬ ಹೋರಾಟ ನಡೆಯುತ್ತಲೇ ಇದೆ.
ಈ ಕುರಿತು ಕೇಂದ್ರ ಸರ್ಕಾರ ಈವರೆಗೂ ತೀರ್ಮಾನ ತೆಗೆದುಕೊಂಡಿಲ್ಲ. ಹೀಗಿರುವಾಗ ಉಪಯೋಗಕ್ಕೆ ಬಾರದ ಈ ಪ್ರಶಸ್ತಿಯನ್ನು ಇಟ್ಟುಕೊಂಡು ಏನು ಮಾಡಲಿ. ನಮ್ಮ ಜನರಿಗೆ ಸಿಗಬೇಕಾದ ಹಕ್ಕು ಸಿಗದಿದ್ದರೆ ನಾನು ಇದ್ದು ಏನು ಪ್ರಯೋಜನ. ಹೀಗಾಗಿ ಈ ನಿರ್ಧಾರಕ್ಕೆ ಬಂದಿದ್ದೇನೆ. ಪರಿಶಿಷ್ಟ ಪಂಗಡಕ್ಕೆ ಸೇರಿಸದಿದ್ದರೆ ವಿಧಾನಸೌದಕ್ಕೆ ತೆರಳಿ ಪ್ರತಿಭಟನೆ ಮಾಡುವುದಾಗಿ ಅವರು ಎಚ್ಚರಿಕೆ ನೀಡಿದ್ದಾರೆ.
