ಝೀಕಾ ಸೋಂಕಿನ ಬಗ್ಗೆ ಮುನ್ನೆಚ್ಚರಿಕೆ ವಹಿಸಿ: ಉ.ಕ ಜಿಲ್ಲಾಧಿಕಾರಿ

ಕಾರವಾರ : ಕೇರಳದಲ್ಲಿ ಈಗಾಗಲೇ ಝೀಕಾ ವೈರಸ್ ಸೋಂಕಿನ ಪ್ರಕರಣಗಳು ಕಂಡುಬಂದಿರುವ ಹಿನ್ನೆಲೆಯಲ್ಲಿ ಉತ್ತರ ಕನ್ನಡ ಜಿಲ್ಲೆಯಲ್ಲೂ ಈ ಸೋಂಕಿನ ಬಗ್ಗೆ ಎಲ್ಲಾ ರೀತಿಯ ಮುಂಜಾಗೃತಾ ಕ್ರಮ ವಹಿಸಬೇಕಾಗಿದೆ ಎಂದು ಜಿಲ್ಲಾಧಿಕಾರಿ ಮುಲ್ಲೈ ಮುಗಿಲನ್ ಹೇಳಿದರು.
ಜಿಲ್ಲಾಧಿಕಾರಿ ಕಛೇರಿ ನ್ಯಾಯಾಲಯ ಸಭಾಂಗಣದಲ್ಲಿ ನಡೆದ ಅಂತರ್ ಇಲಾಖಾ ಸಮನ್ವಯ ಸಮಿತಿ ಸಭೆಯಲ್ಲಿ ಅಧಿಕಾರಿ ಮತ್ತು ಸಿಬ್ಬಂದಿಯೊಂದಿಗೆ ಝೀಕಾ ವೈರಸ್ ರೋಗ ಹಾಗೂ ಇತರೆ ಸಾಂಕ್ರಾಮಿಕ ರೋಗ ತಡೆಗಟ್ಟುವಿಕೆ ಕುರಿತು ಸಭೆ ನಡೆಸಿ ಮಾತನಾಡಿದರು. ಎಲ್ಲಾ ಇಲಾಖೆಗಳು ಸಮನ್ವಯ ಸಾಧಿಸಿ ಸಾಂಕ್ರಾಮಿಕ ರೋಗಗಳನ್ನು ತಡೆಗಟ್ಟಬೇಕು.ಇದಕ್ಕಾಗಿ ಕ್ರಿಯಾಯೋಜನೆ ತಯಾರು ಮಾಡಿ ಯಾವುದೇ ರೀತಿಯಲ್ಲಿ ಯಾವುದೇ ರೋಗಗಳು ಉಲ್ಬಣಗೊಳ್ಳದಂತೆ ನೋಡಿಕೊಳ್ಳುವ ಕಾರ್ಯವಾಗಬೇಕೆಂದು ಸೂಚಿಸಿದರು.
ರೋಗವಾಹಕ ಆಶ್ರಿತ ರೋಗಗಳ ನಿಯಂತ್ರಣಾಧಿಕಾರಿ ಡಾ.ರಮೇಶ ರಾವ್ ಅವರು ಮಾತನಾಡಿ, ಇದುವರೆಗೂ ಜಿಲ್ಲೆಯಲ್ಲಿ ಯಾವುದೇ ಝೀಕಾ ವೈರಸ್ ಸೋಂಕು ಕಂಡು ಬಂದಿರುವುದಿಲ್ಲ. ಝೀಕಾ ವೈರಸ್ ಕಾಯಿಲೆ ಒಂದು ಸಾಂಕ್ರಾಮಿಕ ಕಾಯಿಲೆಯಾಗಿದ್ದು, ಡೆಂಗ್ಯೂ ಹಾಗೂ ಚಿಕನ್ಗುನ್ಯಾ ರೋಗಗಳನ್ನುಂಟು ಮಾಡುವ ಪ್ಲೇವಿ ವೈರಸ್ ರೋಗಾಣುವಿನ ಈಡೀಸ್ ಈಜಿಪ್ಟ್ ಸೊಳ್ಳೆಯ ಕಚ್ಚುವಿಕೆಯಿಂದ ಒಬ್ಬರಿಂದ ಇನ್ನೊಬ್ಬರಿಗೆ ಹರಡುತ್ತದೆ. ಈ ಸೊಳ್ಳೆಯು ಸಾಮಾನ್ಯವಾಗಿ ಹಗಲು ಹೊತ್ತಿನಲ್ಲಿ ಮನುಷ್ಯರನ್ನು ಕಚ್ಚುತ್ತದೆ. ಇದರಿಂದ ಇದ್ದಕ್ಕಿದ್ದಂತೆ ತೀವ್ರಜ್ವರ, ವಿಪರೀತ ತಲೆನೋವು, ಕಣ್ಣುಗಳ ಹಿಂಭಾಗ, ಮಾಂಸಖಂಡ ಮತ್ತು ಕೀಲುಗಳಲ್ಲಿ ವಿಪರೀತ ನೋವು ಕಾಣಸಿಕೊಳ್ಳುವುದು ಈ ರೋಗದ ಪ್ರಮುಖ ಲಕ್ಷಣಗಳಾಗಿರುತ್ತವೆ ಎಂದರು.




