
ವಾರ್ಧಾ: ಸೇತುವೆ ಮೇಲಿಂದ ಕಾರು ಪಲ್ಟಿಯಾಗಿ ಏಳು ಮೆಡಿಕಲ್ ವಿದ್ಯಾರ್ಥಿಗಳು ಮೃತಪಟ್ಟಿರುವ ಘಟನೆ ಮಹಾರಾಷ್ಟ್ರದ ವಾರ್ಧಾ-ಯವತ್ಮಾಲ್ ಹೆದ್ದಾರಿಯಲ್ಲಿ ನಡೆದಿದೆ.
ಸೋಮವಾರ ರಾತ್ರಿ 1.30ರ ಸುಮಾರಿಗೆ ಸೆಲ್ಸುರಾ ಪ್ರದೇಶದಲ್ಲಿ ದಿಯೋಲಿಯಿಂದ ವಾರ್ಧಾ ಕಡೆಗೆ ಬರುತ್ತಿದ್ದ ಝೈಲೋ ಕಾರು ಸೇತುವೆಯಿಂದ ಕೆಳಗೆ ಬಿದ್ದಿದೆ. ಪರಿಣಾಮ ಗೊಂಡಿಯಾ ಜಿಲ್ಲೆಯ ತಿರೋಡಾ ಶಾಸಕ ವಿಜಯ್ ರಹಂಗ್ಡೇಲ್ ಅವರ ಪುತ್ರ ಆವಿಷ್ಕರ್ ಸೇರಿ ಒಟ್ಟು ಏಳು ವಿದ್ಯಾರ್ಥಿಗಳು ಮೃತಪಟ್ಟಿದ್ದಾರೆ. ಮೃತ ವಿದ್ಯಾರ್ಥಿಗಳು ಸಾವಂಗಿಯ ವೈದ್ಯಕೀಯ ಕಾಲೇಜಿನ ವಿದ್ಯಾರ್ಥಿಗಳು ಎಂದು ಪ್ರಾಥಮಿಕ ತನಿಖೆಯಿಂದ ತಿಳಿದು ಬಂದಿದೆ.
ಮೃತ ವೈದ್ಯ ವಿದ್ಯಾರ್ಥಿಗಳು ವೈದ್ಯಕೀಯ ಕೋರ್ಸ್ಗಳಿಗಾಗಿ ದೇಶದ ವಿವಿಧ ಭಾಗಗಳಿಂದ ಬಂದಿದ್ದು ಮೃತರನ್ನ ನೀರಜ್ ಚೌಹಾನ್, ನಿತೇಶ್ ಸಿಂಗ್, ವಿವೇಕ್ ನಂದನ್, ಪ್ರತ್ಯೂಷ್ ಸಿಂಗ್, ಶುಭಂ ಜೈಸ್ವಾಲ್ ಹಾಗೂ ಪವನ್ ಶಕ್ತಿ ಎಂದು ಗುರುತಿಸಲಾಗಿದೆ.
2 ಲಕ್ಷ ಪರಿಹಾರ ಘೋಷಣೆ
ಘಟನೆಗೆ ತೀವ್ರ ಸಂತಾಪ ಸೂಚಿಸಿದ ಪ್ರಧಾನಿ ನರೇಂದ್ರ ಮೋದಿ ಮೃತರ ಕುಟುಂಬಗಳಿಗೆ ತಲಾ 2 ಲಕ್ಷ ಪರಿಹಾರ ಘೋಷಣೆ ಮಾಡಿದ್ದಾರೆ. ಅಲ್ಲದೆ ಗಾಯಾಳುಗಳಿಗೆ 50 ಸಾವಿರ ಪರಿಹಾರ ನೀಡುವುದಾಗಿ ಘೋಷಿಸಿದ್ದಾರೆ.
ಸುದ್ದಿ ತಿಳಿಯುತ್ತಿದ್ದಂಗೆ ಸ್ಥಳಕ್ಕೆ ದೌಡಾಯಿಸಿದ ಪೊಲೀಸರು ಪರಿಶೀಲನೆ ನಡೆಸಿ ಮೃತದೇಹಗಳನ್ನ ಮರಣೋತ್ತರ ಪರೀಕ್ಷೆಗಾಗಿ ಸರ್ಕಾರಿ ಆಸ್ಪತ್ರೆಗೆ ರವಾನಿಸಿದ್ದಾರೆ. ಶವಗಾರದ ಬಳಿಕ ಮೃತರ ಕುಟುಂಬಸ್ಥರ ರೋದನೆ ಮುಗಿಲು ಮುಟ್ಟಿದ್ದು ಘಟನೆ ಕುರಿತು ಪ್ರಕರಣ ದಾಖಲಿಸಿಕೊಂಡಿರುವ ಪೊಲೀಸರು ತನಿಖೆ ಕೈಗೊಂಡಿದ್ದಾರೆ.



