
ಬೆಂಗಳೂರು: ಧಾರ್ಮಿಕ ಸ್ವಾತಂತ್ರ್ಯದ ವಿಚಾರದಲ್ಲಿ ಭಾರತೀಯ ಪ್ರಜೆಗಳಿಗೆ ಸಂವಿಧಾನವು ಮುಕ್ತ ಅವಕಾಶ ನೀಡಿದೆ. ಹೀಗಿರುವಾಗ ಕ್ರೈಸ್ತ ಸಮುದಾಯವನ್ನು ಗುರಿಯಾಗಿಸಿಕೊಂಡು ಮತಾಂತರ ನಿಷೇಧ ಕಾಯ್ದೆ ಜಾರಿಗೊಳಿಸಲು ಮುಂದಾಗಿರುವ ರಾಜ್ಯ ಸರ್ಕಾರದ ನಡೆ ಸಂವಿಧಾನ ವಿರೋಧಿಯಾಗಿದೆ ಎಂದು ಕರ್ನಾಟಕ ಪ್ರಾಂತೀಯ ಕ್ಯಾಥೊಲಿಕ್ ಧರ್ಮಾಧ್ಯಕ್ಷ ಮಂಡಳಿ ಅಧ್ಯಕ್ಷ ಆರ್ಚ್ ಬಿಶಪ್ ಡಾ.ಪೀಟರ್ ಮಚಾದೋ ಹೇಳಿದ್ದಾರೆ.
ಸುದ್ದಿಗೋಷ್ಠಿಯಲ್ಲಿ ಅವರು ಮಾತನಾಡಿದ ಅವರು, ನಮ್ಮ ಶಾಲೆ, ಕಾಲೇಜು ಹಾಗೂ ಶೈಕ್ಷಣಿಕ ಸಂಸ್ಥೆಗಳು ಮತಾಂತರ ಮಾಡುವ ಕೇಂದ್ರಗಳಲ್ಲ. ಬಲವಂತದ ಹಾಗೂ ಆಮಿಷಗಳಿಂದ ಮತಾಂತರವನ್ನು ನಾವು ಬಲವಾಗಿ ವಿರೋಧಿಸುತ್ತೇವೆ. ತಪ್ಪು ಮಾಡಿದವರಿಗೆ ಶಿಕ್ಷೆ ವಿಧಿಸಲು ಸಂವಿಧಾನದಲ್ಲಿ ಹಲವು ರೀತಿಯ ಕಾಯ್ದೆಗಳಿವೆ. ಭಾರತೀಯ ದಂಡ ಸಂಹಿತೆ(ಐಪಿಸಿ)ಯೂಇದೆ. ಹೀಗಿರುವಾಗ ಕ್ರೈಸ್ತರನ್ನು ಗುರಿಯಾಗಿಸಿ ಪ್ರತ್ಯೇಕ ಕಾಯ್ದೆ ತರುವ ಔಚಿತ್ಯವಾದರೂ ಏನು ಎಂದು ಪ್ರಶ್ನಿಸಿದರು.
ರಾಜ್ಯದಲ್ಲಿ ನೈತಿಕ ಪೊಲೀಸ್ ಗಿರಿ ಪ್ರಕರಣಗಳು ಹೆಚ್ಚಾಗುತ್ತಿವೆ. ಅಲ್ಪಸಂಖ್ಯಾತರ ಮೇಲೆ ದಾಳಿ ಹಾಗೂ ಹಲ್ಲೆಗಳು ಅಧಿಕವಾಗುತ್ತಿವೆ. ಇನ್ನು ಮತಾಂತರ ನಿಷೇಧ ಕಾಯ್ದೆ ಜಾರಿಯಾದರೆ ಅಂತಹ ದಾಳಿಕೋರರಿಗೆ ಇನ್ನೂ ಹೆಚ್ಚಿನ ಅವಕಾಶ ಮಾಡಿಕೊಟ್ಟಂತಾಗುತ್ತದೆ. ಆದ್ದರಿಂದ ಸರ್ಕಾರ ಮತಾಂತರ ನಿಷೇಧ ಕಾಯ್ದೆ ಜಾರಿಗೊಳಿಸುವ ಚಿಂತನೆಯನ್ನು ಕೈಬಿಡಬೇಕು ಎಂದು ಆಗ್ರಹಿಸಿದ್ದಾರೆ.
ಮಾಜಿ ರಾಜ್ಯಪಾಲೆ ಮಾರ್ಗರೇಟ್ ಆಳ್ವ ಮಾತನಾಡಿ, ಸ್ವಾತಂತ್ರ್ಯ ಪೂರ್ವದಲ್ಲಿ ಬ್ರಿಟೀಷರು ಬರೋಬ್ಬರಿ ಎರಡು ಶತಮಾನಗಳ ಕಾಲ ವರ್ಷ ಆಳ್ವಿಕೆ ನಡೆಸಿದರು. ಆದರೆ ಕ್ರೈಸ್ತರ ಜನಸಂಖ್ಯೆ ಬೆಳೆದಿಲ್ಲ. ಕ್ರೈಸ್ತರು ಬಲವಂತದ ಮತಾಂತರ ಮಾಡಲಾರರು ಎಂಬುದಕ್ಕೆ ಇದು ಉದಾಹರಣೆಯಾಗಿದೆ ಎಂದರು.



