
ಬೆಂಗಳೂರು: ರಾಜ್ಯದಲ್ಲಿ ಬಿಟ್ ಕಾಯಿನ್ ಹಗರಣ ಬೆಳಕಿಗೆ ಬಂದ ನಂತರ ಕಾಂಗ್ರೆಸ್ ಮತ್ತು ಬಿಜೆಪಿ ನಾಯಕರ ನಡುವಿನ ಆರೋಪ ಮತ್ತು ಪ್ರತ್ಯಾರೋಪ ತಾರಕಕ್ಕೆ ಮುಟ್ಟಿದೆ.
ಪ್ರಮುಖವಾಗಿ ಕಾಂಗ್ರೆಸ್ ಪ್ರಿಯಾಂಕ್ ಖರ್ಗೆ ಹಗರಣದಲ್ಲಿ ಬಿಜೆಪಿ ಸರ್ಕಾರದ ಪಾತ್ರವನ್ನು ಎಳೆ ಎಳೆಯಾಗಿ ಬಿಡಿಸಿ ಬಹಿರಂಗಪಡಿಸುವ ಪ್ರಯತ್ನ ಮಾಡಿದ್ದಾರೆ. ಸಾಕಷ್ಟು ದಾಖಲಾತಿಗಳನ್ನು ಸಂಗ್ರಹ ಮಾಡಿ ಬೆಳಕು ಚೆಲ್ಲುವ ಪ್ರಯತ್ನ ಮಾಡಿದ್ದಾರೆ.
ಈ ನಡುವೆ ತಮ್ಮ ವಿರುದ್ಧ ಸತ್ಯಕ್ಕೆ ದೂರವಾದ ಮತ್ತು ದುರುದ್ದೇಶದ ಆರೋಪ ಮಾಡಿರುವ ಕಾರಣಕ್ಕಾಗಿ ಬಿಜೆಪಿ ವಕ್ತಾರ ಗಣೇಶ್ ಕಾರ್ಣಿಕ್ ಅವರಿಗೆ ಲೀಗಲ್ ನೋಟಿಸ್ ಜಾರಿ ಮಾಡಿರುವುದಾಗಿ ಪ್ರಿಯಾಂಕ್ ಖರ್ಗೆ ಟ್ವೀಟ್ ಮೂಲಕ ಹೇಳಿದ್ದಾರೆ.
ಸುಳ್ಳು ಹೇಳುವ ಮೂಲಕ ಬಿಜೆಪಿ ನಾಯಕರು ನನ್ನ ಬಾಯಿ ಮುಚ್ಚಿಸಲು ಸಾಧ್ಯವಿಲ್ಲ. ಇಂತಹ ಗೊಡ್ಡು ಬೆದರಿಕೆಗೆ ತಾವು ಹೆದರುವುದಿಲ್ಲ ಎಂದು ಪ್ರಿಯಾಂಕ್ ಖರ್ಗೆ ಟ್ವೀಟ್ ಮೂಲಕ ಬಿಜೆಪಿಯ ನಾಯಕರಿಗೆ ತಿರುಗೇಟು ಕೊಟ್ಟಿದ್ದಾರೆ.
ಪ್ರತಿ ಸಲವೂ ಇಲ್ಲ ಸಲ್ಲದ ಕುಂಟುನೆಪಗಳನ್ನು ಹೇಳಿಕೊಂಡು ಆರೋಪದಿಂದ ತಪ್ಪಿಸಿಕೊಂಡು ಪಲಾಯನ ಮಾಡುವುದು ಬಿಜೆಪಿ ನಾಯಕರಿಗೆ ಚಾಳಿಯಾಗಿದೆ. ಆದರೆ ಇದು ಅವರಿಗೆ ತಿರುಗುಬಾಣವಾಗಲಿದೆ ಎಂದು ಪ್ರಿಯಾಂಕ್ ಖರ್ಗೆ ಹೇಳಿದ್ದಾರೆ.



