Goa Elections: ಬಿಜೆಪಿಗೆ ಗುಡ್ ಬೈ ಹೇಳಲು ಗೋವಾ ಮಾಜಿ ಸಿಎಂ ಲಕ್ಷ್ಮೀಕಾಂತ್ ಪರ್ಸೇಕರ್ ನಿರ್ಧಾರ

ಪಣಜಿ : ಗೋವಾ ವಿಧಾನಸಭಾ ಚುನಾವಣೆಗೂ ಮುನ್ನ ಬಿಜೆಪಿಗೆ ಭಾರೀ ಹಿನ್ನಡೆಯಾಗಲಿದೆ. ಬಿಜೆಪಿಗೆ ರಾಜೀನಾಮೆ ನೀಡುವುದಾಗಿ ಮಾಜಿ ಮುಖ್ಯಮಂತ್ರಿ ಲಕ್ಷ್ಮೀಕಾಂತ್ ಪರ್ಸೇಕರ್ ಘೋಷಿಸಿದ್ದಾರೆ.
ಒಂದು ವಾರದಲ್ಲಿ ಇಬ್ಬರು ಪ್ರಮುಖ ಬಿಜೆಪಿ ನಾಯಕರು ಪಕ್ಷ ತೊರೆದಿರುವುದು ಪಕ್ಷಕ್ಕೆ ದೊಡ್ಡ ನಷ್ಟ ಎಂದು ಪರಿಗಣಿಸಲಾಗಿದೆ. ಇಬ್ಬರೂ ನಾಯಕರಿಗೆ ಅವರ ಸಾಂಪ್ರದಾಯಿಕ ಕ್ಷೇತ್ರದಿಂದ ಬಿಜೆಪಿ ಟಿಕೆಟ್ ನೀಡಿಲ್ಲ ಎಂಬುವುದೇ ಇದಕ್ಕೆ ಕಾರಣ. ಹೀಗಾಗಿ ಇವರಿಬ್ಬರೂ ಬಿಜೆಪಿಯಿಂದ ದೂರ ಸರಿದಿದ್ದಾರೆ.
ಈ ಹಿಂದೆ ಮಾಜಿ ಮುಖ್ಯಮಂತ್ರಿ ದಿವಂಗತ ಮನೋಹರ್ ಪರಿಕ್ಕರ್ ಅವರ ಪುತ್ರ ಉತ್ಪಲ್ ಪರಿಕ್ಕರ್ ಕೂಡ ಬಿಜೆಪಿಗೆ ರಾಜೀನಾಮೆ ನೀಡಿದ್ದರು. ಲಕ್ಷ್ಮೀಕಾಂತ್ ಪರ್ಸೇಕರ್ ಅವರು ತಮ್ಮ ಸಾಂಪ್ರದಾಯಿಕ ಕ್ಷೇತ್ರವಾದ ಮಾಂಡ್ರೆಮ್ನಿಂದ ಈ ಬಾರಿಯೂ ಸ್ಪರ್ಧಿಸಲು ಬಯಸಿದ್ದರು, ಆದರೆ ಪಕ್ಷವು ಅವರ ಬದಲು ಇನ್ನೊಬ್ಬರಿಗೆ ಟಿಕೆಟ್ ನೀಡಿದೆ.
ಗೋವಾದಲ್ಲಿ ಫೆಬ್ರವರಿ 14 ರಂದು ಒಂದೇ ಹಂತದಲ್ಲಿ 40 ಕ್ಷೇತ್ರಗಳಲ್ಲಿ ವಿಧಾನಸಭೆ ಚುನಾವಣೆ ನಡೆಯಲಿದೆ. ಮಾರ್ಚ್ 10 ರಂದು ಫಲಿತಾಂಶ ಪ್ರಕಟವಾಗಲಿದೆ.
