
ಬೆಳಗಾವಿ: ವಿಧಾನ ಪರಿಷತ್ ನಲ್ಲಿ ಬಿಜೆಪಿಗೆ ಈಗ ಸ್ಪಷ್ಟ ಬಹುಮತ ದಕ್ಕಿದೆ. ನಮಗೆ ಬಹುಮತ ಸಿಕ್ಕಿದ್ದರೂ ಜೆಡಿಎಸ್ ಪಕ್ಷವನ್ನು ನಿರ್ಲಕ್ಷಿಸುವುದಿಲ್ಲ ಎಂದು ಮಾಜಿ ಮುಖ್ಯಮಂತ್ರಿ ಹಾಗೂ ಬಿಜೆಪಿ ನಾಯಕ ಬಿ.ಎಸ್.ಯಡಿಯೂರಪ್ಪ ಹೇಳಿದ್ದಾರೆ.
ಸುವರ್ಣಸೌಧದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಚುನಾವಣೆಯಲ್ಲಿ ಬಿಜೆಪಿ 20 ಸ್ಥಾನಗಳಿಗೆ ಸ್ಪರ್ಧಿಸಿತ್ತು. ಕನಿಷ್ಠ 15 ಸ್ಥಾನ ಗೆಲ್ಲುವ ವಿಶ್ವಾಸವಿತ್ತು. ತುಮಕೂರು ಮತ್ತು ಬೆಳಗಾವಿ ಜಿಲ್ಲೆಗಳಲ್ಲಿ ನಿರೀಕ್ಷಿತ ಫಲಿತಾಂಶ ಬರದೇ ನಿರೀಕ್ಷೆ ಹುಸಿಯಾಗಿದೆ ಎಂದರು.
ಬಿಜೆಪಿಯನ್ನು ಬೆಂಬಲಿಸಿದ ಚುನಾಯಿತ ಪ್ರತಿನಿಧಿಗಳಿಗೆ ಅವರು ಅಭಿನಂದನೆ ಸಲ್ಲಿಸಿದರು.
ಮಾಜಿ ಸಿಎಂ ಜಗದೀಶ್ ಶೆಟ್ಟರ್, ಅತಿ ಹೆಚ್ಚು ಸ್ಥಾನಗಳಲ್ಲಿ ಬಿಜೆಪಿ ಗೆದ್ದಿದೆ. ಚುನಾವಣೆಯಲ್ಲಿ ಧಾರವಾಡ ಕ್ಷೇತ್ರದಿಂದ ಸ್ಪರ್ಧಿಸಿದ್ದ ತಮ್ಮ ಸೋದರ ಪ್ರದೀಪ್ ಶೆಟ್ಟರ್ ಕೂಡ ಗೆದ್ದಿದ್ದಾರೆ. ಬೆಂಬಲಿಸಿದ ಮತದಾರರಿಗೆ ಧನ್ಯವಾದಗಳು ಎಂದರು.
ಕಳೆದ ಬಾರಿ ಕೇವಲ 6 ಸ್ಥಾನಗಳಲ್ಲಿ ಗೆದ್ದಿದ್ದೆವು. ಈ ಬಾರಿ ಹೆಚ್ಚುವರಿಯಾಗಿ ಆರು ಸ್ಥಾನಗಳನ್ನು ಪಡೆದುಕೊಂಡಿದ್ದೇವೆ. ಜನರ ಬೆಂಬಲ ನಮಗೆ ಸಿಕ್ಕಿದೆ. ಮೈಸೂರಿನಲ್ಲಿಯೂ ಜನರು ನಮ್ಮನ್ನು ಆಶೀರ್ವದಿಸಿದ್ದಾರೆ ಎಂದು ಹೇಳಿದರು.
ಬೆಳಗಾವಿ ಸೋಲು ಕುರಿತು ಪರಾಮರ್ಶೆ
ಪಕ್ಷವು ಇಡೀ ರಾಜ್ಯದಲ್ಲಿ ಮುಂಚೂಣಿಯಲ್ಲಿದೆ. ಬೆಳಗಾವಿಯಲ್ಲಿ ನಮಗೆ ಹಿನ್ನಡೆಯಾಗಿರುವ ಅಂಶವನ್ನು ಪಕ್ಷದ ವೇದಿಕೆಯಲ್ಲಿ ಚರ್ಚಿಸಿ, ಪರಾಮರ್ಶಿಸುತ್ತೇವೆ ಎಂದೂ ಶೆಟ್ಟರ್ ಹೇಳಿದರು.
ಕಾಂಗ್ರೆಸ್ನವರು ಮುಂದಿನ ಚುನಾವಣೆ ಗೆಲ್ಲುವ ಕನಸಿನಲ್ಲಿದ್ದಾರೆ. ಪರಿಷತ್ ಚುನಾವಣೆ ಫಲಿತಾಂಶ ಅವರ ಸ್ಥಿತಿ ತೋರಿಸುತ್ತದೆ ಎಂದು ಅಭಿಪ್ರಾಯಪಟ್ಟರು.



