ಆಗೋ ಪೂಜೆ ಆಗುತ್ತಿರಲಿ ಊದೋ ಶಂಖ ಊದಿ ಬಿಡುವ ಎನ್ನುವಂತಿದೆ ಬಿಜೆಪಿಯ ಆಡಳಿತ ವೈಖರಿ: ಪ್ರಿಯಾಂಕ್ ಖರ್ಗೆ

ಕಲಬುರ್ಗಿ: ಮೊನ್ನೆ ಉಪಚುನಾವಣೆ ಸಂದರ್ಭದಲ್ಲಿ ಕಂಬಳಿ ಹೊದ್ದು ಚುನಾವಣಾ ಪ್ರಚಾರ ನಡೆಸಿದ್ದ ಮುಖ್ಯಮಂತ್ರಿಗಳು, ಇಂದು ಅದೇ ಕಂಬಳಿಯ ಮರೆಯಲ್ಲಿ 29 ವರ್ಷಗಳ ಹಿಂದೆ ಸ್ಥಾಪಿಸಿದ್ದ “ದೇವರಾಜ ಅರಸು ಸಂಶೋಧನಾ ಸಂಸ್ಥೆಯನ್ನೇ” ಮುಚ್ಚಲು ಮುಂದಾಗಿದ್ದಾರೆ. ಬಹುಶಃ ಮುಖ್ಯಮಂತ್ರಿಯಾಗಿ 100 ದಿನಗಳನ್ನು ಪೂರೈಸಿದ ಹಿನ್ನೆಲೆಯಲ್ಲಿ ಹಿಂದುಳಿದ ವರ್ಗಗಳಿಗೆ ಈ ಕೊಡುಗೆ ನೀಡಿದ್ದಾರೆ ಎನಿಸುತ್ತಿದೆ ಅಂತ ಕೆಪಿಸಿಸಿ ವಕ್ತಾರ ಪ್ರಿಯಾಂಕ್ ಖರ್ಗೆ ವಾಗ್ದಾಳಿ ನಡೆಸಿದ್ದಾರೆ.
ಹಿಂದುಳಿದ ಸಮುದಾಯಗಳ ಕುಲಶಾಸ್ತ್ರೀಯ ಅಧ್ಯಯನ, ಶೈಕ್ಷಣಿಕ, ಸಾಮಾಜಿಕ, ಔದ್ಯೋಗಿಕ ಹಾಗೂ ಆರ್ಥಿಕ ಸ್ಥಿತಿಗತಿಗಳ ಅಧ್ಯಯನಕ್ಕೆ ಅನುಕೂಲವಾಗುವ ನಿಟ್ಟಿನಲ್ಲಿ ಸ್ಥಾಪಿಸಿದ್ದ ಸಂಸ್ಥೆಯನ್ನೇ ನಿರ್ನಾಮ ಮಾಡುವ ಮೂಲಕ ಹಿಂದುಳಿದ ಜನರ ಬೆನ್ನಿಗೆ ಬಿಜೆಪಿ ಸರ್ಕಾರ ಚೂರಿ ಇರಿದಿದೆ. ಈ ಮೂಲಕ ಬಿಜೆಪಿ ಪಕ್ಷವು, ಹಿಂದುಳಿದ ವರ್ಗಗಳ ವಿರೋಧಿ ಎಂಬುದು ಮತ್ತೊಮ್ಮೆ ಸಾಬೀತುಪಡಿಸಿದೆ ಎಂದಿದ್ದಾರೆ.
ಈ ವಿಚಾರವಾಗಿ ನಿನ್ನೆ ಮುಖ್ಯಮಂತ್ರಿಗಳು ಹಾಗೂ ಸಮಾಜ ಕಲ್ಯಾಣ ಇಲಾಖೆಯ ಸಚಿವರಿಗೆ ಪತ್ರ ಬರೆದಿದ್ದು, ದೇವರಾಜ ಅರಸು ಸಂಶೋಧನಾ ಸಂಸ್ಥೆಯನ್ನು ಮುಚ್ಚುವ ನಿರ್ಧಾರವನ್ನು ಕೈಬಿಟ್ಟು, ಈ ಸಂಸ್ಥೆಯನ್ನು ಬಳಸಿಕೊಂಡು ಹಿಂದುಳಿದ ವರ್ಗಗಳ ಅಭಿವೃದಿಗೆ ಗಮನಹರಿಸಬೇಕೆಂದು ಆಗ್ರಹಿಸಿದ್ದಾರೆ.



