ಸಿದ್ದರಾಮಯ್ಯ ಕೋಲಾರ ಕ್ಷೇತ್ರದಿಂದ ಸ್ಪರ್ಧಿಸಿದರೆ ಒಂದು ಲಕ್ಷ ಮತಗಳ ಅಂತರದಿಂದ ಗೆಲ್ಲಿಸುತ್ತೇವೆ: ಕೆ.ವೈ ನಂಜೇಗೌಡ

ಕೋಲಾರ : ಮುಂಬರುವ ರಾಜ್ಯ ವಿಧಾನಸಭಾ ಚುನಾವಣೆಯಲ್ಲಿ ವಿಪಕ್ಷ ನಾಯಕ ಸಿದ್ದರಾಮಯ್ಯ ಕೋಲಾರ ಕ್ಷೇತ್ರದಿಂದ ಸ್ಪರ್ಧೆ ಮಾಡಿದರೆ ಒಂದು ಲಕ್ಷ ಮತಗಳ ಅಂತರದಿಂದ ಗೆಲ್ಲಿಸಿಕೊಡುವುದಾಗಿ ಮಾಲೂರು ಶಾಸಕ ಕೆ.ವೈ.ನಂಜೇಗೌಡ ಹೇಳಿದ್ದಾರೆ.
ಮಾಧ್ಯಮಗಳೊಂದಿಗೆ ಮಾತನಾಡಿದ ಅವರು, ಸಿದ್ದರಾಮಯ್ಯ ಅವರು ಕೋಲಾರ ವಿಧಾನಸಭಾ ಕ್ಷೇತ್ರವನ್ನು ಆಯ್ಕೆ ಮಾಡಿಕೊಂಡರೆ ಸ್ವಾಗತ ಮಾಡುತ್ತೇವೆ. ಅವರು ಕೋಲಾರ ಕ್ಷೇತ್ರದಿಂದ ಸ್ಪರ್ಧೆ ಮಾಡಿದರೆ ಅದು ನಮ್ಮೆಲ್ಲರಿಗೂ ಅದೃಷ್ಟ, ಜಿಲ್ಲೆಯ ಎಲ್ಲಾ ಕಾಂಗ್ರೆಸ್ ಶಾಸಕರ ಬೇಡಿಕೆಯೂ ಇದೇ ಆಗಿದೆ ಎಂದರು.
ಸಿದ್ದರಾಮಯ್ಯ ಕೋಲಾರಕ್ಕೆ ಬಂದರೆ ಹಿಂದುಳಿದ ಜಿಲ್ಲೆಯಾಗಿರುವ ಕೋಲಾರ ಬದಲಾವಣೆಯಾಗಲಿದೆ, ಸ್ವಾತಂತ್ರ್ಯ ಬಂದು ಇಷ್ಟು ವರ್ಷಗಳು ಕಳೆದರೂ ಕೋಲಾರ ಜಿಲ್ಲೆ ಹಿಂದುಳಿದ ಜಿಲ್ಲೆಯಾಗಿಯೇ ಉಳಿದಿದೆ, ಹಾಗಾಗಿ ಸಿದ್ದರಾಮಯ್ಯ ಕೋಲಾರ ಕ್ಷೇತ್ರಕ್ಕೆ ಬಂದರೆ ಕಾಂಗ್ರೆಸ್ ಪಕ್ಷದವರು ಮಾತ್ರವಲ್ಲದೆ ಎಲ್ಲರೂ ಸಹ ಪಕ್ಷಾತೀತವಾಗಿ ಅಂತಹ ನಾಯಕನನ್ನು ಸ್ವಾಗತ ಮಾಡಬೇಕು ಎಂದು ತಿಳಿಸಿದರು.
ಅವರು ಚುನಾವಣೆಗೆ ಅರ್ಜಿ ಹಾಕಿ ರಾಜ್ಯವೆಲ್ಲಾ ಸುತ್ತಾಡಲಿ, ಕೋಲಾರ ಜಿಲ್ಲೆಯವರಾದ ನಾವೆಲ್ಲರೂ ಅವರನ್ನು ಒಂದು ಲಕ್ಷ ಮತಗಳ ಅಂತರದಿಂದ ಗೆಲ್ಲಿಸಿಕೊಡುತ್ತೇವೆ ಎಂದರು.
