ನಟ ಪುನೀತ್ ನಿಧನಕ್ಕೆ ದಾವಣಗೆರೆಯಲ್ಲಿ ಮಡುಗಟ್ಟಿದ ಶೋಕ: ದುಖದ ಮಡುವಿನಲ್ಲಿ ಅಪ್ಪು ಅಭಿಮಾನಿಗಳು

ದಾವಣಗೆರೆ: ಪವರ್ ಸ್ಟಾರ್ ಪುನೀತ್ ರಾಜ್ ಕುಮಾರ್ ನಿಧನ ಹಿನ್ನೆಲೆಯಲ್ಲಿ ದಾವಣಗೆರೆಯಲ್ಲಿ ಶೋಕ ಮಡುಗಟ್ಟಿದೆ. ಅಭಿಮಾನಿಗಳು ಕಣ್ಣೀರು ಸುರಿಸುತ್ತಿದ್ದಾರೆ. ನೆಚ್ಚಿನ ನಾಯಕನಿಗೆ ಶ್ರದ್ಧಾಂಜಲಿ ಅರ್ಪಿಸಲು ಫ್ಲೆಕ್ಸ್ ಅಂಗಡಿಗಳ ಮುಂದೆ ಜಮಾಯಿಸಿದ್ದಾರೆ. ನೆಚ್ಚಿನ ನಟನನ್ನು ಕಳೆದುಕೊಂಡ ಬೆಣ್ಣೆನಗರಿಯ ಅಪ್ಪು ಅಭಿಮಾನಿಗಳು ಶೋಕದ ಮಡುವಿನಲ್ಲಿದ್ದಾರೆ.
ಕನ್ನಡ ಚಿತ್ರರಂಗದ ಪ್ರಸಿದ್ದ ನಟ ಪುನೀತ್ ರಾಜ್ಕುಮಾರ್ ಅವರ ನಿಧನಕ್ಕೆ ಮಾಜಿ ಸಚಿವರು, ಹಾಲಿ ಶಾಸಕ ಡಾ ಶಾಮನೂರು ಶಿವಶಂಕರಪ್ಪ ಮತ್ತು ಮಾಜಿ ಸಚಿವ ಎಸ್. ಎಸ್ . ಮಲ್ಲಿಕಾರ್ಜುನ್, ಜಿಲ್ಲಾ ಕಾಂಗ್ರೆಸ್ ಅಧ್ಯಕ್ಷ ಹೆಚ್.ಬಿ.ಮಂಜಪ್ಪ, ಪ್ರಧಾನ ಕಾರ್ಯದರ್ಶಿ ದಿನೇಶ್ ಕೆ.ಶೆಟ್ಟಿ, ಮಹಾನಗರ ಪಾಲಿಕೆ ವಿಪಕ್ಷ ನಾಯಕ ಎ.ನಾಗರಾಜ್ ಅವರು ತೀವ್ರ ಸಂತಾಪ ವ್ಯಕ್ತಪಡಿಸಿದ್ದಾರೆ.
ಅವರ ಆತ್ಮಕ್ಕೆ ಚಿರಶಾಂತಿ ದೊರೆಯಲಿ. ಅವರ ಅಗಲಿಕೆಯಿಂದ ಈ ರಾಜ್ಯದ ಅಭಿಮಾನಿಗಳಿಗೆ, ಚಿತ್ರರಂಗದವರಿಗೆ ಮತ್ತವರ ಕುಟುಂಬ ವರ್ಗಕ್ಕೆ ಉಂಟಾಗಿರುವ ದುಃಖವನ್ನು ಭರಿಸುವ ಶಕ್ತಿಯನ್ನು ಆ ಭಗವಂತನು ನೀಡಲಿ ಎಂದು ಅವರುಗಳು ಪ್ರಾರ್ಥಿಸಿದ್ದಾರೆ.
ಕನ್ನಡಿಗರ ಪ್ರೀತಿಯ ಅಪ್ಪು, ಖ್ಯಾತ ಚಿತ್ರನಟ ಹಾಗೂ ಆತ್ಮೀಯರಾದ ಪುನೀತ್ ರಾಜ್ ಕುಮಾರ್ ಅವರ ಅಕಾಲಿಕ ನಿಧನ ದಿಗ್ಭ್ರಮೆ ಮೂಡಿಸಿದೆ.
ಪುನೀತ್ ಅವರು ಇನ್ನಿಲ್ಲ ಎಂಬುದನ್ನು ನಂಬಲಾಗುತ್ತಿಲ್ಲ. ಅಣ್ಣಾವ್ರ ಕುಟುಂಬಕ್ಕೆ, ಅವರ ಅಸಂಖ್ಯಾತ ಅಭಿಮಾನಿ ದೇವರುಗಳಿಗೆ ಈ ನೋವನ್ನು ಭರಿಸುವ ಶಕ್ತಿ ನೀಡಲಿ ಎಂದು ಪ್ರಾರ್ಥಿಸುತ್ತೇನೆ ಎಂದು ಸಂಸದ ಡಾ. ಜಿ.ಎಂ.ಸಿದ್ದೇಶ್ವರ ಸಂತಾಪ ಸೂಚಕ ಸಂದೇಶದಲ್ಲಿ ಹೇಳಿದ್ದಾರೆ.
ಇನ್ನು ಪುನೀತ್ ರಾಜ್ ಕುಮಾರ್ ನಿಧನಕ್ಕೆ ಜಿಲ್ಲಾ ಉಸ್ತುವಾರಿ ಸಚಿವರೂ ಆದ ನಗರಾಭಿವೃದ್ಧಿ ಸಚಿವ ಭೈರತಿ ಬಸವರಾಜ್ ಸಂತಾಪ ಸೂಚಿಸಿದ್ದಾರೆ. ಅತ್ಯುತ್ತಮ ನಟನನ್ನು ಕಳೆದುಕೊಂಡು ಚಿತ್ರರಂಗ ಬಡವಾಗಿದೆ ಎಂದು ಹೇಳಿದ್ದಾರೆ.



