ಕೋವಿಡ್ ನಿರ್ವಹಣೆಯಲ್ಲಿ ಸರ್ಕಾರ ವಿಫಲ: ಎಂಎಲ್ಸಿ ಎಸ್ ಎಲ್ ಬೋಜೇಗೌಡ ಟೀಕೆ

ಚಿಕ್ಕಮಗಳೂರು: ಎಲ್ಲೆಡೆ ಕೋವಿಡ್ ನಿಯಮ ಉಲ್ಲಂಘನೆಯಾಗುತ್ತಿದ್ದರೂ ಸೂಕ್ತ ಕ್ರಮ ತೆಗೆದುಕೊಳ್ಳದೇ ಸರ್ಕಾರ ಸಂಪೂರ್ಣ ವಿಫಲವಾಗಿದೆ ಎಂದು ವಿಧಾನಪರಿಷತ್ ಸದಸ್ಯ ಎಸ್ ಎಲ್ ಬೋಜೇಗೌಡ ಟೀಕಿಸಿದ್ದಾರೆ.
ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಕೆಪಿಸಿಸಿ ಅಧ್ಯಕ್ಷ ಡಿ ಕೆ ಶಿವಕುಮಾರ್ ಆರೋಗ್ಯ ತಪಾಸಣೆಗೆ ತೆರಳಿದ್ದ ಅಧಿಕಾರಿಯನ್ನು ಬೆದರಿಸಿ ಸವಾಲು ಹಾಕುವ ರೀತಿಯಲ್ಲಿ ಉದ್ಧಟತನ ಪ್ರದರ್ಶಿಸಿದ್ದರೂ ಸಹ ಸರ್ಕಾರ ಕಠಿಣ ಕ್ರಮ ತೆಗೆದುಕೊಳ್ಳದೆ ಇರುವುದು ಎಷ್ಟು ಸರಿ ಎಂದು ಪ್ರಶ್ನಿಸಿದ್ದಾರೆ.
ಅನೇಕ ಬಾರಿ ಸಚಿವರಾಗಿದ್ದು, ಉನ್ನತ ಹುದ್ದೆಯಲ್ಲಿರುವ ಡಿ ಕೆ ಶಿವಕುಮಾರ್ ಸರ್ಕಾರಕ್ಕೆ ಧಮ್ ಇದ್ದರೆ ಕ್ರಮ ತೆಗೆದುಕೊಳ್ಳಲಿ ಎಂದು ಸವಾಲು ಹಾಕಿರುವುದು ಅವರ ಪಕ್ಷ ಹಾಗೂ ವ್ಯಕ್ತಿತ್ವಕ್ಕೆ ಕಳಂಕ ಹಾಗೂ ಕಪ್ಪುಚುಕ್ಕೆಯ ಸಂಗತಿಯಾಗಿದೆ. ಕೋವಿಡ್ ನಿಯಮ ಪಾಲಿಸದೆ ಕಾನೂನಿಗೆ ಅಗೌರವ ಉಂಟಾಗುವ ರೀತಿಯಲ್ಲಿ ಮಾತನಾಡಿ, ಪಾದಯಾತ್ರೆ ನಡೆಸುತ್ತಿರುವ ಕಾಂಗ್ರೆಸ್ ಮುಖಂಡರನ್ನು ಗೃಹ ಬಂಧನಕ್ಕೆ ಒಳಪಡಿಸುವ ಮೂಲಕ ಸರ್ಕಾರ ತಾಕತ್ತು ಪ್ರದರ್ಶಿಸಬೇಕಿತ್ತು ಎಂದು ಹೇಳಿದರು.
ಮೇಕೆದಾಟು ಯೋಜನೆಯನ್ನು ಕಾಂಗ್ರೆಸ್ ಮತ್ತು ಬಿಜೆಪಿ ತನ್ನ ರಾಜಕೀಯ ಲಾಭಕ್ಕೆ ಬಳಸಿಕೊಳ್ಳುತ್ತಿದೆ. ಅಧಿಕಾರದಲ್ಲಿದ್ದಾಗ ಕಾಂಗ್ರೆಸ್ ಏನೂ ಮಾಡಲಿಲ್ಲ. ಈಗ ಅಧಿಕಾರದಲ್ಲಿರುವ ಬಿಜೆಪಿಯೂ ಏನೂ ಮಾಡುತ್ತಿಲ್ಲ ಎಂದು ಲೇವಡಿ ಮಾಡಿದರು.



